ಡಿವೈಎಸ್‍ಪಿ ಗಣಪತಿ ಆತ್ಮಹತ್ಯೆ ಕೇಸ್ ರೀ ಓಪನ್

Public TV
2 Min Read
DYSP GANAPATI F

– ಸಿಐಡಿಯಿಂದ ಎಫ್‍ಎಸ್‍ಎಲ್ ವರದಿ ಸಲ್ಲಿಕೆ

ಮಡಿಕೇರಿ: ಓರ್ವ ಸಚಿವರು ಹಾಗು ಇಬ್ಬರು ಅಧಿಕಾರಿಗಳು ತಮಗೆ ಮಾನಸಿಕ ಕಿರುಕುಳವಾಗುತ್ತಿದೆ ಎಂದು ಆರೋಪಿಸಿ ಹೇಳಿಕೆ ನೀಡಿ ಆತ್ಮಹತ್ಯೆ ಮಾಡಿಕೊಂಡಿದ್ದ ಡಿವೈಎಸ್ಪಿ ಎಂ.ಕೆ.ಗಣಪತಿ ಪ್ರಕರಣಕ್ಕೆ ಮತ್ತೆ ಮರುಜೀವ ಬಂದಿದೆ.

ಸಿಐಡಿಯಿಂದ ಬಿ ರಿಪೋರ್ಟ್, ಹೈಕೋರ್ಟ್ ನಲ್ಲಿಯೂ ಖಾಸಗಿ ದೂರು ವಜಾ, ಮಡಿಕೇರಿ ಜೆಎಂಎಫ್ ಸಿ ನ್ಯಾಯಾಲಯದಲ್ಲಿ ಗಣಪತಿ ಪುತ್ರ ನೇಹಲ್ ಕೇಸ್ ಮುಂದುವರೆಸಲು ನಿರಾಸಕ್ತಿಯಿಂದ ಇನ್ನೇನು ಈ ಪ್ರಕರಣ ಮುಗಿದೇ ಹೋಯ್ತು ಎನ್ನುವಷ್ಟರಲ್ಲಿ ಮಡಿಕೇರಿ ಜೆಎಂಎಫ್ ಸಿ ಕೋರ್ಟ್ ಕುಟುಂಬ ಸದಸ್ಯರನ್ನು ದೂರುದಾರರನ್ನಾಗಿ ಪರಿಗಣಿಸುವಂತೆ ಇಂದು ಅದೇಶ ನೀಡಿದೆ.

ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಅನ್ನಪೂರ್ಣಶ್ವರಿ ಕುಟುಂಬ ಸದಸ್ಯರನ್ನು ಈ ಪ್ರಕರಣದಲ್ಲಿ ದೂರುದಾರರನ್ನಾಗಿ ಪರಿಗಣಿಸುವಂತೆ ಇಂದು ಅದೇಶ ನೀಡಿದ್ದಾರೆ.

ganapati brother
ಮಾಚ್ಚಯ್ಯ (ಗಣಪತಿಯವರ ಸಹೋದರ)

ಮೊದಲ ಜಯ: ಏಪ್ರಿಲ್ 10ರ ಒಳಗಡೆ ನಮಗೆ ಆಕ್ಷೇಪಣೆ ಸಲ್ಲಿಸಲು ಆದೇಶ ಸಿಕ್ಕಿದೆ. ವಿಶೇಷ ಏನೆಂದರೆ ಪ್ರಕರಣದ ಬಿ ರಿಪೋರ್ಟ್ ಸಲ್ಲಿಕೆಯಾದ ಬಳಿಕ ಇಂದು ಸಿಐಡಿಯವರು ವಿಧಿವಿಜ್ಞಾನ ಪ್ರಯೋಗಾಲಯದ (ಎಫ್‍ಎಸ್‍ಎಲ್) ವರದಿಯನ್ನು ಸಲ್ಲಿಸಿದ್ದಾರೆ. ಇಲ್ಲಿಯವರೆಗೆ ಸುಮ್ಮನಿದ್ದ ಇವರು ಇಂದು ವರದಿ ಸಲ್ಲಿಸಿದ್ದನ್ನು ನೋಡುವಾಗ ನಮ್ಮ ಅನುಮಾನಗಳು ಮತ್ತಷ್ಟು ಹೆಚ್ಚಾಗಿದ್ದು, ತನಿಖೆ ಹೇಗೆ ನಡೆದಿದೆ ಎನ್ನುವ ಪ್ರಶ್ನೆ ಹುಟ್ಟಿಕೊಂಡಿದೆ. ಈ ಪ್ರಕರಣದಲ್ಲಿ ನಮಗೆ ಈಗ ಮೊದಲ ಜಯ ಸಿಕ್ಕಿದೆ ಎಂದು ಗಣಪತಿ ಸಹೋದರ ಮಾಚಯ್ಯ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಏನಿದು ಪ್ರಕರಣ?:
2016 ಜುಲೈ 7 ರಂದು ಡಿವೈಎಸ್ಪಿ ಗಣಪತಿ ಮಡಿಕೇರಿಯ ಲಾಡ್ಜ್ ನಲ್ಲಿ ಆತ್ಮಹತ್ಯೆ ಶರಣಾಗುವ ಮುನ್ನ ಸ್ಥಳೀಯ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ, ಮುಂದೆ ನನಗೆ ಏನಾದ್ರೂ ಆದರೆ ಅದಕ್ಕೆ ಸಚಿವ ಕೆಜೆ ಜಾರ್ಜ್, ಪೊಲೀಸ್ ಅಧಿಕಾರಿಗಳಾದ ಅಶಿತ್ ಮೋಹನ್ ಪ್ರಸಾದ್ ಮತ್ತು ಪ್ರಣಬ್ ಮೊಹಂತಿ ಕಾರಣ ಎಂದು ನೇರವಾಗಿ ಆರೋಪಿಸಿದ್ದರು. ಈ ಸಂದರ್ಶನ ನೀಡಿದ ಬಳಿಕ ಸಂಜೆ ಮಡಿಕೇರಿ ನಗರದ ಲಾಡ್ಜ್ ನಲ್ಲಿ ನೇಣಿಗೆ ಶರಣಾಗಿದ್ದರು. ಈ ಪ್ರಕರಣದ ತನಿಖೆಯನ್ನು ನಡೆಸಿದ ಸಿಐಡಿ ಸಚಿವ ಜಾರ್ಜ್ ಮತ್ತು ಐಪಿಎಸ್ ಅಧಿಕಾರಿಗಳಿಗೆ ಬಿ ರಿಪೋರ್ಟ್ ಸಲ್ಲಿಸಿ ಕ್ಲೀನ್ ಚೀಟ್ ನೀಡಿತ್ತು.

ganapati sister
ಸಬೀತಾ (ಗಣಪತಿಯವರ ಸಹೋದರಿ)

ಸುಪ್ರೀಂನಲ್ಲಿದೆ ಮತ್ತೊಂದು ಅರ್ಜಿ: ಸಿಐಡಿ ವರದಿಯಲ್ಲಿ ಸಚಿವ ಜಾರ್ಜ್ ಗೆ ಕ್ಲಿನ್ ಚಿಟ್ ನೀಡಿದ್ದನ್ನು ಪ್ರಶ್ನಿಸಿ ಸಿಬಿಐ ತನಿಖೆಗೆ ಆಗ್ರಹಿಸುವಂತೆಗಣಪತಿ ತಂದೆ ಕುಶಾಲಪ್ಪ ಈ ಹಿಂದೆ ಕರ್ನಾಟಕ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ ಈ ಅರ್ಜಿಯನ್ನು ನ್ಯಾ.ಎಸ್.ಅಬ್ದುಲ್ ನಜೀರ್ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠ ವಜಾಗೊಳಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಕುಶಾಲಪ್ಪ ಸುಪ್ರೀಂ ಕೋರ್ಟ್ ಮೆಟ್ಟಿಲು ಏರಿದ್ದು, ನ್ಯಾ. ಆನಂದಕುನಾರ್ ಗೊಯೇಲ್ ಮತ್ತು ಉದಯ್ ಲಲಿತ್ ನೇತೃತ್ವದ ದ್ವಿ ಸದಸ್ಯ ಪೀಠದಲ್ಲಿ ಈ ಅರ್ಜಿಯ ವಿಚಾರಣೆ ನಡೆಯುತ್ತಿದೆ.

ತಕರಾರು ಅರ್ಜಿ ಸಲ್ಲಿಸಿರಲಿಲ್ಲ: ಸಚಿವ ಜಾರ್ಜ್ ಅವರಿಗೆ ಸಿಐಡಿ ನೀಡಿರುವ ಬಿ ರಿಪೋರ್ಟ್ ಅನ್ನು ಗಣಪತಿ ಅವರ ಪುತ್ರ ನೇಹಾಲ್ ಒಪ್ಪಿಕೊಂಡಿದ್ದರು. ಸಿಐಡಿ ಸಲ್ಲಿಸಿದ ಬಿ ರಿಪೋರ್ಟ್ ಗೆ ಗಣಪತಿ ಪುತ್ರ ಯಾವುದೇ ತಕರಾರು ಅರ್ಜಿ ಸಲ್ಲಿಸಿರಲಿಲ್ಲ.

 

 

Share This Article
Leave a Comment

Leave a Reply

Your email address will not be published. Required fields are marked *