ಕೋಲಾರ: 40 ವೆಂಟಿಲೇಟರ್ ಇದ್ದರೂ ಬಳಕೆ ಮಾಡುತ್ತಿಲ್ಲ. ಇದೊಂದು ದೊಡ್ಡ ಅಪರಾಧ ಎಂದು ಆರೋಗ್ಯ ಸಚಿವ ಸುಧಾಕರ್ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೆಂಟಿಲೇಟರ್ ಬಳಕೆ ಮಾಡಿದ್ದರೆ ಕನಿಷ್ಠ ನಲವತ್ತು ಜನರನ್ನು ಉಳಿಸಬಹುದಿತ್ತು. ಆಸ್ಪತ್ರೆಯಲ್ಲಿ ಸಾಕಷ್ಟು ಲೋಪ ದೋಷಗಳಿವೆ. ಪ್ರತಿನಿತ್ಯ ಹತ್ತರಿಂದ ಹನ್ನೊಂದು ಜನ ಸಾಯುತ್ತಿದ್ದಾರೆ ಎಂದರು.
ಜಿಲ್ಲಾಸ್ಪತ್ರೆಯಲ್ಲಿ ಕೊರೊನಾ ರೋಗಿಗಳಿಗೆ ಅಟೆಂಡರ್ ಇಟ್ಟಿದ್ದಾರೆ. ಇದು ರಾಜ್ಯದಲ್ಲೆಲ್ಲೂ ಇಲ್ಲ ಇದು ತಪ್ಪು. ಕೊರೊನಾ ನಿರ್ವಹಣೆಗೆ ಗ್ರಾಮ ಮಟ್ಟದಲ್ಲಿ ಟಾಸ್ಕ್ ಫೋರ್ಸ್ ಕಮಿಟಿ ಮಾಡಲು ಸೂಚನೆ ನೀಡಲಾಗಿದೆ ಎಂದು ಸಚಿವರು ಹೇಳಿದರು.
ನಿನ್ನೆ ನಡೆದ ಆಕ್ಸಿಜನ್ ಸರಬರಾಜಲ್ಲಿ ಆದ ದೋಷ ಕುರಿತು ತನಿಖೆ ನಡೆಸಲು ಸೂಚನೆ ನೀಡಿದ್ದೇನೆ. ಅಲ್ಲದೆ ಆಸ್ಪತ್ರೆಯಲ್ಲಿನ ಅವ್ಯವಸ್ಥೆಗಳಿಂದ ನಿರ್ವಹಣೆ ಮಾಡುತ್ತಿದ್ದ ಜಿಲ್ಲಾ ಶಸ್ತ್ರಚಿಕಿತ್ಸಕ ಹಾಗೂ ಆರ್.ಎಂ.ಓ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ ಎಂದು ಅವರು ತಿಳಿಸಿದರು.
ಏನಿದು ಘಟನೆ..?
ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚಗುತ್ತಿರುವ ಸೋಂಕಿತರ ಸಾವಿನ ಸಂಖ್ಯೆ ಹೆಚ್ಚಾಗುತ್ತಿದ್ದು, ಕಳೆದ ಮೂರು ದಿನಗಳಿಂದ ಜಿಲ್ಲೆಯಲ್ಲಿ 25 ಜನ ಸಾವನ್ನಪ್ಪಿದ್ದಾರೆ. ಕೋಲಾರ ಜಿಲ್ಲಾಸ್ಪತ್ರೆಯಲ್ಲೇ ಶನಿವಾರ ಒಂದೇ ದಿನ ಎಂಟು ಜನ ಮೃತಪಟ್ಟಿದ್ದರು. ರಾತ್ರಿ ಆಕ್ಸಿಜನ್ ಸಮಸ್ಯೆಯಿಂದ ಐದು ಜನ ಕೊರೊನಾಗೆ ಬಲಿಯಾಗಿದ್ದರು.