ಯಾದಗಿರಿ: ಮುಖ್ಯಮಂತ್ರಿ ಯಡಿಯೂರಪ್ಪನವರು ಕೇವಲ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ರಚನೆ ಮಾಡಿ ಕೈತೊಳೆದುಕೊಂಡರೆ ಸರಿಯಲ್ಲ, ಸ್ವತಂತ್ರ ಲಿಂಗಾಯತ ಧರ್ಮದ ಘೋಷಣೆ ಮಾಡಬೇಕು ಎಂದು ಯಾದಗಿರಿ ಜಿಲ್ಲೆಯ ಗುರುಮಿಠಕಲ್ ಖಾಸಾಮಠದ ಪೀಠಾಧಿಪತಿ ಶಾಂತವೀರ ಮುರುಘರಾಜೇಂದ್ರ ಸ್ವಾಮಿ ಒತ್ತಡ ಹಾಕಿದ್ದಾರೆ.
ಯಾದಗಿರಿ ನಗರದಲ್ಲಿ ಮಾತನಾಡಿದ ಅವರು, ರಾಜ್ಯದ ಲಿಂಗಾಯತರು ಅಲ್ಪಸಂಖ್ಯಾತರ ಮಾನ್ಯತೆಗೆ ಒಳಪಟ್ಟಿದ್ದಾರೆ. ಹೀಗಾಗಿ ಲಿಂಗಾಯತ ಧರ್ಮವನ್ನು ಸ್ವತಂತ್ರ ಧರ್ಮವೆಂದು, ರಾಜ್ಯ ಮತ್ತು ಕೇಂದ್ರ ಸರ್ಕಾರ ಘೋಷಣೆ ಮಾಡಬೇಕು ಎಂದರು.
ರಾಜ್ಯ ಸರ್ಕಾರದಿಂದ ವೀರಶೈವ ಲಿಂಗಾಯತ ನಿಗಮ ರಚನೆ ಹಿನ್ನೆಲೆ ಮತ್ತೆ ಲಿಂಗಾಯತ ಧರ್ಮದ ಕೂಗು ಕೇಳುತ್ತಿದೆ. ಲಿಂಗಾಯತ ಸ್ವತಂತ್ರ ಧರ್ಮಕ್ಕೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಗಟ್ಟಿಯಾಗಿ ಶಿಫಾರಸು ಮಾಡಬೇಕು. ಹಿಂದುಳಿದ ಸಮುದಾಯವನ್ನು ಗುರುತಿಸಿ ಅವರಿಗೆ ಅಲ್ಪಸಂಖ್ಯಾತರ ಅಡಿಯಲ್ಲಿ ಮೀಸಲಾತಿ ನೀಡುವ ಮೂಲಕ, ಸಮಾಜವನ್ನು ಅಭಿವೃದ್ಧಿ ಮಾಡಬೇಕು ಎಂದು ತಮ್ಮ ಅಭಿಪ್ರಾಯ ಹೊರಹಾಕಿದ್ದಾರೆ.