ಬೆಂಗಳೂರು ಆರೋಗ್ಯ ಸುಧಾರಣೆಗೆ ಪ್ರತ್ಯೇಕ ವಿಭಾಗ, ಡೆಂಗ್ಯೂ ಪ್ರಕರಣಗಳ ಮೇಲ್ವೀಚಾರಣೆಗೆ ತಂತ್ರಾಶ: ದಿನೇಶ್ ಗುಂಡೂರಾವ್

Public TV
3 Min Read
Dinesh Gundu Rao

ಬೆಂಗಳೂರು: ಸರ್ಕಾರಿ ಆರೋಗ್ಯ ಕ್ಷೇತ್ರವನ್ನ ಬಲಪಡಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯಲ್ಲಿ ಪ್ರತ್ಯೇಕ ವಿಭಾಗ ರಚಿಸುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಹೇಳಿದ್ದಾರೆ.

ಬೆಂಗಳೂರಿನಲ್ಲಿ (Bengaluru) ಡೆಂಗ್ಯೂ (Dengue) ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಗುರುವಾರ ಪಾಲಿಕೆ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು ಮಾತನಾಡುತ್ತಿದ್ದರು.‌ ಪ್ರಸ್ತುತ ಬಿಬಿಎಂಪಿ (BBMP) ವ್ಯಾಪ್ತಿಯಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ನಮ್ಮ ಕ್ಲಿನಿಕ್ ಗಳನ್ನು ಮಹಾನಗರ ಪಾಲಿಕೆ ನಿರ್ವಹಿಸುತ್ತಿದೆ. ಆದರೆ‌ ಹಲವು ಆರೋಗ್ಯ ಸೇವೆಗಳನ್ನ ಒದಗಿಸಲು ಪಾಲಿಕೆಗೆ ಸಾಧ್ಯವಿಲ್ಲ. ಹೀಗಾಗಿ ಆಡಳಿತಾತ್ಮಕ ದೃಷ್ಟಿಯಿಂದ ಬೆಂಗಳೂರಿಗೆ ಪ್ರತ್ಯೇಕ ಆರೋಗ್ಯ ವಿಭಾಗ ಅಥವಾ ಕಮಿಷನರೇಟ್ ರಚಿಸುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ಡೆಂಗ್ಯೂ ಪ್ರಕರಣಗಳು ನಿಯಂತ್ರಣ ವಿಚಾರವಾಗಿ ಮುಂಜಾಗೃತೆ ವಹಿಸುವುದು ಅಗತ್ಯ. ಈ ನಿಟ್ಟಿನಲ್ಲಿ ಡೆಂಗ್ಯೂ ಮೇಲ್ವಿಚಾರಣಾ ತಂತ್ರಾಂಶವನ್ನು ಅನಾವರಣಗೊಳಿಸುವುದಾಗಿ ದಿನೇಶ್ ಗುಂಡೂರಾವ್ ತಿಳಿಸಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ಡೆಂಗ್ಯೂ ಪ್ರಕರಣಗಳನ್ನು ತಡೆಯುವ ಹಾಗೂ ಇನ್ನಿತರೆ ಆರೋಗ್ಯ ವಿಷಯಕ್ಕೆ ಸಂಬಂಧಿಸಿದಂತೆ ಪಾಲಿಕೆ ಕೇಂದ್ರ ಕಛೇರಿಯಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಗರದಲ್ಲಿ ಕಳೆದ 2 ತಿಂಗಳಿಂದ ಹೆಚ್ಚು ಡೆಂಗ್ಯೂ ಪ್ರಕರಣಗಳು ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ಎಲ್ಲಾ ಕಡೆ ಔಷಧಿ ಸಿಂಪಡಣೆ ಹಾಗೂ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಕ್ರಮೇಣವಾಗಿ ಡೆಂಗ್ಯೂ ಪ್ರಕರಣಗಳು ನಿಯಂತ್ರಣಕ್ಕೆ ತರಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

Dinesh Gundu Rao 1

ನಗರದಲ್ಲಿ ಜುಲೈನಲ್ಲಿ 1649, ಆಗಸ್ಟ್‌ನಲ್ಲಿ 1589, ಸೆಪ್ಟಂಬರ್‌ನಲ್ಲಿ 416 ಪ್ರಕರಣಗಳು ಪತ್ತೆಯಾಗಿವೆ. ಮುಖ್ಯವಾಗಿ ಮಳೆಯಾಗಿ ನೀರು ನಿಂತ ಕಾರಣ ಸೊಳ್ಳೆಗಳ ಲಾರ್ವಾ ಉತ್ಪತ್ತಿಯಾಗಿರುವುದರಿಂದ ಹೆಚ್ಚು ಪ್ರಕರಣಗಳು ಕಂಡುಬರುತ್ತಿವೆ. ಈ ಸಂಬಂಧ ಎಲ್ಲಾ ಕಡೆ ಔಷಧಿ ಸಿಂಪಡಣೆ ಮಾಡಲಾಗುತ್ತಿದ್ದು, ಅದನ್ನು ಮತ್ತಷ್ಟು ಹೆಚ್ಚಿಸಲು ಸೂಚನೆ ನಿಡಲಾಗಿದೆ. ಅಲ್ಲದೇ ಎಲ್ಲಾ ಆರೋಗ್ಯ ವೈದ್ಯಾಧಿಕಾರಿಗಳಿಗೆ ಹೆಚ್ಚು ನಿಗಾ ವಹಿಸಲು ಸೂಚಿಸಲಾಗಿದೆ ಎಂದು ತಿಳಿಸಿದರು.

ಪಾಲಿಕೆಯ ವ್ಯಾಪ್ತಿಯಲ್ಲಿ 6 ಹೈಟೆಕ್ ಲ್ಯಾಬ್‌ಗಳಿದ್ದು, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ನಮ್ಮ ಕ್ಲಿನಿಕ್‌ಗಳಲ್ಲಿ ಸಂಗ್ರಹ ಮಾಡುವ ಬ್ಲಡ್ ಸ್ಯಾಂಪಲ್‌ಗಳನ್ನು ಲ್ಯಾಬ್‌ಗಳಿಗೆ ಕಳುಹಿಸಲು ರವಾನೆ (ಹಬ್ ಅಂಡ್ ಸ್ಪೋಕ್ ಮಾಡಲ್) ಹಾಗೂ ಇನ್ನಿತರೆ ಸೌಲಭ್ಯಗಳ ಅವಶ್ಯಕತೆಯಿದ್ದು, ಅದಕ್ಕೆ ಅನುದಾನ ಬೇಕಾಗಿದ್ದು, ಈ ಸಂಬಂಧ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಪಾಲಿಕೆ ಸಹಯೋಗದೊಂದಿಗೆ ಎನ್.ಹೆಚ್.ಎಂ ಅನುದಾನದಿಂದ ಒದಗಿಸಲಾಗುವುದು ಎಂದು ಹೇಳಿದರು.

ಪಾಲಿಕೆ ವ್ಯಾಪ್ತಿಯಲ್ಲಿ ಆರೋಗ್ಯ ನಿರೀಕ್ಷಣಾ ಅಧಿಕಾರಿಗಳು, ಕಿರಿಯ ಆರೋಗ್ಯ ಮಹಿಳಾ ಸಹಾಯಕಿಯರ ಸಂಖ್ಯೆಯನ್ನು ಹೆಚ್ಚಿಸುವ ಜೊತೆಗೆ ಅವರ ವೇತನವನ್ನು ಕೂಡಾ ಕಾರ್ಮಿಕ ಇಲಾಖೆ ಕಾಯ್ದೆ ಕನಿಷ್ಟ ವೇತನ ಹೆಚ್ಚಳ ಮಾಡಬೇಕಿದ್ದು, ಅದಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.

Dinesh Gundu Rao 2

ನಗರದಲ್ಲಿ ಎಲ್ಲಾ ಆರೋಗ್ಯ ಸೇವೆಗಳನ್ನು ಸಮನಾಂತರವಾಗಿ ತರುವ ಉದ್ದೇಶದಿಂದ ಬಿಬಿಎಂಪಿಯನ್ನು ಪ್ರತ್ಯೇಕ ಜಿಲ್ಲೆ ಎಂದು ಪರಿಗಣಿಸಲು ನಿರ್ಧಾರ ಮಾಡಲಾಗಿದ್ದು, ಈ ಬಗ್ಗೆ ಉನ್ನತ ಮಟ್ಟದಲ್ಲಿ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು. ಇದನ್ನೂ ಓದಿ: ರೋಹಿಣಿ ಸಿಂಧೂರಿಗೆ ಸಂಕಷ್ಟ

ಡೆಂಗ್ಯೂ ಮುನ್ಸೂಚನಾ ತಂತ್ರಾಂಶ ಅನಾವರಣ:
ಡೆಂಗ್ಯೂ ಪ್ರಕರಣಗಳನ್ನು ಒಂದು ತಿಂಗಳ ಮುಂಚಿತವಾಗಿಯೇ ತಿಳಿಯುವ ಉದ್ದೇಶದಿಂದ ಭಾರತೀಯ ವಿಜ್ಞಾನ ಸಂಸ್ಥೆಯಿಂದ ಒಂದು ತಂತ್ರಾಂಶವನ್ನು ಅಭಿವೃದ್ಧಿಪಡಿಸಲಾಗಿದ್ದು, ಇದರಿಂದ ಮುಂಚಿತವಾಗಿಯೇ ಮಾಹಿತಿ ಲಭ್ಯವಾಗಲಿದ್ದು, ಕೂಡಲೆ ಸೊಳ್ಳೆಗಳ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಂಡು ಡೆಂಗ್ಯೂ ಪ್ರಕರಣಗಳ ನಿಯಂತ್ರಣಕ್ಕೆ ಅನುಕೂಲವಾಗಲಿದೆ ಎಂದು ತಿಳಿಸಿದರು.

ನಮ್ಮ ಕ್ಲಿನಿಕ್ ಸಂಜೆ ಸೇವೆ:
ಬಿಬಿಎಂಪಿ ವ್ಯಾಪ್ತಿಯಲ್ಲಿ 50 ನಮ್ಮ ಕ್ಲಿನಿಕ್‌ಗಳು ಬೆಳಗ್ಗೆ 8 ರಿಂದ ರಾತ್ರಿ 8 ಗಂಟೆಯವರೆಗೆ ಕಾರ್ಯನಿರ್ವಹಿಸುವಂತೆ ಸೂಚಿಸಲಾಗಿದೆ. ಈ ಸಮಯದಲ್ಲಿ ಬೆಳಗ್ಗೆ 8 ರಿಂದ ಸಂಜೆ 4 ಗಂಟೆಯವರೆಗೆ ಲ್ಯಾಬ್ ಟೆಕ್ನಿಷಿಯನ್‌ಗಳು ಹಾಗೂ ಮಧ್ಯಾಹ್ನ 12 ರಿಂದ ರಾತ್ರಿ 8 ಗಂಟೆಯವರೆಗೆ ವೈದ್ಯರು, ನರ್ಸ್‌ಗಳಿರುವ ವ್ಯವಸ್ಥೆಯನ್ನು ಮಾಡಲಾಗುತ್ತಿದೆ ಎಂದು ಹೇಳಿದರು.

ಸಭೆಯಲ್ಲಿ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರಾದ ಡಿ. ರಂದೀಪ್, ಆರೋಗ್ಯ ವಿಭಾಗದ ವಿಶೇಷ ಆಯುಕ್ತರಾದ ಡಾ. ತ್ರಿಲೋಕ್ ಚಂದ್ರ, ಎನ್.ಹೆಚ್.ಎಂ ನ ಅಭಿಯಾನ ವೀಕ್ಷಕರಾದ ನವೀನ್ ಭಟ್, ಮುಖ್ಯ ಆರೋಗ್ಯಾಧಿಕಾರಿಗಳಾದ ಡಾ. ಬಾಲಸುಂದರ್, ಡಾ. ನಿರ್ಮಲಾ ಬುಗ್ಗಿ ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು. ಇದನ್ನೂ ಓದಿ: ಬಿಜೆಪಿ, ಜೆಡಿಎಸ್ ಮೈತ್ರಿ? – ಶಾ, ಹೆಚ್‌ಡಿಡಿ ಸಭೆಯ ಇನ್‌ಸೈಡ್‌ ಸ್ಟೋರಿ

Web Stories

Share This Article