ತಿರುವನಂತಪುರ: ಕಳ್ಳತನದ (Theft) ಶಂಕೆಯ ಮೇಲೆ ಬಿಹಾರ (Bihar) ಮೂಲದ ವ್ಯಕ್ತಿಗೆ ಚಿತ್ರಹಿಂಸೆ ನೀಡಿ ಕೊಂದ 9 ಜನ ಆರೋಪಿಗಳನ್ನು ಕೇರಳ (Kerala) ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳು ಬಿಹಾರ ಮೂಲದ ರಾಜೇಶ್ ಮಂಚಿ (26) ಎಂಬಾತನನ್ನು ಕಳ್ಳ ಎಂದು ಶಂಕಿಸಿ ಆತನಿಗೆ ಮರದ ಕೋಲು ಹಾಗೂ ಪೈಪುಗಳಿಂದ ಹೊಡೆದು ಹತ್ಯೆ ಮಾಡಿದ್ದಾರೆ. ರಾಜೇಶ್ ಮಂಚಿಯ ಮೃತದೇಹ ಕೀಜಿಸ್ಸೆರಿಯಲ್ಲಿ ಪತ್ತೆಯಾಗಿದೆ ಎಂದು ಮಲಪ್ಪುರಂ (Malappuram) ಎಸ್ಪಿ ಸುಜಿತ್ ದಾಸ್ ತಿಳಿಸಿದ್ದಾರೆ. ಇದನ್ನೂ ಓದಿ: 12 ವಿದ್ಯಾರ್ಥಿನಿಯರಿಗೆ ಕಿರುಕುಳ – ಶಿಕ್ಷಕ ಅರೆಸ್ಟ್
ರಾಜೇಶ್ನ ಎರಡೂ ಕೈಗಳನ್ನು ಕಟ್ಟಿ ಹಾಕಿ ಎರಡು ಗಂಟೆಗಳಿಗೂ ಹೆಚ್ಚಿನ ಕಾಲ ನಿರಂತರವಾಗಿ ಚಿತ್ರಹಿಂಸೆ ನೀಡಿದ್ದು, ಕಳ್ಳತನ ಮಾಡಿರುವ ಬಗ್ಗೆ ಪ್ರಶ್ನಿಸಿದ್ದಾರೆ. ರಾಜೇಶ್ಗೆ ಚಿತ್ರಹಿಂಸೆ ನೀಡುತ್ತಿರುವ ವೀಡಿಯೋವನ್ನು ಆರೋಪಿಗಳು ಮೊಬೈಲ್ನಲ್ಲಿ ಚಿತ್ರೀಕರಿಸಿದ್ದು, ಇದೀಗ ವಿಡಿಯೋವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಘಟನೆಯ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ರಾಜೇಶ್ನನ್ನು ಹತ್ತಿರದ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ ಆತನನ್ನು ಪರೀಕ್ಷಿಸಿದ ವೈದ್ಯರು ಆತ ಸಾವನ್ನಪ್ಪಿದ್ದಾನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ತಮಿಳುನಾಡಿನಲ್ಲಿ ಕಳ್ಳಭಟ್ಟಿ ಸೇವಿಸಿ 10 ಸಾವು – 30ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲು
ಪ್ರಾಥಮಿಕ ತನಿಖೆಯ ಪ್ರಕಾರ, ರಾಜೇಶ್ ಒಬ್ಬ ಕಳ್ಳ ಎಂದು ಬಂಧಿತ ಆರೋಪಿಗಳು ತಿಳಿಸಿದ್ದಾರೆ. ಈ ಬಗ್ಗೆ ಪೊಲೀಸರು ವಿವರವಾದ ತನಿಖೆ ನಡೆಸುತ್ತಿದ್ದಾರೆ. ಅಲ್ಲದೇ ಪೊಲೀಸರು ಆರೋಪಿಗಳ ಮೊಬೈಲ್ಗಳನ್ನು ವಶಪಡಿಸಿಕೊಂಡಿದ್ದು, ಘಟನೆ ನಡೆದ ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಕೊಂಡೊಟ್ಟಿ ಎಎಸ್ಪಿ ನೇತೃತ್ವದಲ್ಲಿ ವಿಶೇಷ ತಂಡ ರಚಿಸಿದ್ದು, ಪ್ರಕರಣದ ತನಿಖೆ ಮುಂದುವರಿಯುತ್ತಿದೆ. ಇದನ್ನೂ ಓದಿ: ಪಾಕಿಸ್ತಾನಕ್ಕೆ ಭಾರತೀಯ ಸಿಮ್ಕಾರ್ಡ್, ಒಟಿಪಿ ಹಂಚಿಕೆ – ಮೂವರು ಅರೆಸ್ಟ್