ಗಾಂಧೀನಗರ: ದೇವಸ್ಥಾನಕ್ಕೆ ನಡೆದುಕೊಂಡು ಹೋಗುತ್ತಿದ್ದ ಯಾತ್ರಾರ್ಥಿಗಳ ಮೇಲೆ ಕಾರು ಹರಿದು 6 ಮಂದಿ ಸಾವಿಗೀಡಾಗಿರುವ ದಾರುಣ ಘಟನೆ ಗುಜರಾತ್ನ ಅರಾವಳಿ ಮಲ್ಪುರ್ ಪ್ರದೇಶದಲ್ಲಿ ನಡೆದಿದೆ.
ಕಾರು ಹರಿದ ಪರಿಣಾಮ 6 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಏಳು ಮಂದಿ ಗಾಯಗೊಂಡಿದ್ದಾರೆ. ಇವರು ಬನಸ್ಕಾಂತ ಜಿಲ್ಲೆಯ ಅಂಬಾಜಿ ದೇವಸ್ಥಾನಕ್ಕೆ ತೆರಳುತ್ತಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಪೈಲಟ್ಗಳ ಮುಷ್ಕರದಿಂದ ವಿಮಾನ ಸಂಚಾರ ರದ್ದು – ದೆಹಲಿ ವಿಮಾನ ನಿಲ್ದಾಣದಲ್ಲಿ ಜನಜಂಗುಳಿ
ಕಾರು ಚಾಲಕ ತನ್ನ ವಾಹನದ ಮೇಲೆ ನಿಯಂತ್ರಣ ಕಳೆದುಕೊಂಡಿದ್ದರಿಂದ ಮಾಲ್ಪುರ್ ಬಳಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಗಾಯಗೊಂಡವರನ್ನು ಆಂಬುಲೆನ್ಸ್ನಲ್ಲಿ ಮೊಡಸಾ ಆಸ್ಪತ್ರೆಗೆ ರವಾನಿಸಲಾಗಿದೆ.
ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ಸಂತ್ರಸ್ತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದು, ಮೃತರಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ 4 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ 50,000 ರೂ. ಪರಿಹಾರ ಘೋಷಿಸಿದ್ದಾರೆ. ಇದನ್ನೂ ಓದಿ: ಕೋವಿಶೀಲ್ಡ್ ಪಡೆದು ಪುತ್ರಿ ಸಾವು – ಬಿಲ್ಗೇಟ್ಸ್ ವಿರುದ್ಧ 1,000 ಕೋಟಿ ಪರಿಹಾರಕ್ಕಾಗಿ ತಂದೆಯ ಕಾನೂನು ಹೋರಾಟ
ಗಾಯಾಳುಗಳಿಗೆ ಅಗತ್ಯ ವೈದ್ಯಕೀಯ ಚಿಕಿತ್ಸೆ ಒದಗಿಸುವಂತೆ ಮುಖ್ಯಮಂತ್ರಿಗಳು ಅರಾವಳಿ ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ.