ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬರೋಬ್ಬರಿ 40 ವರ್ಷಗಳ ನಂತರ ಕಾವೇರಿ ನದಿಯಲ್ಲಿ ಈಜಾಡಿ ಸ್ವಲ್ಪ ಕಾಲ ಕಳೆದಿದ್ದಾರೆ. ಇದನ್ನೂ ಓದಿ: ಹೊಸ ಸೈಕಲ್ ಖರೀದಿಸಿದ ಸಿದ್ದರಾಮಯ್ಯ
ಡಿ.ಕೆ.ಶಿವಕುಮಾರ್ ಭಾನುವಾರ ಕಾವೇರಿ ನದಿಯಲ್ಲಿ ಈಜಾಡಿ ಕೆಲ ಸಮಯ ಕಳೆದಿದ್ದಾರೆ. ಈ ವೇಳೆ ತಮ್ಮ ಶಾಲಾ, ಕಾಲೇಜು ದಿನ ಮತ್ತು ತಂದೆಯ ಜೊತೆ ಕಾಲ ಕಳೆದಿದ್ದ ಕೆಲವು ಕ್ಷಣಗಳನ್ನು ನೆನಪಿಸಿಕೊಂಡಿದ್ದಾರೆ. ಈ ಬಗ್ಗೆ ಡಿಕೆಶಿ ತಮ್ಮ ಫೇಸ್ಬುಕ್ ಪೇಜಿನಲ್ಲಿ ಬರೆದುಕೊಂಡಿದ್ದಾರೆ.
“40 ವರ್ಷಗಳ ನಂತರ ಭಾನುವಾರ ಸಂಜೆ 4:30ಕ್ಕೆ ನಮ್ಮ ಹಳ್ಳಿಯ ಬಳಿ ಕಾವೇರಿ ನದಿಯಲ್ಲಿ ಈಜಾಡಿ ನಾನು ಕೆಲ ಸಮಯ ಕಳೆದದ್ದು ನಿಜಕ್ಕೂ ಸಂತಸ ನೀಡಿದೆ. ನನ್ನ ಶಾಲಾ ಹಾಗೂ ಕಾಲೇಜು ದಿನಗಳಲ್ಲಿ ನಾನು ಮತ್ತು ನನ್ನ ತಂದೆಯೊಂದಿಗೆ ಇದೇ ಸ್ಥಳದಲ್ಲಿ ಮೀನು ಹಿಡಿಯುತ್ತಿದ್ದೆ. ನದಿಯಲ್ಲಿ ಈಜಾಡುತ್ತಿದ್ದ ಕ್ಷಣಗಳು ಮತ್ತೊಮ್ಮೆ ಕಣ್ಣ ಮುಂದೆ ಹಾದುಹೋದವು” ಎಂದು ತಮ್ಮ ಹಳೆಯ ನೆನಪುಗಳನ್ನು ಮೆಲಕು ಹಾಕಿದ್ದಾರೆ.
ಅಷ್ಟೇ ಅಲ್ಲದೇ ಭಾನುವಾರ ಸೂರ್ಯ ಗ್ರಹಣ ಹಿನ್ನೆಲೆಯಲ್ಲಿ ಗ್ರಹಣ ಮುಗಿದ ನಂತರ, ತಮ್ಮ ಕುಟುಂಬದೊಂದಿಗೆ ಈಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ್ದಾರೆ. ತಾವು ನದಿಯಲ್ಲಿ ಈಜುತ್ತಿರುವ ಮತ್ತು ಕುಟುಂಬದವರೊಂದಿಗೆ ಕ್ಲಿಕ್ಕಿಸಿದ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ.
ಇತ್ತೀಚೆಗಷ್ಟೆ ಡಿ.ಕೆ ಶಿವಕುಮಾರ್ ತನ್ನ ಮಗಳು ಹಾಗೂ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ಮೊಮ್ಮಗನಿಗೂ ಮದುವೆ ನಿಶ್ಚಯ ಕಾರ್ಯಕ್ರಮವನ್ನು ಸರಳವಾಗಿ ಮನೆಯಲ್ಲಿಯೇ ಮಾಡಿದ್ದರು. ಗುರು-ಹಿರಿಯ ಸಮ್ಮಖದಲ್ಲಿ ದಿವಂಗತ ಸಿದ್ಧಾರ್ಥ ಅವರ ಪುತ್ರ ಅಮರ್ಥ್ಯ ಸುಬ್ರಮಣ್ಯಗೂ ಮತ್ತು ಡಿಕೆಶಿ ಪುತ್ರಿ ಐಶ್ವರ್ಯಗೂ ಮದುವೆ ನಿಶ್ಚಯವಾಗಿದೆ.
ಈಗ ಕೇವಲ ಮದುವೆ ನಿಶ್ಚಯವಾಗಿದ್ದು, ಎರಡು ಕುಟುಂಬಗಳು ತಾಂಬೂಲ ಬದಲಿಸಿಕೊಂಡಿವೆ. ಆಷಾಢ ಕಳೆದ ನಂತರ ಆಗಸ್ಟ್ ತಿಂಗಳಲ್ಲಿ ನಿಶ್ಚಿತಾರ್ಥ ನಡೆಸುವ ಸಂಬಂಧ ಮಾತುಕತೆ ನಡೆದಿದೆ. ಆಗಸ್ಟ್ ತಿಂಗಳಿನಲ್ಲಿ ಒಳ್ಳೆಯ ದಿನ ನೋಡಿ ನಿಶ್ಚಿತಾರ್ಥದ ದಿನಾಂಕ ನಿಗದಿ ಆಗಲಿದೆ. ಬಹುತೇಕ ಡಿಸೆಂಬರ್ ನಲ್ಲಿ ಮದುವೆ ದಿನಾಂಕ ನಿಗದಿಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.