ಹಾಸನ: ಜಿಲ್ಲೆಯ ಹಲವೆಡೆ ಭರ್ಜರಿ ಮಳೆಯಾಗಿದ್ದು, ಅರಕೆರೆ ಗ್ರಾಮದಲ್ಲಿ ಹಲವು ಮನೆಯೊಳಗೆ ನೀರು ನುಗ್ಗಿದೆ. ಜನಜೀವನ ಅಸ್ತವ್ಯಸ್ತವಾಗಿದೆ.
ಜಿಲ್ಲೆಯಲ್ಲಿ ಭಾರೀ ಮಳೆಯಾಗಿದ್ದು, ರೈತರ ಮೊಗದಲ್ಲಿ ಸಂಭ್ರಮ ಮನೆ ಮಾಡಿದೆ. ಆದರೆ ಗ್ರಾಮದ ಹಲವು ಮನೆಗಳಿಗೆ ನೀರು ನುಗ್ಗಿದ್ದರಿಂದ ಗ್ರಾಮಸ್ಥರು ಪರದಾಡಿದ್ದಾರೆ. ಗ್ರಾಮದಲ್ಲಿ ಚರಂಡಿ ವ್ಯವಸ್ಥೆ ಸರಿಯಿಲ್ಲದ ಪರಿಣಾಮ, ಮಳೆಗಾಲದಲ್ಲಿ ಮನೆಯೊಳಗೆ ನೀರು ನುಗ್ಗುತ್ತದೆ ಎಂದು ಈ ಹಿಂದೆಯೇ ಹಲವು ಬಾರಿ ಗ್ರಾಮಸ್ಥರು ಪಿಡಿಒಗೆ ಮನವಿ ಮಾಡಿದ್ದರು.
ಗ್ರಾಮಸ್ಥರ ಮನವಿಗೆ ಪಿಡಿಒ ಸ್ಪಂದಿಸದ ಕಾರಣ ಇದೀಗ ಸ್ವಲ್ಪ ಮಳೆಯಾದರೂ ಮನೆ ಮುಂದೆ ನೀರು ನಿಂತು ಕೆರೆಯ ವಾತಾವರಣ ನಿರ್ಮಾಣವಾಗುತ್ತಿದೆ. ಕೋವಿಡ್-19 ಸಂಕಷ್ಟದಲ್ಲಿರುವ ಜನರಿಗೆ ಈಗ ಅಧಿಕಾರಿಗಳ ಬೇಜವಬ್ದಾರಿಯಿಂದ ಮಳೆ ಬಂದಾಗ ಸಮಸ್ಯೆ ಎದುರಿಸುವಂತಾಗಿದೆ. ಎಷ್ಟೇ ಮನವಿ ಮಾಡಿದರೂ ಪಿಡಿಒ ಮಾತ್ರ ಚರಂಡಿ ಸರಿ ಮಾಡಿಸುತ್ತಿಲ್ಲ. ಹೀಗಾಗಿ ಪಿಡಿಒ ವಿರುದ್ಧ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.