-ಕ್ರೂರಿಯ ಸಂಚಿಗೆ ಬಲಿಯಾದ ಅಮಾಯಕರು
-ಒಬ್ಬೊಬ್ಬರನ್ನು ಹಂತ ಹಂತವಾಗಿ ಕೊಂದಿದ್ದಳು
ತಿರುವನಂತಪುರಂ: ಕೇರಳ ಪೊಲೀಸರು ರಾಜ್ಯದಲ್ಲಿ ಸಂಚಲನ ಮೂಡಿಸಿದ್ದ ಪ್ರಕರಣ ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ತನ್ನದೇ ಕುಟುಂಬಸ್ಥರನ್ನು ಹಂತ ಹಂತವಾಗಿ ಕೊಲ್ಲುತ್ತಾ ಆಸ್ತಿಯನ್ನು ಅನುಭವಿಸುವ ಪ್ಲಾನ್ ಮಾಡಿದ್ದ ಹಂತಕಿ ಜೂಲಿಯ ಕನಸಿಗೆ ಪೊಲೀಸರು ತಣ್ಣೀರು ಹಾಕಿದ್ದಾರೆ. ಸುದೀರ್ಘ ತನಿಖೆಯ ಬಳಿಕ ಪ್ರಕರಣಕ್ಕೆ ಪೊಲೀಸರು ಇತಿಶ್ರೀ ಹಾಡಿ, ಕೊಲೆಯ ಸುತ್ತ ಹುಟ್ಟಿಕೊಂಡಿದ್ದ ನಿಗೂಢ ಪ್ರಶ್ನೆಗಳಿಗೆ ಉತ್ತರ ಹುಡುಕಿಕೊಂಡಿದ್ದಾರೆ.
ಹಂತಕಿ ಜೂಲಿ ತನ್ನ ಕುಟುಂಬಸ್ಥರನ್ನು ಕೊಲ್ಲುವದರ ಜೊತೆಗೆ ಸಂಬಂಧಿ ಮಹಿಳೆಯನ್ನು ಕೊಂದು ಆಕೆಯ ಪತಿಯನ್ನ ಮದುವೆ ಆಗಿದ್ದಳು. ಎರಡು ಕುಟುಂಬಗಳ ಆಸ್ತಿಯನ್ನು ಅನುಭವಿಸಲು ಹಂತಕಿ ಜೂಲಿ ಮತ್ತು ಆಕೆಯ ಎರಡನೇ ಗಂಡ ಶಜು ಇದೀಗ ಪೊಲೀಸರ ಅತಿಥಿಗಳಾಗಿದ್ದಾರೆ. ಈ ಇಬ್ಬರಿಗೆ ಸೈನೈಡ್ ಪೂರೈಸುತ್ತಿದ್ದ ಮತ್ತಿಬ್ಬರು ಸೆರೆಮನೆ ಸೇರಿಕೊಂಡಿದ್ದಾರೆ.
ಕೇರಳದ ಕೊಜ್ಹಿಕೊಡೆ ಜಿಲ್ಲೆಯಲ್ಲಿ ಘಟನೆ ನಡೆದಿದ್ದು, ಶನಿವಾರ ಪೊಲೀಸರು ಹಂತಕಿ ಜೂಲಿಯನ್ನು ಬಂಧಿಸಿದ್ದಾರೆ. ಅಲ್ಲದೇ ಕೊಲೆ ಮಾಡಲು ಸಹಕಾರ ನೀಡಿದ್ದ ಜೂಲಿ 2ನೇ ಪತಿ ಹಾಗೂ ಮತ್ತೊಬ್ಬನನ್ನು ಪೊಲೀಸರು ಬಂಧಿಸಿ ಹೆಚ್ಚಿನ ವಿಚಾರಣೆ ನಡೆಸಿದ್ದಾರೆ.
ಹಂತ ಹಂತವಾಗಿ ಕೊಲೆ: 2002 ರಿಂದ 2016ರ ಅವಧಿಯಲ್ಲಿ ಕ್ಯಾಥೊಲಿಕ್ ಕುಟುಂಬದ 6 ಮಂದಿಯನ್ನು ಜೂಲಿ ಕೊಲೆ ಮಾಡಿದ್ದಾಳೆ. ನಿವೃತ್ತ ಶಿಕ್ಷಕಿ ಅಣ್ಣಮ್ಮ ಥಾಮಸ್ (57) 2002ರಲ್ಲಿ ಏಕಾಏಕಿ ಕುಸಿದು ಬಿದ್ದು ಸಾವನ್ನಪ್ಪಿದ್ದರು. ಈ ವೇಳೆ ಅವರ ಸಾವನ್ನ ಸಹಜಸಾವು ಎಂದು ತಿಳಿದ ಕುಟುಂಬಸ್ಥರು ಅಂತ್ಯಕ್ರಿಯೆ ನಡೆಸಿದ್ದರು. 6 ವರ್ಷದ ಬಳಿಕ ಅಣ್ಣಮ್ಮ ಥಾಮಸ್ ಪತಿ ಟಾಮ್ ಥಾಮಸ್ (66) ಹೃದಯಘಾತದಿಂದ ಸಾವನ್ನಪ್ಪಿದ್ದರು. 2001 ರಲ್ಲಿ ದಂಪತಿಯ ಪುತ್ರ ರಾಯ್ ಥಾಮಸ್ (40) ಕೂಡ ಇದೇ ರೀತಿ ಮೃತ ಪಟ್ಟಿದ್ದರು. ಈ ವೇಳೆ ಅವರನ್ನು ವಿಷ ಉಣಿಸಿ ಕೊಲೆ ಮಾಡಿರುವುದು ಬೆಳಕಿಗೆ ಬಂದಿತ್ತು. ಆ ಬಳಿಕ ಅಣ್ಣಮ್ಮ ಸಹೋದರ ಮ್ಯಾಥ್ಯೂ ಮಂಜಡಿಯಿಲ್ (67) 2014 ರಲ್ಲಿ ಸಾವನ್ನಪ್ಪಿದ್ದರು. ಎಲ್ಲರನ್ನು ಒಂದೇ ಸ್ಥಳದಲ್ಲಿ ಅಂತ್ಯಕ್ರಿಯೆ ನಡೆಸಲಾಗಿತ್ತು.
ಎರಡರ ಕಂದಮ್ಮ ಬಲಿ: 2016 ರಲ್ಲಿ ಇದೇ ಕುಟುಂಬದ ಸಂಬಂಧಿಯ 2 ವರ್ಷದ ಮಗಳು ಅಲ್ಫೋನ್ಸ ಕೂಡ ಹೃದಯಾಘಾತದಿಂದ ಸಾವನ್ನಪ್ಪಿದ್ದಳು. ಇದಾದ ಕೆಲ ತಿಂಗಳ ಅಂತರದಲ್ಲೇ ಅಲ್ಫೋನ್ಸ ತಾಯಿ 27 ವರ್ಷದ ಸಿಲಿ ಕೂಡ ಸಾವನ್ನಪ್ಪಿದ್ದರು. ಇತ್ತ ಪತಿ ಮರಣದ ಬಳಿಕ ಪತ್ನಿ ಜೂಲಿ ಮೃತ ಸಿಲಿ ಪತಿಯನ್ನು ಮದುವೆಯಾಗಿ ಕುಟುಂಬ ಅಸ್ತಿ ತಮಗೆ ಸೇರಬೇಕು ಎಂದು ಕಾನೂನಿನ ಅನ್ವಯ ಮನವಿ ಸಲ್ಲಿಸಿದ್ದರು. ಆದರೆ ಟಾಮ್ ಥಾಮಸ್ ಕಿರಿಯ ಪುತ್ರನ ಮಗ ಯುಎಸ್ ಎನ್ಆರ್ ಐ ಆಗಿರುವ ಮೆಜೊ ಇದಕ್ಕೆ ಆಕ್ಷೇಪಣೆ ಸಲ್ಲಿಸಿ ಕುಟುಂಬ ಸರಣಿ ಸಾವಿನ ಕುರಿತು ಕ್ರೈಂ ಬ್ರಾಂಚ್ಗೆ ದೂರು ನೀಡಿದ್ದರು.
ಪ್ರಕರಣದ ದಾಖಲಿಸಿ ವಿಚಾರಣೆ ಆರಂಭಿಸಿದ ಅಪರಾಧದಳ ಪೊಲೀಸರಿಗೆ ವಿಚಾರಣೆ ವೇಳೆ ಶಾಕಿಂಗ್ ಅಂಶಗಳು ತಿಳಿದು ಬಂದಿದ್ದವು. ಈ ಪ್ರಕರಣ ಕೇರಳದಲ್ಲಿ ಸಂಚಲನವನ್ನು ಉಂಟು ಮಾಡಿದೆ.
ಪ್ರತಿ ಬಾರಿ ಕುಟುಂಬ ಸದಸ್ಯರನ್ನು ಕೊಲೆ ಮಾಡುವ ವೇಳೆ ಜೂಲಿ ಸೂಕ್ತ ಪ್ಲಾನ್ ಮಾಡಿ ಯಾರಿಗೂ ಅನುಮಾನಬಾರದಂತೆ ಕೃತ್ಯ ಎಸಗುತ್ತಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ಪ್ರಕರಣದಲ್ಲಿ ಪ್ರಮುಖ ಸಾಕ್ಷಿಗಳಾಗಿರುವ ಮೃತರ ವೈಜ್ಞಾನಿಕ ಪರೀಕ್ಷೆಗಳ ವರದಿಗೆ ಪೊಲೀಸರು ಕಾಯುತ್ತಿದ್ದಾರೆ. ವಿಚಾರಣೆ ವೇಳೆ ಮೃತ 6 ಮಂದಿ ಸಾವಿನ ವೇಳೆ ಜೂಲಿ ಸ್ಥಳದಲ್ಲಿ ಇರುವುದು ಖಚಿತವಾಗಿದೆ. ಈ ಪ್ರಕರಣ ತಮಗೆ ಹೆಚ್ಚು ಚಾಲೆಂಜಿಂಗ್ ಆಗಿತ್ತು ಎಂದು ಪೊಲೀಸರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಸಿಕ್ಕಿ ಬಿದ್ದಿದ್ದು ಹೇಗೆ?
ಪ್ರಕರಣವನ್ನು ಬೇದಿಸಲು ಪೊಲೀಸರು ಜೂಲಿ ಹಾಗೂ ಆಕೆಯ 2ನೇ ಪತಿ ಶಾಜುನನ್ನು 8 ಬಾರಿ ತೀವ್ರ ವಿಚಾರಣೆ ನಡೆಸಿ ಹೇಳಿಕೆ ಪಡೆದಿದ್ದರು. ಎಂಟು ಬಾರಿ ವಿಚಾರಣೆಯಲ್ಲಿಯೂ ಇಬ್ಬರ ಹೇಳಿಕೆಯಲ್ಲಿ ವ್ಯತ್ಯಾಸ ಕಂಡು ಬಂದಿತ್ತು. ಅಲ್ಲದೇ ಜೂಲಿಯ ಫೋನ್ ವಿವರ ಪಡೆದ ವೇಳೆ ಆಕೆ ಶಾಜುನೊಂದಿಗೆ ನಿರಂತರ ಸಂಪರ್ಕದಲ್ಲಿ ಇರುವುದು ತಿಳಿದು ಬಂದಿತ್ತು. ಅಂದಹಾಗೇ ಜೂಲಿ ವಾಣಿಜ್ಯ ಪದವೀಧರೆಯಾಗಿದ್ದು, ಇಂಜಿನಿಯರಿಂಗ್ ಪದವಿ ಪಡೆದಿದ್ದೇನೆ ಎಂದು ಹೇಳಿ ಕೆಲಸ ಪಡೆದಿದ್ದಳು.
ಕೊಲೆಗೆ ಸೈನೈಡ್ ಬಳಕೆ: ಜೂಲಿ ತನ್ನ ಕುಟುಂಬದ 6 ಮಂದಿಯನ್ನು ಕೊಲೆ ಮಾಡಲು ನಿಧಾನವಾಗಿ ಸಾಯಿಸುವ ಸೈನೈಡನ್ನು ಬಳಕೆ ಮಾಡಿದ್ದಳು. ಮೃತ ದೇಹಗಳನ್ನು ಹೊರ ತೆಗೆದು ಪರೀಕ್ಷೆ ನಡೆಸಿದ ವೇಳೆ ಮೃತರ ದೇಹದಲ್ಲಿ ವಿಷ ಇರುವುದು ವೈಜ್ಞಾನಿಕ ಪರೀಕ್ಷೆಗಳಲ್ಲಿ ಖಚಿತವಾಗಿತ್ತು. ಜೂಲಿಗೆ ಸೈನೈಡ್ ಪೂರೈಕೆ ಮಾಡುತ್ತಿದ್ದ ಆರೋಪದ ಅಡಿ ಅಭರಣದ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಪ್ರಜಿಕುಮಾರ್ ಹಾಗೂ ಎಂಎಸ್ ಮ್ಯಾಥ್ಯೂರನ್ನು ಬಂಧಿಸಿದ್ದಾರೆ.