ಗುವಾಹಟಿ: ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಅಸ್ಸಾಂನಲ್ಲಿ ಪ್ರವಾಹ ಹಾಗೂ ಭೂಕುಸಿತ ಉಂಟಾಗಿದೆ. ಪರಿಣಾಮವಾಗಿ 9 ಮಂದಿ ಸಾವಿಗೀಡಾಗಿದ್ದು, ಲಕ್ಷಾಂತರ ಮಂದಿ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಪ್ರವಾಹದಿಂದಾಗಿ ರಾಜ್ಯದಲ್ಲಿ 27 ಜಿಲ್ಲೆಗಳಲ್ಲಿ 6.6 ಲಕ್ಷ ಜನ ತೊಂದರೆ ಅನುಭವಿಸುತ್ತಿದ್ದಾರೆ. ಪ್ರವಾಹಕ್ಕೆ ಸಿಲುಕಿದ್ದ 48,000ಕ್ಕೂ ಹೆಚ್ಚು ಜನರನ್ನು 248 ಪರಿಹಾರ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ. ಇದನ್ನೂ ಓದಿ: ಬಿಗಡಾಯಿಸಿತೇ ಬಿಡದಿ ನಿತ್ಯಾನಂದನ ಆರೋಗ್ಯ..?
ಹೊಜೈ ಮತ್ತು ಕ್ಯಾಚಾರ್ ಅತಿ ಹೆಚ್ಚು ಹಾನಿಗೊಳಗಾದ ಜಿಲ್ಲೆಗಳಾಗಿವೆ. ಪ್ರತಿ ಜಿಲ್ಲೆಯಲ್ಲಿ 1 ಲಕ್ಷಕ್ಕೂ ಹೆಚ್ಚು ಜನರು ಸಂತ್ರಸ್ತರಾಗಿದ್ದಾರೆ. ಹೋಜೈ ಜಿಲ್ಲೆಯಲ್ಲಿ ತೊಂದರೆಗೆ ಸಿಲುಕಿರುವವರ ಪೈಕಿ 2,000 ಕ್ಕೂ ಹೆಚ್ಚು ಜನರನ್ನು ರಕ್ಷಿಸಿ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.
ದಕ್ಷಿಣ ಅಸ್ಸಾಂನ ದಿಮಾ ಹಸಾವೊ ಜಿಲ್ಲೆಯಲ್ಲಿ ಹಲವೆಡೆ ಸಾರಿಗೆ ಸಂಪರ್ಕ ಕಡಿತಗೊಳಿಸಲಾಗಿದೆ. ಮಳೆಯಿಂದ ಉಂಟಾದ ಭೂಕುಸಿತಗಳು ದಿಮಾ ಹಸಾವೊಗೆ ರಸ್ತೆ ಮತ್ತು ರೈಲು ಸಂಪರ್ಕಗಳನ್ನು ಕಡಿತಗೊಳಿಸಿವೆ. ಮೃತರ ಕುಟುಂಬಗಳಿಗೆ ಅಸ್ಸಾಂ ಸರ್ಕಾರ ತಲಾ 4 ಲಕ್ಷ ರೂ. ಆರ್ಥಿಕ ನೆರವು ಘೋಷಿಸಿದೆ. ಇದನ್ನೂ ಓದಿ: ಇಂಧನಕ್ಕಾಗಿ ಸರದಿಯಲ್ಲಿ ನಿಲ್ಲಬೇಡಿ – ಲಂಕಾ ಸರ್ಕಾರ ನಾಗರಿಕರಲ್ಲಿ ಮನವಿ
ಕಳೆದ ಎರಡು ದಿನಗಳಿಂದ ಈಶಾನ್ಯ ರಾಜ್ಯಗಳಾದ ಅಸ್ಸಾಂ, ಮೇಘಾಲಯ ಮತ್ತು ಅರುಣಾಚಲ ಪ್ರದೇಶದಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅಸ್ಸಾಂಗೆ ಕೇಂದ್ರ ಸರ್ಕಾರದಿಂದ ಎಲ್ಲಾ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ. ಅವರು ಈಗಾಗಲೇ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರೊಂದಿಗೆ ಮಾತನಾಡಿದ್ದಾರೆ.