– ಕರ್ನಾಟಕದಲ್ಲಿ ಹಾಸನ ಅನಾಥ ಜಿಲ್ಲೆ
ಹಾಸನ: ಜಿಲ್ಲೆಯ ಐದು ತಾಲೂಕುಗಳನ್ನು ಸರ್ಕಾರ ಪ್ರವಾಹ ಪೀಡಿತ ಪ್ರದೇಶ ಎಂದು ಘೋಷಣೆ ಮಾಡಲಾಗಿದೆ. ಆದ್ರೆ ಇದುವರೆಗೂ ಒಂದು ರೂಪಾಯಿ ಪರಿಹಾರದ ಹಣ ನೀಡಿಲ್ಲ. ಹಾಸನ ಜಿಲ್ಲೆ ಕರ್ನಾಟಕದ ಭೂಪಟದಲ್ಲಿ ಇಲ್ಲವೇ ಎಂದು ಸರ್ಕಾರಕ್ಕೆ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಪ್ರಶ್ನಿಸಿದ್ದಾರೆ.
ಹಾಸನದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಹೆಚ್.ಡಿ.ರೇವಣ್ಣ, ರಾಜ್ಯದಲ್ಲಿ ಒಂದೆಡೆ ಕೊರೊನದಿಂದ ಜನತೆ ತತ್ತರಿಸಿ ಹೋಗಿದ್ದಾರೆ. ಮತ್ತೊಂದೆಡೆ ಮಳೆಯಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಾಸನ ಜಿಲ್ಲೆ ರಾಜ್ಯದ ಭೂಪಟದಲ್ಲಿ ಇದೆಯೋ ಇಲ್ಲವೋ ಗೊತ್ತಿಲ್ಲ. ಕರ್ನಾಟಕದಲ್ಲಿ ಹಾಸನ ಅನಾಥ ಜಿಲ್ಲೆಯಾಗಿದ್ದು, ಕಪ್ಪುಪಟ್ಟಿಗೆ ಸೇರಿಸಿ ಎಂದು ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದರು.
150 ವರ್ಷಗಳ ಇತಿಹಾಸವಿರುವ ನೆಹರು, ಮಹಾತ್ಮಗಾಂಧಿ ಕಟ್ಟಿದ ಕಾಂಗ್ರೆಸ್ ಮತ್ತು ನಮ್ಮ ಪಕ್ಷದವರನ್ನು ಕರೆದುಕೊಂಡು ಹೋಗಿ ಬಿಜೆಪಿ ಟಿಕೆಟ್ ನೀಡಿದೆ. ನಮ್ಮದು ರಾಷ್ಟ್ರೀಯ ಪಕ್ಷ ಅಲ್ಲ, ಪ್ರಾದೇಶಿಕ ಪಕ್ಷ. ರಾಷ್ಟ್ರೀಯ ಪಕ್ಷಗಳಲ್ಲಿ ಅಭ್ಯರ್ಥಿಗಳೇ ಇಲ್ಲ. ಕಾಂಗ್ರೆಸ್ ನಲ್ಲಿದ್ದ ಡಾಕ್ಟರ್ ಅನ್ನು ಬಿಜೆಪಿಯವರು ಕರೆದುಕೊಂಡು ಹೋಗಿ ಟಿಕೆಟ್ ನೀಡಿದ್ದಾರೆ. ಎಲ್ಲವನ್ನೂ ಜನತೆಗೆ ಬಿಡುತ್ತೇವೆ. ಕುಮಾರಸ್ವಾಮಿ ಸಾಲಮನ್ನಾ ಮಾಡಿ, ಒಳ್ಳೆಯ ಕಾರ್ಯಕ್ರಮಗಳನ್ನು ನೀಡಿದ್ದಾರೆ. ಇದರ ಹಿನ್ನೆಲೆಯಲ್ಲಿ ಮತ ಕೇಳುತ್ತೇವೆ. ಅಕ್ಟೋಬರ್ 23 ರ ನಂತರ ಉಪ ಚುನಾವಣೆ ಪ್ರಚಾರಕ್ಕೆ ಹೋಗುತ್ತೇನೆ ಎಂದು ಹೆಚ್.ಡಿ.ರೇವಣ್ಣ ಹೇಳಿದರು.