ಕೊಪ್ಪಳ: ಟ್ರ್ಯಾಕ್ಟರ್ ಮತ್ತು ಟ್ಯಾಂಕರ್ ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸಿಎಂ ಸಿದ್ದರಾಮಯ್ಯ ಅವರು ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದು, ಕೊಪ್ಪಳದ ಹುಲಿಗೆಮ್ಮ ದೇವಾಲಯಕ್ಕೆ ಭಕ್ತಾದಿಗಳನ್ನು ಹೊತ್ತೊಯ್ಯುತ್ತಿದ್ದ ಟ್ರ್ಯಾಕ್ಟರ್ ಒಂದು ತುಂಗಭದ್ರಾ ಸೇತುವೆಯ ಮೇಲಿಂದ ಕೆಳಗೆಬಿದ್ದ ಪರಿಣಾಮ ಚಿಕ್ಕ ಮಕ್ಕಳು ಸೇರಿದಂತೆ ಏಳು ಮಂದಿ ಸಾವನ್ನಪ್ಪಿದ್ದಾರೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ. ಇದನ್ನೂ ಓದಿ: ಟ್ರ್ಯಾಕ್ಟರ್-ಲಾರಿ ನಡುವೆ ಭೀಕರ ಅಪಘಾತ – ಮಗು ಸೇರಿ ಏಳು ಮಂದಿಯ ದುರಂತ ಅಂತ್ಯ

ದುರ್ಘಟನೆಯ ಬಗ್ಗೆ ಸಂಸದರಾದ ತುಕಾರಾಂ ಅವರೊಂದಿಗೆ ಮಾತನಾಡಿ, ಮಾಹಿತಿ ಪಡೆದುಕೊಂಡಿದ್ದೇನೆ. ಮೃತರೆಲ್ಲರೂ ಬಡ ಕುಟುಂಬಕ್ಕೆ ಸೇರಿದವರು, ಈ ಸಾವುಗಳು ಅವರ ಕುಟುಂಬದವರನ್ನು ಮತ್ತಷ್ಟು ಕಷ್ಟಕ್ಕೆ ನೂಕುವ ಹಿನ್ನೆಲೆಯಲ್ಲಿ, ಮಾನವೀಯ ನೆಲೆಯಲ್ಲಿ ಮೃತರ ಕುಟುಂಬಗಳಿಗೆ ತಲಾ ರೂ.5 ಲಕ್ಷ ಪರಿಹಾರ ನೀಡಲಾಗುವುದು. ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವವರು ಆದಷ್ಟು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
ಏನಿದು ಘಟನೆ?
ಕೊಪ್ಪಳ (Koppal) ಜಿಲ್ಲೆಯ ಮುನಿರಾಬಾದ್ (Munirabad) ಬಳಿ ಟ್ರ್ಯಾಕ್ಟರ್ ಮತ್ತು ಟ್ಯಾಂಕರ್ ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಗು ಸೇರಿ ಏಳು ಮಂದಿ ಸಾವನ್ನಪ್ಪಿದ್ದರು. ಹಿಂದಿನಿಂದ ಟ್ಯಾಂಕರ್ ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಟ್ರ್ಯಾಕ್ಟರ್ ಸೇತುವೆಯಿಂದ ಕೆಳಕ್ಕೆ ಬಿದ್ದಿದೆ. ಪರಿಣಾಮ ಮಗು ಸೇರಿ ಏಳು ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹಲವರಿಗೆ ಗಂಭೀರ ಗಾಯಗಳಾಗಿವೆ. ಇದನ್ನೂ ಓದಿ: 2,000 ರೂ. ಬಾಡಿಗೆ ಕಟ್ಟಲಾಗದೇ ಪತ್ನಿ-ಮಗಳನ್ನೇ ಕಾಮುಕರಿಗೆ ಒಪ್ಪಿಸಿದ ಪಾಪಿ: ಮನೆ ಮಾಲೀಕ ಅರೆಸ್ಟ್

