ಮುಂಬೈ: ದೇವಾಲಯದ ಧಾರ್ಮಿಕ ಕಾರ್ಯಕ್ರಮದ ವೇಳೆ ಶೆಡ್ ಒಂದರ ಮೇಲೆ ಬೃಹತ್ ಮರವೊಂದು ಬಿದ್ದು ಏಳು ಜನರು ಸಾವನ್ನಪ್ಪಿ, ಐವರು ಗಾಯಗೊಂಡ ಘಟನೆ ಭಾನುವಾರ ಅಕೋಲಾದಲ್ಲಿ (Akola) ನಡೆದಿದೆ.
ದೇವಸ್ಥಾನ ಒಂದರ ಮುಂಭಾಗದಲ್ಲಿ ರಾತ್ರಿ 7 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಭಾರೀ ಮಳೆ ಹಾಗೂ ಗಾಳಿಯಿಂದಾಗಿ ಹಳೆಯ ಬೇವಿನ ಮರ ತಗಡಿನ ಶೆಡ್ ಮೇಲೆ ಬಿದ್ದಿದೆ. ಅದರ ಅಡಿಯಲ್ಲಿ ಹಲವಾರು ಭಕ್ತರು ಆಶ್ರಯ ಪಡೆಯುತ್ತಿದ್ದರು. ಘಟನೆಯ ಬಗ್ಗೆ ಮಾಹಿತಿ ಪಡೆದ ಅಧಿಕಾರಿಗಳು ತಕ್ಷಣ ರಕ್ಷಣಾ ಕಾರ್ಯಕ್ಕೆ ತುರ್ತು ಸೇವೆಗಳನ್ನು ಒದಗಿಸಿದ್ದಾರೆ. ಮರವನ್ನು ಜೆಸಿಬಿ ಮೂಲಕ ಎತ್ತಿಸಿ ಸಿಲುಕಿದ್ದವರನ್ನು ರಕ್ಷಿಸಿದ್ದಾರೆ. ಇದನ್ನೂ ಓದಿ: ಅಮುಲ್ಗೆ ವಿರೋಧ – ನಂದಿನಿ ಉತ್ಪನ್ನ ಖರೀದಿಸಿ ಹಂಚಿದ ಡಿಕೆಶಿ
ಶೆಡ್ನ ಅವಶೇಷಗಳ ಅಡಿ 35 ರಿಂದ 40 ಜನರು ಸಿಲುಕಿದ್ದರು. ಅದರಲ್ಲಿ ಏಳು ಮಂದಿ ಮೃತಪಟ್ಟಿದ್ದಾರೆ. ಐದು ಜನ ಗಾಯಗೊಂಡಿದ್ದು ಅಕೋಲಾ ಮೆಡಿಕಲ್ ಕಾಲೇಜಿಗೆ (Akola Medical College) ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ (Devendra Fadnavis) ಸಾವಿಗೆ ಸಂತಾಪ ಸೂಚಿಸಿದ್ದು, ಏಕನಾಥ್ ಶಿಂಧೆ ನೇತೃತ್ವದ ಮಹಾರಾಷ್ಟ್ರ ಸರ್ಕಾರವು ಮೃತರ ಕುಟುಂಬಗಳಿಗೆ ಆರ್ಥಿಕ ನೆರವು ನೀಡಲಿದೆ ಎಂದಿದ್ದಾರೆ.
ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಅಧೀಕ್ಷಕರು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಗಾಯಾಳುಗಳಿಗೆ ಸಕಾಲದಲ್ಲಿ ಚಿಕಿತ್ಸೆ ನೀಡಲು ಸಹಕರಿಸಿದ್ದಾರೆ. ಕೆಲ ಗಾಯಾಳುಗಳನ್ನು ಜಿಲ್ಲಾ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಣ್ಣ ಪುಟ್ಟ ಗಾಯಾಳುಗಳಿಗೆ ಬಾಳಾಪುರದಲ್ಲಿ (Balapur) ಚಿಕಿತ್ಸೆ ನೀಡಲಾಗುತ್ತಿದೆ. ನಾವು ಅವರೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದೇವೆ ಎಂದು ಅವರು ಹೇಳಿದ್ದಾರೆ.
ಮೃತರ ಕುಟುಂಬಗಳಿಗೆ ರಾಜ್ಯ ಸರ್ಕಾರ ಹಾಗೂ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ (Chief Minister’s Relief Fund) ಆರ್ಥಿಕ ನೆರವು ನೀಡುವುದಾಗಿ ಮುಖ್ಯಮಂತ್ರಿ ಏಕನಾಥ್ ಶಿಂಧೆ (Eknath Shinde) ಘೋಷಿಸಿದ್ದಾರೆ. ಇದನ್ನೂ ಓದಿ: ರಾಹುಲ್ ವಿರುದ್ಧ ಮಾನಹಾನಿ ಕೇಸ್ ದಾಖಲಿಸುತ್ತೇನೆ: ಅಸ್ಸಾಂ ಸಿಎಂ