ಉಡುಪಿ: 74ನೇ ಸ್ವಾತಂತ್ರ್ಯೋತ್ಸವನ್ನು ಜಿಲ್ಲೆಯಲ್ಲಿ ಸರಳವಾಗಿ ಆಚರಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಗೈರಾಗಿದ್ದರಿಂದ ಜಿಲ್ಲಾಧಿಕಾರಿ ಜಿ.ಜಗದೀಶ್ ಜಿಲ್ಲಾ ಕ್ರೀಡಾಂಗಣದಲ್ಲಿ ತಿರಂಗವನ್ನು ಹಾರಿಸಿದರು.
ಕೊರೊನಾ ಇರುವುದರಿಂದ ಪೊಲೀಸ್ ಅಧಿಕಾರಿಗಳ, ಅಗ್ನಿಶಾಮಕ ದಳದ ಪಥಸಂಚಲನ ಮಾತ್ರ ಇತ್ತು. ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮಗಳು, ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನ ಇರಲಿಲ್ಲ. ಸ್ವಾತಂತ್ರೋತ್ಸವದ ವೇದಿಕೆಯಲ್ಲಿ ಕೊರೊನಾ ವಾರಿಯರ್ಸ್ಗಳನ್ನು ಸನ್ಮಾನಿಸಲಾಯಿತು.
ವೈದ್ಯರು, ನರ್ಸ್ , ಆಶಾ ಕಾರ್ಯಕರ್ತೆಯರನ್ನ ಉಡುಪಿ ಜಿಲ್ಲಾ ಆಡಳಿತದ ವತಿಯಿಂದ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಜಿ.ಜಗದೀಶ್, ಜಿಲ್ಲೆಯಲ್ಲಿ ಕೊರೊನಾ ತಡೆಹಿಡಿಯುವುದು ಇಂದಿಗೂ ಸವಾಲಾಗಿಯೇ ಇದೆ. ನಮ್ಮ ಜಿಲ್ಲೆಯ ಕೊರೊನಾ ವಾರಿಯರ್ಸ್ಗಳು ಹಗಲು ರಾತ್ರಿ ಎನ್ನದೆ ನಿರಂತರ ಕರ್ತವ್ಯ ನಿರ್ವಹಿಸಿದ್ದಾರೆ. ಹಲವಾರು ಬೇಡಿಕೆಗಳ ನಡುವೆಯೂ ಕೆಲಸ ಮಾಡಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಉಡುಪಿ ಶಾಸಕ ಕೆ.ರಘುಪತಿ ಭಟ್, ಉಡುಪಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ, ತಾ.ಪಂ. ಅಧ್ಯಕ್ಷೆ ಸಂಧ್ಯಾ ಕಾಮತ್, ಜಿ.ಪಂ. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪ್ರೀತಿ ಗೆಹ್ಲೋಟ್, ಎಸ್ಪಿ ಎನ್.ವಿಷ್ಣುವರ್ಧನ್, ಕರಾವಳಿ ಕಾವಲು ಪೊಲೀಸ್ ಎಸ್ಪಿ ಚೇತನ್ ವೇದಿಕೆಯಲ್ಲಿದ್ದರು.