-ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣು
-14 ಜನರ ವಿರುದ್ಧ ಪ್ರಕರಣ ದಾಖಲು
ಮುಂಬೈ: ಲೈಂಗಿಕ ಕಿರುಕುಳದಿಂದ ಮನನೊಂದ 18 ವರ್ಷದ ಯುವಕನೋರ್ವ ವಸತಿ ನಿಲಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಮಹಾರಾಷ್ಟ್ರದ ಚಂದ್ರಾಪುರ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಯುವಕ 12ನೇ ತರಗತಿಯಲ್ಲಿ ಓದುತ್ತಿದ್ದನು. ವಿದ್ಯಾಭ್ಯಾಸಕ್ಕಾಗಿ ಯುವಕ ಸೇವಾದಳ ಹಾಸ್ಟೆಲ್ ನಲ್ಲಿ ಉಳಿದುಕೊಂಡಿದ್ದನು. ವಸತಿ ನಿಲಯದ ಸಿಬ್ಬಂದಿ ಮತ್ತು ಗೆಳೆಯರು ಯುವಕನಿಗೆ ಪ್ರತಿನಿತ್ಯ ಲೈಂಗಿಕ ಕಿರುಕುಳ ನೀಡುತ್ತಿದ್ದರು. ಇದರಿಂದಾಗಿ ಯುವಕ ಮಾನಸಿಕವಾಗಿ ಕುಗ್ಗಿ, ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಆತ್ಮಹತ್ಯೆಗೆ ಶರಣಾಗುವ ಮುನ್ನ ಯುವಕ ಪುಸ್ತಕದಲ್ಲಿ ತನ್ನ ಸಾವಿಗೆ ಕಾರಣ ಏನು ಎಂಬುದರ ಬಗ್ಗೆ ಸವಿವರವಾಗಿ ಬರೆದಿದ್ದಾನೆ. ವಿಷಯ ತಿಳಿದು ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಕೋಣೆಯಲ್ಲಿದ್ದ ಪುಸ್ತಕವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಸಬ್ ಡಿವಿಸನಲ್ ಆಫೀಸರ್ ಶೀಲವಂತ್ ನಂದೇಡ್ಕರ್, ಐಪಿಸಿ ಸೆಕ್ಷನ್ 377 ಮತ್ತು ಪೋಕ್ಸೋ ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಮೂರು ಜನ ಹಾಸ್ಟೆಲ್ ಸಿಬ್ಬಂದಿ ಸೇರಿದಂತೆ 13 ಜನರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.