ಬೆಳಗಾವಿ: ಸಂಬಂಧಿಕರೊಬ್ಬರ ಅಂತ್ಯಕ್ರಿಯಿಗೆ ತೆರಳುತ್ತಿದ್ದಾಗ ಬಸ್ ಡಿಕ್ಕಿಯಾಗಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಅಡಹಳ್ಳಿ ಗ್ರಾಮದ ಹೊರವಲಯದ ಅಥಣಿ – ಗುಡ್ಡಾಪೂರ ರಸ್ತೆಯಲ್ಲಿ ಈ ದಾರುಣ ಘಟನೆ ನಡೆದಿದೆ.
ಅಣ್ಣಪ್ಪ ಜಾಧವ್(40), ಅರ್ಚನಾ ಜಾಧವ್(35), ರಾಧಮ್ಮ ಜಾಧವ್(55), ರವಿ ಜಾಧವ್(12) ಮತ್ತು ಗೌರವ್ವ ಜಾಧವ್(75) ಮೃತ ದುರ್ದೈವಿಗಳು. ಮೃತರು ಅಥಣಿ ತಾಲೂಕಿನ ಕಕಮರಿ ಮೂಲದವರು ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ 10ಕ್ಕೂ ಹೆಚ್ಚು ಜನರಿಗೆ ಗಂಭೀರವಾಗಿ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ.
ಸಂಬಂಧಿಕರ ಅಂತ್ಯಕ್ರಿಯೆಗೆಂದು ಒಂದೇ ಕುಟುಂಬದ ಐವರು ಸೇರಿ ಒಟ್ಟು ಸುಮಾರು 16 ಮಂದಿ ಕ್ರೂಸರ್ ನಲ್ಲಿ ಕಕಮರಿ ಗ್ರಾಮದಿಂದ ಅವರಕೋಡ ಗ್ರಾಮಕ್ಕೆ ತೆರಳುತ್ತಿದ್ದರು. ಕೆಎಸ್ಆರ್ ಟಿಸಿ ಬಸ್ ಬನ್ನೂರಿನಿಂದ ಅಥಣಿಗೆ ಬರುತ್ತಿತ್ತು. ಈ ಸಂದರ್ಭದಲ್ಲಿ ಚಿಕ್ಕೋಡಿಯ ಅಡ್ಡಹಳ್ಳಿ ಗ್ರಾಮದ ಬಳಿ ಕೆಎಸ್ಆರ್ ಟಿಸಿ ಬಸ್ ಕ್ರೂಸರ್ ಡಿಕ್ಕಿ ಹೊಡೆದಿದೆ. ಪರಿಣಾಮ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಅಪಘಾತದಲ್ಲಿ ಗಾಯಗೊಂಡವರನ್ನು ಸಮೀಪದ ಅಥಣಿ ತಾಲೂಕು ಆಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆಗೆ ರವಾನಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಮೃತರ ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.
ಈ ಘಟನೆ ಸಂಬಂಧ ಐಗಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಐಗಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.