ಗದಗ: ಶಂಕಿತ ಮಹಾಮಾರಿ ಡೆಂಗ್ಯೂ ಜ್ವರಕ್ಕೆ 11 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯ ರೋಣ ತಾಲೂಕಿನ ನೆಲ್ಲೂರ ಗ್ರಾಮದಲ್ಲಿ ನಡೆದಿದೆ.
ಅಕ್ಷತಾ ಭಿಕ್ಷಾವತಿಮಠ ಎಂಬ ಬಾಲಕಿ ಮಹಾಮಾರಿ ಡೆಂಗ್ಯೂಗೆ ಬಲಿಯಾಗಿದ್ದಾಳೆ. 10 ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಬಾಲಕಿಗೆ ಮುಶಿಗೇರಿ, ಬದಾಮಿ ಹಾಗೂ ಬಾಗಲಕೋಟೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಿದ್ದಾರೆ. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬಾಗಲಕೋಟೆ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ.
ನೆಲ್ಲೂರ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ, ಕಲುಷಿತ ವಾತಾವರಣ, ಸ್ವಚ್ಛತೆ ಇಲ್ಲದೆ ಈಗಾಗಲೇ ಸಾಕಷ್ಟು ಜನ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ. ಆದ್ದರಿಂದ ಆರೋಗ್ಯ ಇಲಾಖೆ ಹಾಗೂ ಸ್ಥಳೀಯ ಆಡಳಿತ ಮಂಡಳಿಯ ವಿರುದ್ಧ ಅಲ್ಲಿನ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಈ ಕುರಿತು ಗದಗ ಜಿಲ್ಲೆ ಗಜೇಂದ್ರಗಢ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.