ಕಲಬುರಗಿ: ಪ್ರವಾಹ ವೀಕ್ಷಸಲೆಂದು ಜಿಲ್ಲೆಗೆ ಬಂದಿದ್ದ ಕಂದಾಯ ಸಚಿವ ಆರ್. ಅಶೋಕ್, ಕೇವಲ 10 ನಿಮಿಷದಲ್ಲಿ ಪ್ರವಾಹ ವೀಕ್ಷಣೆ ಮಾಡಿ ವಾಪಸ್ ಆಗಿದ್ದಾರೆ.
ಮಹಾಮಳೆಗೆ ಕಲಬುರಗಿ ಜಿಲ್ಲೆ ತತ್ತರಿಸಿ ಹೋಗಿದೆ. ಮನೆಗಳಿಗೆ ನೀರು ನುಗ್ಗಿ ದವಸ-ಧಾನ್ಯಗಳನ್ನು ನಾಶವಾಗಿವೆ. ಜನರು ಇರುವ ಸೂರನ್ನು ಕಳೆದುಕೊಂಡು ಪರಾದಡುತ್ತಿದ್ದಾರೆ. ಈ ರೀತಿಯ ಪರಿಸ್ಥಿತಿಯಲ್ಲಿ ಜನರ ಜೊತೆಗೆ ಇದ್ದು, ಸ್ಪಂದಿಸಬೇಕಾದ ಸಚಿವರು ಕಾಟಾಚಾರಕ್ಕೆ ಎಂಬಂತೆ 10 ನಿಮಿಷಗಳ ಕಾಲ ನೆರೆ ವೀಕ್ಷಣೆ ಮಾಡಿ ವಾಪಸ್ ಆಗಿರುವುದು ಜನರ ಕೆಂಗಣ್ಣಿಗೆ ಗುರಿಯಾಗಿದೆ.
ಇಂದು ಆರ್ ಆಶೋಕ್ ಮತ್ತು ಕಲಬುರಗಿ ದಕ್ಷಿಣ ಶಾಸಕ ದತ್ತಾತ್ರೇಯ ಪಾಟೀಲ್ ಹಾಗೂ ಸುರಪುರ ಶಾಸಕ ರಾಜೂಗೌಡ ಅವರು ಮಹಾಮಳೆ ಜಲಾವೃತವಾಗಿರುವ ಕಲಬುರಗಿ ತಾಲೂಕಿನ ಸೈಯದ್ ಚಿಂಚೋಳಿ ಗ್ರಾಮಕ್ಕೆ ಭೇಟಿ ನೀಡಿದ್ದಾರೆ. ಇದಾದ ನಂತರ ಗ್ರಾಮದ ಗಂಜಿ ಕೇಂದ್ರಕ್ಕೂ ಭೇಟಿ ಕೊಟ್ಟಿದ್ದಾರೆ. ಈ ವೇಳೆ ನಮ್ಮನ್ನು ಬೇರೆ ಕಡೆ ಸ್ಥಳಾಂತರ ಮಾಡಿ ಎಂದು ಕೈ ಮುಗಿದು ಗ್ರಾಮದ ಮಹಿಳೆಯರು ಬೇಡಿಕೊಂಡಿದ್ದಾರೆ. ಆದರೆ ಇಂತಹ ಸಂದರ್ಭದಲ್ಲಿ ಅವರ ಜೊತೆಯಲ್ಲಿ ಇದ್ದು ಧೈರ್ಯ ಹೇಳಬೇಕಾದ ಜನಪ್ರತಿನಿಧಿಗಳು ಕೇವಲ 10 ನಿಮಿಷ ಸ್ಥಳದಲ್ಲಿದ್ದು, ಅಲ್ಲಿಂದ ಕಲ್ಕಿತ್ತಿದ್ದಾರೆ.
ಕಳೆದ ನಾಲ್ಕು ಐದು ದಿನಗಳಿಂದ ಸುರಿಯುತ್ತಿರುವ ಮಹಾಮಳೆ ಕಲಬುರಗಿ ಅಕ್ಷರಸಃ ತತ್ತರಿಸಿ ಹೋಗಿದೆ. ಮಹಾಮಳೆಗೆ ಕಲಬುರಗಿ ತಾಲೂಕಿನ ಸೈಯದ್ ಚಿಂಚೋಳಿ ಗ್ರಾಮದ 30 ಹೆಚ್ಚು ಮನೆಗಳಿಗೆ ನೀರು ನುಗ್ಗಿ ಲಕ್ಷಾಂತರ ಮೌಲ್ಯದ ದವಸ ಧಾನ್ಯಗಳನ್ನು ಕಳೆದುಕೊಂಡು ಗ್ರಾಮಸ್ಥರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಕ್ಕಳು ಪುಸ್ತಕಗಳನ್ನು ಕಳೆದುಕೊಂಡು ಹೈರಾಣಾಗಿದ್ದಾರೆ. ಮಳೆ ನಿಂತು ಹೋದ ಮೇಲೆ ಈ ಗ್ರಾಮ ಜನರ ಬದುಕು ಬೀದಿಗೆ ಬಿದ್ದಿದೆ. ಮಹಾಮಳೆಯಿಂದ ದವಸ, ಧಾನ್ಯಗಳನ್ನು, ಕುರಿಗಳನ್ನು ಸೇರಿದಂತೆ ಎಲ್ಲವನ್ನು ಗ್ರಾಮಸ್ಥರು ಕಳೆದುಕೊಂಡಿದ್ದಾರೆ.