ಉಡುಪಿ: ಬಿಜೆಪಿಯ ಸಚಿವಾಕಾಂಕ್ಷಿಗಳ ಅಸಮಾದನ ಮತ್ತು ಸಿಡಿ ಗದ್ದಲದ ನಡುವೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಎರಡು ದಿನ ಕರಾವಳಿಯ ಪ್ರವಾಸ ಕೈಗೊಂಡಿದ್ದಾರೆ. ಸೋಮವಾರ ಸಂಜೆ 5 ಗಂಟೆಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ.
ಮುಖ್ಯಮಂತ್ರಿಯಾದ ನಂತರ ಎರಡನೇ ಬಾರಿ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಬಿಎಸ್ವೈ ಭೇಟಿ ನೀಡುತ್ತಿದ್ದು, ಪರ್ಯಾಯ ಪಂಚ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಮಠದ ಕಾರ್ಯಕ್ರಮ ನಂತರ ಕರಂಬಳ್ಳಿ ವೆಂಕಟರಮಣ ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಉಡುಪಿಯಲ್ಲಿ ವಾಸ್ತವ್ಯ ಹೂಡಲಿದ್ದಾರೆ ಎಂದು ಶಾಸಕ ರಘುಪತಿ ಭಟ್ ತಿಳಿಸಿದ್ದಾರೆ.
ಕರಂಬಳ್ಳಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮಂಗಳವಾರ ಬೆಳಗ್ಗೆ ಪ್ರವಾಸಿ ಮಂದಿರದಲ್ಲಿ ಅಧಿಕಾರಿಗಳ ಮತ್ತು ಜನಪ್ರತಿನಿಧಿಗಳ ಜೊತೆ ಸಿಎಂ ಬಿಎಸ್ವೈ ಆಗಮಿಸಲಿದ್ದಾರೆ. ಕಾಪು ತಾಲೂಕಿನ ಹೆಜಮಾಡಿ ಬಂದರಿಗೆ ಭೇಟಿ ನೀಡಿ ಕಾಮಗಾರಿಗಳ ಪರಿಶೀಲನೆ ನಡೆಸಿ ಮಧ್ಯಾಹ್ನ ಕುಂದಾಪುರ ತಾಲೂಕು ಕುಂಭಾಸಿ ಆನೆಗುಡ್ಡೆ ದೇವಸ್ಥಾನದ ಧಾರ್ಮಿಕ ಕಾರ್ಯಕ್ರಮದ ವಿಶೇಷ ಪೂಜೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ಹಿಂತಿರುಗಲಿದ್ದಾರೆ.
ಸಿಎಂ ಆದ ನಂತರ ಬಿಎಸ್ ಯಡಿಯೂರಪ್ಪ ಅವರದ್ದು ಇದು ಉಡುಪಿಗೆ ನಾಲ್ಕನೇ ಭೇಟಿ. ಉಡುಪಿ ಜಿಲ್ಲೆಯ ಐದು ಬಿಜೆಪಿ ಶಾಸಕರು, ಸಂಸದೆ ಶೋಭಾ ಕರಂದ್ಲಾಜೆ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಬಿಜೆಪಿ ನಾಯಕರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ಹೇಳಿದರು.