ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಶಾಲಾ-ಕಾಲೇಜುಗಳನ್ನು ತೆರೆಯದಿರಲು ಶಿಕ್ಷಣ ಇಲಾಖೆ ನಿರ್ಧರಿಸಿದ್ದು, ತಿಂಗಳಾಂತ್ಯದವರೆಗೆ ಯಥಾ ಸ್ಥಿತಿ ಮುಂದುವರಿಸಲು ಇಲಾಖೆ ತಿಳಿಸಿದೆ.
ಸೆಪ್ಟೆಂಬರ್ ಅಂತ್ಯದವರೆಗೆ ಶಾಲಾ-ಕಾಲೇಜು ಪ್ರಾರಂಭ ಮಾಡದಿರುವ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ. ಈ ಕುರಿತು ಶಿಕ್ಷಣ ಇಲಾಖೆ ಅಧಿಕೃತ ಪ್ರಕಟಣೆ ಹೊರಡಿಸಿದೆ. ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಶಿಕ್ಷಣ ಇಲಾಖೆ ಈ ಕ್ರಮ ಕೈಗೊಂಡಿದೆ. ತಿಂಗಳಾಂತ್ಯದವರೆಗೂ ಶಾಲಾ-ಕಾಲೇಜು ಆರಂಭಿಸದಂತೆ ಸರ್ಕಾರ ಸೂಚಿಸಿದೆ.
ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಸೆ.21 ರಿಂದ 9-12ನೇ ತರಗತಿವರೆಗೆ ತರಗತಿ ಆರಂಭಕ್ಕೆ ಕೇಂದ್ರ ಸರ್ಕಾರ ಅವಕಾಶ ಕೊಟ್ಟಿದೆ. ಆದರೆ ರಾಜ್ಯದಲ್ಲಿ ಪ್ರತಿನಿತ್ಯ ಸರಾಸರಿ 9 ಸಾವಿರಕ್ಕೂ ಅಧಿಕ ಕೊರೊನಾ ಪ್ರಕರಣಗಳು ಪತ್ತೆಯಾಗುತ್ತಿವೆ. ಹೀಗಾಗಿ ಸರ್ಕಾರ ಶಾಲಾ-ಕಾಲೇಜು ಆರಂಭಿಸುವ ಕುರಿತು ಒಲವು ತೋರಿಲ್ಲ.
ರಾಜ್ಯದಲ್ಲಿ ಇಂದು 8,364 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 5,11,346ಕ್ಕೆ ಏರಿಕೆಯಾಗಿದೆ. 114 ಮಂದಿ ಇಂದು ಕೊರೊನಾಗೆ ಬಲಿಯಾಗಿದ್ದಾರೆ. ಇಲ್ಲಿಯವರೆಗೆ 7,922 ಮಂದಿ ಕೊರೊನಾದಿಂದ ಸಾವನ್ನಪ್ಪಿದ್ದಾರೆ. ಇಂದು ರಾಜ್ಯದಲ್ಲಿ 10,815 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 5,11,346 ಸೋಂಕಿತರ ಪೈಕಿ 98,564 ಸಕ್ರಿಯ ಪ್ರಕರಣಗಳಿವೆ. ಒಟ್ಟು 4,04,841 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 822 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.