ಚೆನ್ನೈ: ಕೆಎಸ್ಆರ್ ಟಿಸಿ ಬಸ್ ಹಾಗು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದ ಘಟನೆ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಹೊಸೂರಿನ ಕಾಮನದೊಡ್ಡಿ ಬಳಿ ನಡೆದಿದೆ.
ಲಾರಿ, ಕಾರು ಹಾಗು ಬಸ್ಸಿನ ನಡುವೆ ಸರಣಿ ಅಪಘಾತ ನಡೆದಿದ್ದು, ಹಿಂಬದಿಯಿಂದ ಬಸ್ ಕಾರಿಗೆ ಡಿಕ್ಕಿ ಹೊಡೆದಿದೆ. ಕರ್ನಾಟಕ ನೊಂದಣಿಯ ಕೆಎ02ಎಂಇ8262 ಸಂಖ್ಯೆಯ ಕಾರು ಅಪಘಾತದ ರಭಸಕ್ಕೆ ಸಂಪೂರ್ಣ ನಜ್ಜುಗುಜ್ಜುಗಿದೆ. ಕಾರಿನಲ್ಲಿ ಸಿಕ್ಕಿಹಾಕಿಕೊಂಡಿರುವ ಮೃತ ದೇಹಗಳನ್ನು ಹೊರತೆಗೆಯಲು ಸ್ಥಳೀಯರು ಹಾಗು ಪೊಲೀಸರು ಹರಸಾಹಸಪಟ್ಟಿದ್ದಾರೆ.
ಕಾರಿನಲ್ಲಿ ಇಬ್ಬರು ಮಹಿಳೆಯರು ಹಾಗೂ ಮೂವರು ಪುರುಷರು ಪ್ರಯಾಣಿಸುತ್ತಿದ್ದರು. ಘಟನೆಯಿಂದ ಕಾರಿನಲ್ಲಿದ್ದ ಐದು ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತದೇಹಗಳನ್ನು ಹೊಸೂರಿನ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
ಸ್ಥಳಕ್ಕೆ ಹೊಸೂರಿನ ಅಟ್ಕೊ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.