ನವದೆಹಲಿ: ವಿಶ್ವಶ್ರೇಷ್ಠ ಆರ್ಥಿಕ ತಜ್ಞ ಮನಮೋಹನ್ ಸಿಂಗ್ ಅವರು ನಿಧನ ಹೊಂದಿದ್ದ ಬೆನ್ನಲ್ಲೇ ಪ್ರಧಾನಿಯಾಗಿ ಆಡಿದ ಕೊನೆಯ ಮಾತಿನ ವೀಡಿಯೋ ತುಣುಕುಗಳು ಜಾಲತಾಣಗಳಲ್ಲಿ ಹರಿದಾಡುತ್ತಿವೆ.
ಹೌದು. 2004ರಿಂದ 2014ರ ವರೆಗೆ ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್ ಅವರು 2014ರ ಜನವರಿ 3ರಂದು ಪ್ರಧಾನಿಯಾಗಿ ತಮ್ಮ ಕೊನೆಯ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. ಇದನ್ನೂ ಓದಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ – ಶುಕ್ರವಾರ ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ
ಈ ವೇಳೆ ಪತ್ರಕರ್ತರೊಬ್ಬರು ʻತಮ್ಮ ಸಚಿವರನ್ನು ಹಿಡಿತದಲ್ಲಿಟ್ಟುಕೊಳ್ಳಲು ತೋರಿದ ಅಸಮರ್ಥತೆ ಮತ್ತು ಹಲವಾರು ಸಂದರ್ಭಗಳಲ್ಲಿ ಕಾರ್ಯನಿರ್ವಹಿಸಲು ನಿರಾಕರಿಸಿದʼ ಬಗ್ಗೆ ಪ್ರಶ್ನೆ ಎತ್ತಿದ್ದರು. ಇದಕ್ಕೆ ನಗುತ್ತಲೇ ಉತ್ತರಿಸಿದ ಸಿಂಗ್, ಸಮಕಾಲೀನ ಮಾಧ್ಯಮಗಳಿಗಿಂತ ಅಥವಾ ಸಂಸತ್ತಿನಲ್ಲಿ ವಿಪಕ್ಷಗಳಿಗಿಂತ ಇತಿಹಾಸವು ನನಗೆ ಕರುಣೆ ತೋರುತ್ತದೆ ಎಂದು ಪ್ರಾಮಾಣಿಕವಾಗಿ ನಂಬುತ್ತೇನೆ ಎಂದು ನಗುತ್ತಲೇ ಹೇಳಿದ್ದರು.
ಸರ್ಕಾರಿ ವ್ಯವಸ್ಥೆಯಲ್ಲಿ ಕ್ಯಾಬಿನೆಟ್ನಲ್ಲಿ ನಡೆಯುವ ಎಲ್ಲಾ ವಿಷಯಗಳನ್ನು ನಾನು ಬಹಿರಂಗಪಡಿಸಲು ಸಾಧ್ಯವಿಲ್ಲ. ಸಮ್ಮಿಶ್ರ ರಾಜಕೀಯ ಸಂದರ್ಭಗಳನ್ನೂ ಗಣನೆಗೆ ತೆಗೆದುಕೊಂಡು ಒತ್ತಡದ ಪರಿಸ್ಥಿತಿಯಲ್ಲೂ ಸಾಧ್ಯವಾದಷ್ಟು ಉತ್ತಮ ಕೆಲಸಗಳನ್ನು ಮಾಡಿದ್ದೇನೆ ಎಂದು ಹೇಳಿದ್ದರು. ಇದನ್ನೂ ಓದಿ: ನನ್ನ ಮಾರ್ಗದರ್ಶಕನನ್ನು ಕಳೆದುಕೊಂಡಿದ್ದೇನೆ: ಮನಮೋಹನ್ ಸಿಂಗ್ ನಿಧನಕ್ಕೆ ಕಂಬನಿ ಮಿಡಿದ ರಾಗಾ
ಆ ಸಂದರ್ಭದಲ್ಲಿ ಯುಪಿಎ-2 ಸರ್ಕಾರವು ಹಲವಾರು ಸಚಿವಾಲಯಗಳಲ್ಲಿ ಭ್ರಷ್ಟಾಚಾರ ಆರೋಪ ಎದುರಿಸುತ್ತಿತ್ತು. ಇದು 2014ರ ನಂತರ ಕಾಂಗ್ರೆಸ್ ಸೋಲು ಮತ್ತು ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೇರಲು ಪ್ರಮುಖ ಕಾರಣವೂ ಆಯಿತು.
ಜಾಬ್ ವಿಶ್ವವಿದ್ಯಾಲಯ, ಆಕ್ಸ್ಫರ್ಡ್ ಮತ್ತು ಕೇಂಬ್ರಿಡ್ಜ್ ವಿಶ್ವವಿದ್ಯಾಲಯಗಳಲ್ಲಿ ಶಿಕ್ಷಣ ಪಡೆದ ಮನಮೋಹನ್ ಸಿಂಗ್ ಅವರು ಮೊದಲು ಅರ್ಥಶಾಸ್ತ್ರಜ್ಞರಾಗಿ ಕೆಲಸ ಮಾಡಿದ್ದರು. ಬಳಿಕ ಮಾಜಿ ಪ್ರಧಾನಿ ಪಿ.ವಿ ನರಸಿಂಹರಾವ್ ಅವರ ಸರ್ಕಾರದಲ್ಲಿ ವಿತ್ತ ಸಚಿವರಾಗಿ ಆರ್ಥಿಕತೆಯಲ್ಲಿ ಬಹುದೊಡ್ಡ ಕ್ರಾಂತಿಯನ್ನುಂಟುಮಾಡಿದರು. ವ್ಯಾಪಕ ಸುಧಾರಣೆಗಳನ್ನ ಜಾರಿಗೆ ತಂದಿದ್ದರು. ಬಳಿಕ 2004 ರಿಂದ 2014ರ ವರೆಗೆ ಭಾರತದ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದರು. ಇದನ್ನೂ ಓದಿ: ಭಾರತದ ಮೊದಲ ಸಿಖ್ ಪ್ರಧಾನಿ ಮನಮೋಹನ್ ಸಿಂಗ್ – ಸಜ್ಜನ, ಮಹಾನ್ ಮೇಧಾವಿಯ ಜೀವನ, ರಾಜಕೀಯ ಸಾಧನೆ