– ಚಾಲಕನನ್ನು ಹೊರತೆಗೆಯಲು ಹರಸಾಹಸಪಟ್ಟ ಸ್ಥಳೀಯರು
ಚಿಕ್ಕಮಗಳೂರು: ಕೆಎಸ್ಆರ್ ಟಿಸಿ ಹಾಗೂ ಕಾರು ಮುಖಾಮುಖಿಯಾಗಿ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಇಬ್ಬರಿಗೂ ಗಂಭೀರ ಗಾಯಗಳಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದ ಬಳಿ ನಡೆದಿದೆ.
ಶಿವಮೊಗ್ಗದಿಂದ ಬೆಂಗಳೂರು ಕಡೆ ಹೋಗುತ್ತಿದ್ದ ಸರ್ಕಾರಿ ಬಸ್ ಹಾಗೂ ಕಡೂರಿನಿಂದ ಶಿವಮೊಗ್ಗದತ್ತ ತೆರಳುತ್ತಿದ್ದ ಕಾರು ಮುಖಾಮುಖಿಯಾಗಿ ಡಿಕ್ಕಿಯಾಗಿವೆ. ಪರಿಣಾಮ ಕಾರಿನಲ್ಲಿದ್ದ 25 ರಿಂದ 28 ವರ್ಷದ ಇಬ್ಬರು ಯುವಕರ ಸ್ಥಿತಿ ಗಂಭೀರವಾಗಿದೆ.
ಅಪಘಾತವಾದ ಕೂಡಲೇ ಕಾರಿನ ಸಹಚಾಲಕನನ್ನ ಶಿವಮೊಗ್ಗ ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ ಅಪಘಾತದಿಂದ ನಜ್ಜುಗುಜ್ಜಾಗಿದ್ದ ಕಾರಿನ ಡೋರ್ ಜಾಮ್ ಆದ ಪರಿಣಾಮ ಚಾಲಕನನ್ನ ಸ್ಥಳೀಯರು ಅರ್ಧ ಗಂಟೆಗೂ ಹೆಚ್ಚು ಕಾಲ ಹರಸಾಹಸಪಟ್ಟು ಹೊರತೆಗೆದು ಶಿವಮೊಗ್ಗಕ್ಕೆ ರವಾನಿಸಿದ್ದಾರೆ.
ಇಬ್ಬರು ಗಾಯಾಳು ಯುವಕರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದು, ಇಬ್ಬರ ಯುವಕರ ಜೀವಕ್ಕೆ ಯಾವುದೇ ತೊಂದರೆ ಇಲ್ಲ ಎಂದು ಸ್ಥಳಿಯರು ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಬೀರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.