ಚಿಕ್ಕಬಳ್ಳಾಪುರ: ವಸತಿ ಶಾಲೆಯ ವಿದ್ಯಾರ್ಥಿಗಳು ಬೆಳಗಿನ ಉಪಹಾರ ಸೇವಿಸಿ ಅಸ್ವಸ್ಥಗೊಂಡ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಚಿಂತಾಮಣಿ ತಾಲೂಕಿನ ಕೈವಾರ ಹೋಬಳಿ ಮಸ್ತೇನಹಳ್ಳಿ ಗ್ರಾಮದ ಹೊರವಲಯದಲ್ಲಿರುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಕೆಲವು ವಿದ್ಯಾರ್ಥಿಗಳು ಬೆಳಗಿನ ಉಪಹಾರ ಸೇವಿಸಿದ್ದರು. ಇದನ್ನು ತಿಂದಾಕ್ಷಣ ವಿದ್ಯಾರ್ಥಿಗಳಿಗೆ ವಾಂತಿ, ಬೇಧಿ, ಹೊಟ್ಟೆನೋವು ಕಾಣಿಸಿಕೊಂಡಿದೆ.
ಕೂಡಲೇ ಎಚ್ಚೆತ್ತುಕೊಂಡ ಸಿಬ್ಬಂದಿ ಇತರರಿಗೆ ತಿಂಡಿಯನ್ನು ಕೊಡುವುದನ್ನು ನಿಲ್ಲಿಸಿದ್ದಾರೆ. ಜೊತೆಗೆ ಅಸ್ವಸ್ಥರಾಗಿರುವ ಎಲ್ಲಾ ಮಕ್ಕಳಿಗೆ ಚಿಕಿತ್ಸೆ ನೀಡಿದ್ದಾರೆ. ವಿದ್ಯಾರ್ಥಿಗಳೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದನ್ನೂ ಓದಿ: 22 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗಳು- ತಬ್ಬಿ ಕಣ್ಣೀರಿಟ್ಟ ವೀಡಿಯೋ ವೈರಲ್
ಈ ವಸತಿ ಶಾಲೆಯಲ್ಲಿ ಒಟ್ಟಾರೆಯಾಗಿ 380 ವಿದ್ಯಾರ್ಥಿಗಳಿದ್ದು, ಈ ಪೈಕಿ ಮೊದಲು ತಿಂಡಿ ಸೇವಿಸಿದ್ದ 60 ಮಕ್ಕಳಲ್ಲಿ 7 ಮಂದಿ ತೀವ್ರ ಅಸ್ವಸ್ಥರಾಗಿದ್ದಾರೆ. ಅವರನ್ನು ಹೆಚ್ಚಿನ ಚಿಕಿತ್ಸೆಗೆ ಕೈವಾರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ. ಅವರು ಸಹ ಚೇತರಿಸಿಕೊಂಡಿದ್ದು, ಉಳಿದ ಮಂದಿಗೆ ವಸತಿ ನಿಲಯದಲ್ಲಿ ಚಿಕಿತ್ಸೆ ನೀಡಿದ್ದು, ಎಲ್ಲರೂ ಗುಣಮುಖರಾಗಿದ್ದಾರೆ. ಇದನ್ನೂ ಓದಿ: BBMP ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ಗರ್ಭಿಣಿಯರಿಗೆ ಸಾಮೂಹಿಕ ಸೀಮಂತ
ಮೇಲ್ನೋಟಕ್ಕೆ ಉಪಹಾರದಲ್ಲಿ ಬಳಸಿದ್ದ ಸೋಯಾಬೀನ್ ಕೆಡದಂತೆ ಇಟ್ಟಿದ್ದ ಮಾತ್ರೆಗಳನ್ನು ತೆಗೆಯದೇ ಉಪಹಾರಕ್ಕೆ ಬಳಸಿದ ಪರಿಣಾಮವಾಗಿ ಆಹಾರ ಹಾಳಾಗಿರಬಹುದು ಎಂದು ಶಂಕಿಸಲಾಗಿದೆ. ಅದೃಷ್ಟವಶಾತ್ ಅಸ್ವಸ್ಥ ವಿದ್ಯಾರ್ಥಿಗಳು ಚೇತರಿಸಿಕೊಂಡಿದ್ದು, ಎಲ್ಲರೂ ನಿಟ್ಟುಸಿರುಬಿಟ್ಟಿದ್ದಾರೆ.