ರಾಯಚೂರು: ಎನ್ಆರ್ ಬಿಸಿ ಯೋಜನೆಯಡಿ 5ಎ ಕಾಲುವೆಗೆ ಒತ್ತಾಯಿಸಿ ಜಿಲ್ಲೆಯ ಮಸ್ಕಿ ತಾಲೂಕಿನ ಪಾಮನಕಲ್ಲೂರಿನಲ್ಲಿ ರೈತರು ನಡೆಸಿರುವ ಪ್ರತಿಭಟನಾ ಸ್ಥಳಕ್ಕೆ ರಾಯಚೂರು ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ್ ಭೇಟಿ ನೀಡಿ ರೈತರೊಂದಿಗೆ ಚರ್ಚೆ ನಡೆಸಿದರು. ಧರಣಿ ನಿರತ ರೈತ ಮುಖಂಡರೊಂದಿಗೆ ಯೋಜನೆ ಅನುಷ್ಠಾನದ ತಾಂತ್ರಿಕ ವಿಷಯಗಳ ಬಗ್ಗೆ ಮಾತನಾಡಿದರು.
ಜಿಲ್ಲಾಧಿಕಾರಿಗಳ ಜೊತೆ ರೈತರು ಸಮಾಲೋಚನೆ ನಡೆಸಿದರಾದರೂ 5ಎ ಕಾಲುವೆ ಜಾರಿಯಾಗುವವರೆಗೂ ಹೋರಾಟ ನಿಲ್ಲಿಸುವುದಿಲ್ಲ ಅಂತ ಸ್ಪಷ್ಟಪಡಿಸಿದರು. 5ಎ ಕಾಲುವೆ ಬದಲಾಗಿ ಬೇರೆ ಯೋಜನೆಗಳನ್ನ ಸರ್ಕಾರ ಜಾರಿಗೆ ತರಲು ಮುಂದಾಗಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು. ಯೋಜನೆಯ ಅನುಷ್ಠಾನಕ್ಕಾಗಿ 12 ವರ್ಷಗಳಿಂದ ರೈತರು ಹೋರಾಟ ಮಾಡುತ್ತಿದ್ದರೂ ಇಲ್ಲಿಯವರೆಗೂ ಯೋಜನೆ ಘೋಷಣೆ ಆಗಿಲ್ಲ. ಕೂಡಲೇ ಘೋಷಣೆ ಮಾಡಬೇಕು ಅಂತ ರೈತರು ಒತ್ತಾಯಿಸಿದರು.
ಜಿಲ್ಲಾಧಿಕಾರಿ ಭೇಟಿ ವೇಳೆ ಎನ್ಆರ್ ಬಿಸಿ ಮುಖ್ಯ ಅಭಿಯಂತರ ರಂಗರಾಮ್, ಲಿಂಗಸಗೂರು ಸಹಾಯಕ ಆಯುಕ್ತ ರಾಜಶೇಖರ್ ಡಂಬಳ, ಮಸ್ಕಿ ತಹಶೀಲ್ದಾರ್ ಬಲರಾಮ್ ಕಟ್ಟಿಮನಿ, ಸಹಾಯಕ ಕಾರ್ಯನಿರ್ವಾಹಕ ಬಿ.ಡಿ. ಬಿರಾದಾರ್, ಇನ್ನಿತರೆ ಅಧಿಕಾರಿಗಳು ಹಾಗೂ ರೈತರು ಹಾಜರಿದ್ದರು.