ಬೆಂಗಳೂರು: ಹೊಸೂರು ಮುಖ್ಯರಸ್ತೆಯ ಚಂದಾಪುರ ಬಳಿ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬೆಳ್ಳಂಬೆಳಗ್ಗೆ ನಗರದ ಚಂದಾಪುರ ಬಳಿಯ ಹೊಸೂರು ಮುಖ್ಯರಸ್ತೆಯಲ್ಲಿ ಬಸ್ ಡಿವೈಡರ್ ಗೆ ಡಿಕ್ಕಿ ಹೊಡೆದು, ಬಳಿಕ ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸದಿಂದಾಗಿ ಎರಡು ವಾಹನಗಳಿಗೆ ಬೆಂಕಿ ಹೊತ್ತಿಕೊಂಡಿದೆ. ಪರಿಣಾಮ ಬೆಂಕಿಯ ಕೆನ್ನಾಲಿಗೆಗೆ ಕಾರಿನಲ್ಲಿದ್ದ ಇಬ್ಬರು ವ್ಯಕ್ತಿಗಳು ಸಂಪೂರ್ಣ ಸುಟ್ಟು ಹೋಗಿದ್ದಾರೆ.
ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಬಸ್ ನಲ್ಲಿದ್ದ ಸುಮಾರು 20 ಮಂದಿ ಪ್ರಯಾಣಿಕರು ಕೂಡಲೇ ಇಳಿದಿದ್ದರಿಂದ ಆಗಬಹುದಾಗಿದ್ದ ಭಾರೀ ದುರಂತವೊ0ಂದು ತಪ್ಪಿದೆ. ಅಲ್ಲದೇ ಬಸ್ ನಲ್ಲಿದ್ದ ಕೆಲ ಪ್ರಯಾಣಿಕರಿಗೂ ಸಹ ಸಣ್ಣ-ಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ಘಟನೆಯ ಬಳಿಕ ಬಸ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಎರಡು ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸ್ಥಳಕ್ಕೆ ಸೂರ್ಯ ಸಿಟಿ ಪೊಲೀಸರು ಭೇಟಿ ನೀಡಿದ್ದು, ಕಾರ್ ಸಂಪೂರ್ಣ ಸುಟ್ಟುಹೋಗಿದ್ದರಿಂದ ಅದರಲ್ಲಿದ್ದವರ ಗುರುತು ಪತ್ತೆ ಹಚ್ಚಲು ತನಿಖೆ ನಡೆಸುತ್ತಿದ್ದಾರೆ.