ಹಾವೇರಿ: ಪೌರತ್ವ ಕಾಯ್ದೆ ವಿರೋಧಿಸಿ ರಾಜ್ಯಾದ್ಯಾಂತ ಪ್ರತಿಭಟನೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಅವರು ಮುಂಜಾಗ್ರತ ಕ್ರಮವಾಗಿ ಜಿಲ್ಲೆಯಲ್ಲಿ ಮೂರು ದಿನಗಳ ಕಾಲ ನಿಷೇಧಾಜ್ಞೆ ಜಾರಿ ಮಾಡಿ ಆದೇಶ ಹೊರಡಿಸಿದ್ದಾರೆ.
ನಿಷೇಧಾಜ್ಞೆ ಜಾರಿಯಾಗಿದ್ದರೂ ಜಿಲ್ಲೆಯಲ್ಲಿ ಸಹಜ ಸ್ಥಿತಿಯಿದೆ. ಎಂದಿನಂತೆ ವ್ಯಾಪರ-ವಹಿವಾಟು, ಬಸ್ ಸಂಚಾರ ಪ್ರಾರಂಭವಾಗಿವೆ. ಅಲ್ಲದೆ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಿವೆ. ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ನಗರದಲ್ಲಿ ಪೊಲೀಸ್ ಬಂದೋಬಸ್ತ್ ವ್ಯವಸ್ತೆ ಮಾಡಲಾಗಿದೆ.
ಬುಧವಾರ ರಾತ್ರಿಯಿಂದ ಡಿಸೆಂಬರ್ 21ರ ರಾತ್ರಿ 12 ಗಂಟೆಯವರೆಗೆ ನಿಷೇದಾಜ್ಞೆ ಜಾರಿ ಮಾಡಲಾಗಿದೆ. ಈವರೆಗೂ ಯಾವುದೇ ಸಂಘಟನೆಗಳು ಪ್ರತಿಭಟನೆ ಮಾಡೋ ಬಗ್ಗೆ ಮಾಹಿತಿ ನೀಡಿಲ್ಲ. ಅಲ್ಲದೆ ಹಾವೇರಿ ಜಿಲ್ಲೆಯ ಸೂಕ್ಷ್ಮ ಹಾಗೂ ಅತಿಸೂಕ್ಷ್ಮ ಪ್ರದೇಶದಲ್ಲಿ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನ ನಿಯೋಜಿಸಲಾಗಿದೆ.