ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಜಿಲ್ಲೆಗಳಲ್ಲಿ ಕೈಗಾರಿಕೆ ಸ್ಥಾಪನೆಗೆ ಒತ್ತು ನೀಡಲಾಗಿದೆ. ವಿವಿಧ ಕೈಗಾರಿಕೋದ್ಯಮಿಗಳು ಅವಳಿ ಜಿಲ್ಲೆಗಳಲ್ಲಿ 14 ಸಾವಿರ ಕೋಟಿ ರೂ. ಬಂಡವಾಳ ಹೂಡಿಕೆ ಮಾಡಲಿದ್ದಾರೆ. ಈ ಹೂಡಿಕೆಗೆ ರಾಜ್ಯ ಸರ್ಕಾರದಿಂದ ಅನುಮೋದನೆ ನೀಡಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಹೇಳಿದರು.
ನಗರದ ವಿವಿಧ ಭಾಗಗಳಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಹುಬ್ಬಳ್ಳಿ-ಧಾರವಾಡ ನಗರಗಳಲ್ಲಿ ಸ್ಮಾರ್ಟ್ ಸಿಟಿ, ಮಹಾತ್ಮಾ ಗಾಂಧಿ ನಗರ ವಿಕಾಸ, ಲೋಕೋಪಯೋಗಿ ಇಲಾಖೆ ಸೇರಿದಂತೆ ಹಲವು ಯೋಜನೆಗಳ ಮೂಲಕ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗುತ್ತಿದೆ. ಸಹಸ್ರಾರ್ಜುನ ನಗರದಲ್ಲಿ 20 ಲಕ್ಷ ರೂ. ವೆಚ್ಚದಲ್ಲಿ ಸಿಸಿ ರಸ್ತೆ, ನಿರ್ಮಿಸಲಾಗುವುದು. 11.30 ಲಕ್ಷ ರೂ. ವೆಚ್ಚದಲ್ಲಿ ನಾಗಲಿಂಗನರ ಹಾಗೂ ಬಸವನಗರದ ಉದ್ಯಾನವನಗಳ ಅಭಿವೃದ್ಧಿ ಚಾಲನೆ ನೀಡಲಾಗಿದೆ.
15ನೇ ಹಣಕಾಸು ಯೋಜನೆಯ 37 ಲಕ್ಷ ರೂ. ವೆಚ್ಚದಲ್ಲಿ ಬಸವನಗರ, ಕೋಟಿಲಿಂಗ ನಗರ, ಪಾವಸ್ಕರ ಲೇಔಟ್ ಗಳಲ್ಲಿ ಒಳಚರಂಡಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು. ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ್ ಜೋಶಿ ಭಾಗವಹಿಸಿದ್ದರು. ಇದೇ ವೇಳೆ ವೆಂಕಟೇಶ್ ಕಾಲೋನಿ, ಬಸವನಗರದ ನಿವಾಸಿಗಳು ರಸ್ತೆ ನಿರ್ಮಾಣಕ್ಕಾಗಿ ಸಚಿವರಿಗೆ ಮನವಿ ಸಲ್ಲಿಸಿದರು.