ಆನೇಕಲ್: ಆನೇಕಲ್ ತಾಲ್ಲೂಕಿನ ಹೆನ್ನಾಗರ ಯಲ್ಲಮ್ಮ ದೇವಿ ದೇವಾಲಯದಲ್ಲಿ (Yellamma Devi Temple) ದೇವಿಯ ಬ್ರಹ್ಮರಥೋತ್ಸವ ಇಂದು ವೈಭವದಿಂದ ನಡೆಯಿತು. ಬ್ರಹ್ಮರಥೋತ್ಸವದ ಪ್ರಯುಕ್ತ ಇಂದು ದೇವಾಲಯದಲ್ಲಿ ದೇವಿಗೆ ಅಭಿಷೇಕ, ವಿಶೇಷ ಅಲಂಕಾರ ಮಾಡಲಾಗಿತ್ತು. ಜ್ಯೋತಿಲಿಂಗ ಸ್ವಾಮಿ ಗದ್ದುಗೆಗೆ ಅಭಿಷೇಕ, ಹೋಮ ನೆರವೇರಿಸಲಾಯಿತು.
ಮಧ್ಯಾಹ್ನ ಅಲಂಕೃತ ರಥದಲ್ಲಿ ದೇವಿಯ ಉತ್ಸವ ಮೂರ್ತಿ ಕುಳ್ಳಿರಿಸಲಾಯಿತು. ಅರ್ಚಕರು ಧಾರ್ಮಿಕ ಪೂಜಾ ವಿಧಿವಿಧಾನ ನೆರವೇರಿಸಿದ ನಂತರ ಗುಮ್ಮಳಾಪುರ ಸಂಸ್ಥಾನ ಮಠದ ಡಾ.ಶಿವಾನಂದ ಶಿವಾಚಾರ್ಯ ಸ್ವಾಮೀಜಿಗಳು ರಥೋತ್ಸವಕ್ಕೆ (Yellamma Devi Rathotsava) ಚಾಲನೆ ನೀಡಿದರು. ನೆರೆದಿದ್ದ ಭಕ್ತರು ದೇವಿಯ ಜಯಘೋಷ ಮಾಡುತ್ತಾ ದವನ ಚುಚ್ಚಿದ ಬಾಳೆಹಣ್ಣನ್ನು ಎಸೆಯುವ ಮೂಲಕ ತಮ್ಮ ಭಕ್ತಿಯನ್ನು ಸಮರ್ಪಿಸಿದರು.
ಹೆನ್ನಾಗರ ಗ್ರಾಮ ಪಂಚಾಯಿತಿ ಸೇರಿದಂತೆ ಜಿಗಣಿ ಹೋಬಳಿಯ ಸಾವಿರಾರು ಮಂದಿ ಭಕ್ತರು ವೈಭವದ ಜಾತ್ರೆಯಲ್ಲಿ ಪಾಲ್ಗೊಂಡಿದ್ದರು. ಮಹಿಳೆಯರು ದೇವಿಗೆ ಮಡಿಲಕ್ಕಿ ಸಲ್ಲಿಸಿ ತಮ್ಮ ಭಕ್ತಿಯನ್ನು ಸಮರ್ಪಿಸುತ್ತಿದ್ದ ದೃಶ್ಯ ಕಂಡುಬಂದಿತು. ಜಾತ್ರೆಯ ಅಂಗವಾಗಿ ಬೆಳಗಿನಿಂದ ಸಂಜೆಯವರೆಗೂ ಅನ್ನದಾಸೋಹ ಏರ್ಪಡಿಸಲಾಗಿತ್ತು. ದೇವಾಲಯದ ಆವರಣದಲ್ಲಿ ಅರವಂಟಿಕೆಗಳನ್ನ ಸ್ಥಾಪಿಸಿ ನೀರು ಮಜ್ಜಿಗೆ ಪಾನಕ, ಕೋಸಂಬರಿ ವಿತರಿಸುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ಗುಮ್ಮಳಾಪುರ ಸಂಸ್ಥಾನ ಮಠದ ಡಾ.ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ ಹೆನ್ನಾಗರ ಯಲ್ಲಮ್ಮ ದೇವಿ ದೇವಾಲಯವು ಎರಡನೇ ಸವದತ್ತಿಯಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ. ಧಾರ್ಮಿಕ ಕಾರ್ಯಗಳಿಂದ ಗ್ರಾಮದಲ್ಲಿ ಶಾಂತಿ ನೆಮ್ಮದಿ ದೊರೆಯುತ್ತದೆ ಎಂದು ತಿಳಿಸಿದರು.



