ಬೆಂಗಳೂರು: ಗ್ಯಾರಂಟಿಗಳನ್ನು ನೀಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ (Congress) ಪಕ್ಷ ತಮ್ಮ ಆಶ್ವಾಸನೆ ಈಡೇರಿಸದೆ ಮಾತಿಗೆ ತಪ್ಪಿದೆ. ಇದರ ವಿರುದ್ಧ ‘ಮೋಸ ನಿಲ್ಲಿಸಿ, ಗ್ಯಾರಂಟಿ ಜಾರಿಗೊಳಿಸಿ’ ಹೋರಾಟಕ್ಕೆ ಬಿಜೆಪಿ (BJP) ಮುಂದಾಗಿದೆ ಎಂದು ರಾಜ್ಯದ ಮಾಜಿ ಡಿಸಿಎಂ ಡಾ.ಸಿ.ಎನ್. ಅಶ್ವಥ್ ನಾರಾಯಣ್ (Ashwath Narayan) ಅವರು ತಿಳಿಸಿದರು.
ಮಲ್ಲೇಶ್ವರಂನ ಬಿಜೆಪಿ ರಾಜ್ಯ ಕಾರ್ಯಾಲಯ ‘ಜಗನ್ನಾಥ ಭವನ’ದಲ್ಲಿ ಭಾನುವಾರ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದ ಬಳಿಕ ಗ್ಯಾರಂಟಿ ಅನುಷ್ಠಾನದ ವಿಚಾರದಲ್ಲಿ ಭಂಡತನ ತೋರುತ್ತಿದೆ. ಕಂಡಿಷನ್ ಇಲ್ಲದೆ ಗ್ಯಾರಂಟಿಗಳನ್ನು ಜಾರಿ ಮಾಡಲು ಆಗ್ರಹಿಸಿ ಸದನದ ಒಳಗೆ ಮತ್ತು ಹೊರಗೆ ಹೋರಾಟ ನಡೆಸಲಿದ್ದೇವೆ ಎಂದು ಹೇಳಿದರು.
50% ಕ್ಕಿಂತ ಹೆಚ್ಚು ವಿದ್ಯುತ್ ದರ ಏರಿಸಿದ್ದಾರೆ. ಇದರಿಂದ ಬೆಲೆ ಏರಿಕೆ ಆಗುತ್ತಿದೆ ಎಂದರಲ್ಲದೆ ಬೆಲೆ ಏರಿಕೆಯನ್ನು ಇಳಿಸಲು ಆಗ್ರಹಿಸಿದರು. ಈ ಸರ್ಕಾರ ಬೆಲೆ ಏರಿಕೆ, ಭ್ರಷ್ಟಾಚಾರಕ್ಕೆ ಸಾಕ್ಷಿಯಾಗುತ್ತಿದೆ. ಕೈಗಾರಿಕೆಗಳು, ಜನಸಾಮಾನ್ಯರು ವಿದ್ಯುತ್ ದರ ಏರಿಕೆಯಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಗ್ಯಾರಂಟಿಗಳನ್ನು ಘೋಷಿಸಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷವು ತಕ್ಷಣ ಅವುಗಳ ಅನುಷ್ಠಾನ ಮಾಡುವುದಾಗಿ ತಿಳಿಸಿತ್ತು. ಆದರೆ ಅದನ್ನು ಜಾರಿಗೊಳಿಸುವಲ್ಲಿ ವಿಫಲವಾಗಿದೆ. ಗ್ಯಾರಂಟಿಗಳ ಅನುಷ್ಠಾನಕ್ಕೆ ಆಗ್ರಹಿಸಿ ಇದೇ 4 ರಂದು ಹೋರಾಟ ರೂಪಿಸಲಾಗುತ್ತಿದೆ ಎಂದು ಅವರು ಹೇಳಿದರು.
ಸದನದ ಹೊರಗೆ ಪಕ್ಷದ ಹಿರಿಯರಾದ ಬಿಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ. ಸದನದ ಒಳಗೆ ಶಾಸಕರ ಹೋರಾಟ ನಡೆಯಲಿದೆ ಎಂದರು.
10 ಕೆಜಿ ಅಕ್ಕಿ ಈಗ 5 ಕೆಜಿಗೆ ಬಂದಿದೆ. ಈಗ 5 ಕೆಜಿ ಕೊಡಲು ಬಹಳ ಕಷ್ಟಪಡುತ್ತಿದ್ದಾರೆ. ಮಾತಿನಂತೆ 10 ಕೆಜಿ ಅಕ್ಕಿ ಕೊಡಿ. 200 ಯೂನಿಟ್ ಉಚಿತ ವಿದ್ಯುತ್ ಎಂದಿದ್ದರು. ಈಗ 200 ಯೂನಿಟ್ ಮಾಯವಾಗಿ 10 ತಿಂಗಳ ಸರಾಸರಿ ಮಾಡಿ ಹೆಚ್ಚುವರಿ 10% ಕರೆಂಟ್ ಕೊಡುವುದಾಗಿ ಮಾತನಾಡುತ್ತಿದ್ದಾರೆ. ಕಂಡಿಷನ್ ಇಲ್ಲದೆ 200 ಯೂನಿಟ್ ವಿದ್ಯುತ್ ಕೊಡಿ. ಎಲ್ಲರೂ ಎಲೆಕ್ಟ್ರಿಕ್ ಸ್ಟವ್ ಕೊಂಡುಕೊಂಡು ಕಾಯುತ್ತಿದ್ದಾರೆ ಎಂದು ಗಮನ ಸೆಳೆದರು.
ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ಮಹಿಳೆಗೆ 2 ಸಾವಿರ ರೂ. ಕೊಡುವುದಾಗಿ ಪ್ರಿಯಾಂಕಾ ಗಾಂಧಿ ಅವರೇ ಘೋಷಿಸಿದ್ದರು. ಈಗ ಮನೆಯೊಡತಿಗೆ ಮಾತ್ರ ಎನ್ನುವ ಮೂಲಕ ಮನೆಯಲ್ಲಿ ಜಗಳ ತಂದಿಡುವ ಕೆಲಸ ಮಾಡುತ್ತಿದ್ದಾರೆ. ಪ್ರತಿ ಮಹಿಳೆಗೂ ಹಣ ಕೊಡಿ ಎಂದು ಒತ್ತಾಯಿಸಿದರು.
ವಿಪಕ್ಷ ನಾಯಕನ ನೇಮಕಾತಿ ಶೀಘ್ರವೇ ಆಗಲಿದೆ ಎಂದ ಅವರು, ಈ ವಿಚಾರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಿಜೆಪಿಗೆ ಹೇಳುವ ನೈತಿಕತೆ ಇಲ್ಲ ಎಂದು ಪ್ರಶ್ನೆಗೆ ಉತ್ತರಿಸಿದರು. ನಮ್ಮದು ಕುಟುಂಬದ ಪಕ್ಷವಲ್ಲ. ಇದು ಜನರ ಪಕ್ಷ. ಜನರ ಭಾವನೆ, ಮಿಡಿತಗಳನ್ನು ಗಮನಿಸಿ ನಮ್ಮ ಪಕ್ಷ ಕೆಲಸ ಮಾಡುತ್ತಿದೆ. ಅವರಲ್ಲಿ ನಿವೃತ್ತಿ ಆಗುತ್ತೇನೆ ಎಂದವರು ಮುಖ್ಯಮಂತ್ರಿ ಆಗಿದ್ದಾರೆ ಎಂದು ವ್ಯಂಗ್ಯವಾಗಿ ತಿಳಿಸಿದರು. ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರದಲ್ಲಿ YST Tax ಜಾರಿಗೆ ಬಂದಿದೆ: ಹೆಚ್ಡಿಕೆ ಹೊಸ ಬಾಂಬ್
ಅವರಲ್ಲಿ ಎಷ್ಟು ಗುಂಪಿದೆ ನೋಡಿ. ಕಾಂಗ್ರೆಸ್ ಪಕ್ಷದ ಆಡಳಿತದಲ್ಲಿ ಭ್ರಷ್ಟಾಚಾರ, ಟ್ರಾನ್ಸ್ಫರ್ ದಂಧೆ ಶುರುವಾಗಿದೆ ನೋಡಿ. ವಿಪಕ್ಷ ನಾಯಕನ ಸ್ಥಾನಕ್ಕೆ ಯಾರೂ ಅರ್ಜಿ ಹಾಕುತ್ತಿಲ್ಲ. ಏಕೆಂದರೆ ಇದು ಕಾಂಗ್ರೆಸ್ ಪಕ್ಷವಲ್ಲ. ಅಂತಹ ಸಂಸ್ಕೃತಿ ನಮ್ಮದಲ್ಲ ಎಂದರು.
ಈ ವೇಳೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಶಾಸಕ ಮಹೇಶ್ ಟೆಂಗಿನಕಾಯಿ, ಬೆಂಗಳೂರು ಕೇಂದ್ರ ಜಿಲ್ಲಾ ಅಧ್ಯಕ್ಷ ಮಂಜುನಾಥ್ ಇದ್ದರು. ಇದನ್ನೂ ಓದಿ: ಜೆಪಿ ನಡ್ಡಾ ಅವ್ರು ದೆಹಲಿಗೆ ಬನ್ನಿ ಎಂದಿದ್ದಕ್ಕೆ ಹೋಗುತ್ತಿದ್ದೇನೆ: ಬಿಎಸ್ವೈ
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]