ಲಕ್ನೋ: ಉತ್ತರ ಪ್ರದೇಶದ ವಿವಿಧ ಭಾಗಗಳಲ್ಲಿ ಧೂಳಿನ ಬಿರುಗಾಳಿಗೆ ಏಳು ಮಂದಿ ಸಾವನ್ನಪ್ಪಿದ್ದು, 21 ಮಂದಿ ಗಾಯಗೊಂಡಿದ್ದಾರೆ ಎಂದು ಸರ್ಕಾರದ ಅಧಿಕೃತ ವಕ್ತಾರರು ತಿಳಿಸಿದ್ದಾರೆ.
ಕಳೆದ 24 ಗಂಟೆಗಳಲ್ಲಿ ಧೂಳಿನ ಬಿರುಗಾಳಿಯಿಂದ ಏಳು ಮಂದಿ ಮೃತಪಟ್ಟಿದ್ದಾರೆ. ಗೋಂಡಾ ಮತ್ತು ಸೀತಾಪುರದಲ್ಲಿ ಮೂರು ಮಂದಿ ಮೃತಪಟ್ಟಿದ್ದು, ಫೈಜಾಬಾದ್ ನಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ವಕ್ತಾರರು ಲಕ್ನೋದಲ್ಲಿ ಹೇಳಿದ್ದಾರೆ.
ಇನ್ನು ಫೈಜಾಬಾದ್ ನಲ್ಲಿ 11 ಮಂದಿ ಹಾಗೂ ಸೀತಾಪುರದಲ್ಲಿ 10 ಮಂದಿ ಗಾಯಗೊಂಡಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಾಹಿತಿ ಪಡೆದಿದ್ದು, ಗಾಯಗೊಂಡವರಿಗೆ ಸರಿಯಾದ ಚಿಕಿತ್ಸೆಗೆ ಅವಕಾಶ ಮಾಡಿಕೊಡುವಂತೆ ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಿದ್ದಾರೆ. ಅಷ್ಟೇ ಅಲ್ಲದೇ ಧೂಳಿನ ಬಿರುಗಾಳಿಯಿಂದ ಮೃತಪಟ್ಟವರಿಗೆ ಪರಿಹಾರ ಧನವನ್ನು ಪಾವತಿಸಬೇಕೆಂದು ಆದೇಶಿಸಿದ್ದಾರೆ.
ಯೋಗಿ ಆದಿತ್ಯನಾಥ್ ಅವರು ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದು, ರಾಜ್ಯ ಸರ್ಕಾರವು ಧೂಳಿನ ಬಿರುಗಾಳಿ ಮತ್ತು ಇತರೆ ಸಂಬಂಧಿತ ಘಟನೆಗಳಿಂದ ಮೃತಪಟ್ಟ ಕುಟುಂಬದ ಸದಸ್ಯರಿಗೆ ಎಲ್ಲಾ ಸಹಾಯವನ್ನು ವಿಸ್ತರಿಸಲಿದೆ ಎಂದು ವಕ್ತಾರರು ತಿಳಿಸಿದ್ದಾರೆ.