ಶಿಮ್ಲಾ: ಹಿಮಾಚಲ ಪ್ರದೇಶದ (Himachal Pradesh) ಕುಲು ಜಿಲ್ಲೆಯ (Kullu district) ಕಿಯಾಸ್ ಮತ್ತು ನ್ಯೋಲಿಯಲ್ಲಿ ಸೋಮವಾರ ಮುಂಜಾನೆ 3.55ರ ಸುಮಾರಿಗೆ ಮೇಘಸ್ಫೋಟ (Cloudburst) ಸಂಭವಿಸಿದ ಪರಿಣಾಮ ಓರ್ವ ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ನಡೆದಿದೆ.
ಮೇಘಸ್ಫೋಟದಿಂದ 9 ವಾಹನಗಳು ಕೂಡ ಜಖಂಗೊಂಡಿವೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ರಾಜೇಶ್ ಠಾಕೂರ್ ತಿಳಿಸಿದ್ದಾರೆ. ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನಾಲ್ಕು ಜಿಲ್ಲೆಗೆ ಆರೆಂಜ್ ಅಲರ್ಟ್ (Orange Alert) ಘೋಷಣೆ ಮಾಡಲಾಗಿದೆ.
ಶನಿವಾರ ಮಾಧ್ಯಮಗಳ ಜೊತೆ ಮಾತನಾಡಿದ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು (Sukhvinder Singh Sukhu), ರಾಜ್ಯದಲ್ಲಿ ಭಾರೀ ಮಳೆಯಿಂದಾಗಿ ಇದೂವರೆಗೂ ಸುಮಾರು 8 ಸಾವಿರ ಕೋಟಿ ನಷ್ಟ ಉಂಟಾಗಿದೆ ಎಂದಿದ್ದಾರೆ. ಆ ಬಳಿಕ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಿಎಂ, ರಾಜ್ಯದಲ್ಲಿ ಜುಲೈನಲ್ಲಿ ಇದುವರೆಗೆ 284.1 ಮಿ.ಮೀ ಮಳೆಯಾಗಿದೆ. ಈಗಾಗಲೇ ಸುಮಾರು 70 ಸಾವಿರ ಪ್ರವಾಸಿಗರನ್ನು ರಾಜ್ಯದಿಂದ ಸ್ಥಳಾಂತರಿಸಲಾಗಿದೆ. ಮತ್ತು 15 ಸಾವಿರ ವಾಹನಗಳನ್ನು ಕಳುಹಿಸಲಾಗಿದೆ. ಸುಮಾರು 500 ಪ್ರವಾಸಿಗರು ಸ್ವಯಂಪ್ರೇರಣೆಯಿಂದ ಹಿಂದಿರುಗಲು ನಿರ್ಧರಿಸಿದ್ದಾರೆ ಎಂದು ತಿಳಿಸಿದ್ದಾರೆ.
80% ರಷ್ಟು ವಿಪತ್ತು ಪೀಡಿತ ಪ್ರದೇಶಗಳಲ್ಲಿ ವಿದ್ಯುತ್, ನೀರು ಮತ್ತು ಮೊಬೈಲ್ ಫೋನ್ ಸೇವೆಗಳನ್ನು ತಾತ್ಕಾಲಿಕವಾಗಿ ಮರುಸ್ಥಾಪಿಸಲಾಗಿದೆ. ಉಳಿದ ಪ್ರದೇಶಗಳಲ್ಲಿ ಅಗತ್ಯ ಸೇವೆಗಳನ್ನು ಶೀಘ್ರವಾಗಿ ಪುನಃಸ್ಥಾಪಿಸಲು ಪ್ರಯತ್ನಗಳು ನಡೆಯುತ್ತಿವೆ ಎಂದು ಮುಖ್ಯಮಂತ್ರಿಗಳು ಮಾಹಿತಿ ನೀಡಿದ್ದಾರೆ.
ಜುಲೈ 14 ರಂದು (ಶುಕ್ರವಾರ) ಪ್ರವಾಹ ಪೀಡಿತ ರಾಜ್ಯಕ್ಕೆ ರಾಜ್ಯ ವಿಪತ್ತು ನಿಧಿಯಿಂದ (ಎಸ್ಡಿಆರ್ಎಫ್) 180 ಕೋಟಿ ರೂ. ಮುಂಗಡ ಬಿಡುಗಡೆಗೆ ಅಮಿತ್ ಶಾ ಅನುಮೋದನೆ ನೀಡಿದ್ದರು. ಹಿಮಾಚಲ ಪ್ರದೇಶದಲ್ಲಿ ಮಾನ್ಸೂನ್ ಪ್ರಾರಂಭವಾದಾಗಿನಿಂದ 100ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ. 667 ಮನೆಗಳು ಸಂಪೂರ್ಣವಾಗಿ ಹಾನಿಗೊಳಗಾಗಿವೆ ಮತ್ತು 1,264 ಭಾಗಶಃ ಹಾನಿಯಾಗಿದೆ ಎಂದು ರಾಜ್ಯ ತುರ್ತು ಪ್ರತಿಕ್ರಿಯೆ ಕೇಂದ್ರ ತಿಳಿಸಿದೆ.
Web Stories