ಹಾಸನ: ಹೃದಯಾಘಾತದಿಂದ ಸಾವನ್ನಪ್ಪಿದ ಕೊರೊನಾ ಸೋಂಕಿತರೊಬ್ಬರ ಮೃತದೇಹದ ಅಂತ್ಯಕ್ರಿಯೆ ನಡೆಸಲು ಸಕಾಲಕ್ಕೆ ಅಧಿಕಾರಿಗಳು ಆಗಮಿಸದ ಕಾರಣ ಸುಮಾರು ಎಂಟು ಗಂಟೆಗೂ ಹೆಚ್ಚು ಕಾಲ ಮೃತದೇಹವನ್ನು ಮನೆಯಲ್ಲೇ ಇಟ್ಟುಕೊಂಡಿದ್ದ ಘಟನೆ ಹಾಸನದಲ್ಲಿ ನಡೆದಿದೆ.
ಆದರ್ಶ ನಗರದಲ್ಲಿ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದರು. ಇದೇ ಸಮಯದಲ್ಲಿ ಅವರಿಗೆ ಕೊರೊನಾ ಪಾಸಿಟಿವ್ ಇರುವುದು ಕೂಡ ತಿಳಿದು ಬಂದಿದೆ. ಹೀಗಾಗಿ ಅವರ ಅಂತ್ಯ ಸಂಸ್ಕಾರವನ್ನು ಸೂಕ್ತ ಸುರಕ್ಷಾ ಕ್ರಮಗಳೊಂದಿಗೆ ಮಾಡಲು ಸಹಾಯ ಮಾಡುವಂತೆ ಕುಟುಂಬಸ್ಥರು ಅಧಿಕಾರಿಗಳ ಬಳಿ ಮನವಿ ಮಾಡಿದ್ದಾರೆ.
ಆದರೆ ಸರಿಸುಮಾರು 8 ಗಂಟೆಗಳಷ್ಟು ತಡವಾಗಿ ಬಂದ ಅಧಿಕಾರಿಗಳು ಸಂಜೆ 5:40ರ ವೇಳೆಗೆ ಅಂತ್ಯಕ್ರಿಯೆ ನಡೆಸಲು ಸಹಾಯ ಮಾಡಿದ್ದಾರೆ. ಸೋಂಕಿತರೊಬ್ಬರ ಮೃತದೇಹ ಸತತ ಎಂಟು ಗಂಟೆಗೂ ಹೆಚ್ಚು ಕಾಲ ಮನೆಯಲ್ಲೇ ಇದ್ದ ಕಾರಣ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.