ಬೆಂಗಳೂರು: ವಿಧಾನಸೌಧದ ವಜ್ರಮಹೋತ್ಸವಕ್ಕೆ ಭರ್ಜರಿಯಾಗಿಯೇ ಎಲ್ಲಾ ಸಿದ್ಧತೆಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ವಜ್ರಮಹೋತ್ಸವಕ್ಕೆ ಸಾಕ್ಷ್ಯಚಿತ್ರಗಳ ಸಿದ್ಧತೆಯನ್ನು ಕೂಡ ಪ್ರಾರಂಭಿಸಲಾಗಿದೆ.
ಇದೇ ತಿಂಗಳು 25 ಮತ್ತು 26 ನೇ ದಿನಾಂಕದಂದು ವಿಧಾನಸೌಧದ ವಜ್ರಮಹೋತ್ಸವ ನಡೆಯಲಿದೆ. ಸುಮಾರು 10 ಕೋಟಿ ರೂ. ವೆಚ್ಚದಲ್ಲಿ ಅದ್ಧೂರಿಯಾಗಿ ಕಾರ್ಯಕ್ರಮ ನಡೆಯಲಿದೆ. ಆದರೆ ಈ ವಜ್ರಮಹೋತ್ಸಕ್ಕೆ ಸಾಕ್ಷ್ಯಚಿತ್ರಗಳು ಸಿದ್ಧವಾಗುತ್ತಿದ್ದು, ಅದಕ್ಕೆ ಇನ್ನು 8 ತಿಂಗಳು ಸಮಯ ಬೇಕಾಗಿದೆ.
ಇದು ಕೇವಲ ಸಾಕ್ಷ್ಯಚಿತ್ರವಲ್ಲ, ನಮ್ಮ ಇತಿಹಾಸದ ಮರುಸೃಷ್ಟಿ ಎಂದು ನಿರ್ದೇಶಕರಾದ ಟಿ.ಎನ್.ಸೀತಾರಾಮ್ ಹೇಳಿದ್ದಾರೆ. ಅದಕ್ಕಾಗಿ 1950 ರಿಂದ ಇಲ್ಲಿಯ ತನಕ ವಿಧಾನಸಭೆ ನಡೆದು ಬಂದಿರುವ ಹಾದಿಯನ್ನು ಮರುಸೃಷ್ಟಿ ಮಾಡಲಾಗುತ್ತದೆ. ಇದಕ್ಕಾಗಿ ಇಡೀ ವಿಧಾನಸಭೆಯ ಮಾದರಿ ಸೆಟ್ ಹಾಕಿ, ಮರುಸೃಷ್ಟಿ ಮಾಡಲಾಗುತ್ತದೆ. ಕರ್ನಾಟಕದ ಔನ್ಯತೆಗಾಗಿ ತೆಗೆದುಕೊಂಡಿರುವ ಇತಿಹಾಸ ಪ್ರಸಿದ್ಧ ತೀರ್ಮಾನಗಳು ಕೂಡ ಇದರಲ್ಲಿ ಅಡಕವಾಗಿರುತ್ತವೆ. ಪ್ರಮುಖವಾಗಿ ನಾಲ್ಕು ಗಂಟೆಗಳ ಕಾಲದ ಈ ಸಾಕ್ಷ್ಯಚಿತ್ರಕ್ಕೆ ಸಂಗೀತ ಬ್ರಹ್ಮ ಹಂಸಲೇಖ ಅವರು ಸಂಗೀತ ಸಂಯೋಜನೆ ಮಾಡುತ್ತಾರೆ ಎನ್ನಲಾಗಿದೆ.
ಈಗ ನಡೆಯುವ ಅರ್ಧ ಗಂಟೆಯ ಕಾರ್ಯಕ್ರಮ ಬರೀ ಸ್ಯಾಂಪಲ್ ಎಂದು ಹೇಳಲಾಗಿದೆ.