ಚಾಮರಾಜನಗರ: ಜಿಲ್ಲೆಯಲ್ಲಿ ಕೋವಿಡ್-19 ತಡೆ ಕರ್ತವ್ಯ ಸಂದರ್ಭದಲ್ಲಿ 100ಕ್ಕೂ ಹೆಚ್ಚು ಮಂದಿ ಕೊರೊನಾ ವಾರಿಯರ್ಸ್ ಗಳು ಕೋವಿಡ್ ಸೋಂಕಿಗೆ ಒಳಗಾಗಿ ಚಿಕಿತ್ಸೆ ಪಡೆದು ಗುಣಮುಖರಾದ ಬಳಿಕ ಇದೀಗ ಮತ್ತೆ ಕರ್ತವ್ಯಕ್ಕೆ ತೊಡಗಿಕೊಳ್ಳುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ.
ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ಹಗಲಿರುಳು ಎನ್ನದೇ ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಪೌರಕಾರ್ಮಿಕರು, ವೈದ್ಯರು, ಆರೋಗ್ಯ, ಪೊಲೀಸ್, ಚೆಸ್ಕಾಂ ಹಾಗೂ ಕೆ.ಎಸ್.ಆರ್.ಟಿ.ಸಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿ, ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಕೆಲಸದ ಸಂದರ್ಭದಲ್ಲಿ ಸಾರ್ವಜನಿಕವಾಗಿ ತೊಡಗಿಕೊಳ್ಳಬೇಕಾದ ಅನಿವಾರ್ಯತೆ ಅಧಿಕಾರಿ, ಸಿಬ್ಬಂದಿಗಿದೆ. ಪ್ರಸ್ತುತ ಎದುರಾಗಿರುವ ಕೋವಿಡ್-19 ಪರಿಸ್ಥಿತಿಯಲ್ಲೂ ಅಧಿಕಾರಿ, ಸಿಬ್ಬಂದಿ ಕರ್ತವ್ಯ ಪ್ರಜ್ಞೆ ಮರೆತಿಲ್ಲ. ಎಂದಿನಂತೆ ಸಾರ್ವಜನಿಕರೊಂದಿಗೆ ಮುಂಜಾಗ್ರತಾ ಕ್ರಮಗಳನ್ನು ವಹಿಸಿ ಜನಪರ ಕಾರ್ಯ ಯೋಜನೆಗಳ ಅನುಷ್ಠಾನ ಕೆಲಸ ನಿರ್ವಹಣೆಗೆ ಮುಂದಾಗಿದ್ದಾರೆ.
ಕೋವಿಡ್ ಪರಿಸ್ಥಿತಿಯನ್ನು ಲೆಕ್ಕಿಸದೇ ವಿವಿಧ ಹಂತಗಳಲ್ಲಿ ಕೆಲಸದಲ್ಲಿ ತೊಡಗಿರುವ ಜಿಲ್ಲೆಯ 109 ಅಧಿಕಾರಿ, ಸಿಬ್ಬಂದಿ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಇವರಲ್ಲಿ ಆರೋಗ್ಯ ಇಲಾಖೆಯ 34 ಮಂದಿ ಸೇರಿದ್ದಾರೆ. ಈ ಪೈಕಿ ಐವರು ವೈದ್ಯರಾಗಿದ್ದು ಇವರಿಗೂ ಸೋಂಕು ತಗುಲಿತ್ತು. ಪೊಲೀಸ್ ಇಲಾಖೆಯಲ್ಲಿ ನಾಲ್ವರು ಇನ್ಸ್ ಪೆಕ್ಟರ್, ಸಬ್ಇನ್ಸ್ ಪೆಕ್ಟರ್ ಸೇರಿದಂತೆ ಇತರೆ 26 ಮಂದಿ, ಕೆ.ಎಸ್.ಆರ್.ಟಿ.ಸಿಯ 24, ವಿದ್ಯುತ್ ಸರಬರಾಜು ನಿಗಮದ 5, ಕಂದಾಯ, ಶಿಕ್ಷಣ ಇಲಾಖೆ, ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿ, ಸಿಬ್ಬಂದಿ, ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಪೌರಕಾರ್ಮಿಕರು, ಬ್ಯಾಂಕುಗಳ ನೌಕರರು ಸೇರಿ 20 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು.
ಈಗಾಗಲೇ 89 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆ, ಕೋವಿಡ್ ಕೇರ್ ಕೇಂದ್ರಗಳಿಂದ ಬಿಡುಗಡೆಯಾಗಿದ್ದಾರೆ. ಮನೆಯ ನಿಗಾವಣೆ ಅವಧಿಯನ್ನು ಪೂರ್ಣಗೊಳಿಸಿ ಬಹುತೇಕ ಅಧಿಕಾರಿ, ಸಿಬ್ಬಂದಿ ಕರ್ತವ್ಯಕ್ಕೆ ಮರಳಿ ಎಂದಿನಂತೆ ತೊಡಗಿಕೊಂಡಿದ್ದಾರೆ. ಈ ಮೂಲಕ ಇತರರಿಗೂ ಕೋವಿಡ್-19 ಬಗೆಗಿನ ಅನಗತ್ಯ ಭೀತಿ ದೂರಮಾಡಿ ಆತ್ಮಸ್ಥೈರ್ಯ ಮೂಡಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಪ್ರಸ್ತುತ 20 ಮಂದಿ ಕೊರೊನಾ ವಾರಿಯರ್ಸ್ ಗಳು ಅಸ್ಪತ್ರೆ, ಕೋವಿಡ್ ಕೇರ್ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೊರೊನಾ ವಾರಿಯರ್ಸ್ಗಳು ಸಹ ಕರ್ತವ್ಯ ಸಂದರ್ಭದಲ್ಲಿ ಸೋಂಕಿಗೆ ಒಳಗಾಗುತ್ತಿರುವುದನ್ನು ಮನಗಂಡ ಜಿಲ್ಲಾಡಳಿತ ಕೊರೊನಾ ವಾರಿಯರ್ಸ್ಗಳ ಆತ್ಮಸ್ಥೈರ್ಯ ಹೆಚ್ಚಿಸುವ ಮಹತ್ತರ ಉದ್ದೇಶದೊಂದಿಗೆ ಕೋವಿಡ್ ಕೇರ್ ಕೇಂದ್ರಗಳಲ್ಲಿ ಪುರುಷ ಹಾಗೂ ಮಹಿಳಾ ಕೊರೊನಾ ವಾರಿಯರ್ಸ್ಗಳಿಗಾಗಿಯೇ ಪ್ರತ್ಯೇಕ ವಾರ್ಡ್ಗಳನ್ನು ಮೀಸಲಿರಿಸಿದೆ. ಈ ಮೂಲಕ ಕೊರೊನಾ ವಿರುದ್ದದ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಅಧಿಕಾರಿ, ಸೇವಾ ಸಿಬ್ಬಂದಿ ಜತೆ ಇದ್ದೇವೆ ಎಂಬ ವಿಶ್ವಾಸ ಮೂಡಿಸಿದೆ.