ಕಾರವಾರ: ಭಟ್ಕಳದ (Bhatkal) ಮುರಿನಕಟ್ಟೆ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ, ಭಟ್ಕಳದಲ್ಲಿ ನಡೆದಿರುವ ಈ ದುಷ್ಕೃತ್ಯಕ್ಕೆ ರಾಜ್ಯ ಸರ್ಕಾರವೇ ಕಾರಣ ಎಂದು ಬಿಜೆಪಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ (Vishweshwar Hegde Kageri) ಆರೋಪಿಸಿದ್ದಾರೆ.
ಇಂದು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ, ರಾಜ್ಯ ಸರ್ಕಾರವು ಅಲ್ಪಸಂಖ್ಯಾತರ ಮೇಲಿನ ಪ್ರಕರಣಗಳನ್ನು ಹಿಂಪಡೆದಿರುವುದು ಇಂತಹ ಕೃತ್ಯಗಳಿಗೆ ಪುಷ್ಟಿ ಕೊಟ್ಟಂತಾಗಿದೆ ಎಂದು ಕಾಗೇರಿ ದೂರಿದರು. ನಾವು ಏನು ಮಾಡಿದರೂ ನಡೆಯುತ್ತದೆ ಎಂಬ ಭ್ರಮೆಯಲ್ಲಿ ಕೆಲವರು ಇದ್ದಾರೆ. ಕೃತ್ಯ ತಡೆಯಲು ಹೋದ ಪೊಲೀಸರ ಮೇಲೆಯೇ ಹಲ್ಲೆಗೆ ಮುಂದಾಗುತ್ತಾರೆ ಎಂದರೆ ಇದರ ಅರ್ಥ ಏನು ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಭಟ್ಕಳದಲ್ಲಿ ನಿಷೇಧಾಜ್ಞೆ; ಬಕ್ರೀದ್ ಹಬ್ಬದಂದು ಸಾರ್ವಜನಿಕ ನಮಾಜ್ ಮಾಡದಿರಲು ಮುಸ್ಲಿಮರ ನಿರ್ಧಾರ

ರಾಷ್ಟ್ರೀಯ ಹೆದ್ದಾರಿ ಅಗಲೀಕರಣಕ್ಕಾಗಿ ಮುರಿನಕಟ್ಟೆಯನ್ನು ಬೇರೆಡೆಗೆ ಸ್ಥಳಾಂತರಿಸಲು ನಿಶ್ಚಯಿಸಲಾಗಿತ್ತು. ಇದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್ಹೆಚ್ಎಐ), ಜಿಲ್ಲಾಡಳಿತ ಮತ್ತು ಹಿಂದೂಗಳಿಗೆ ಸಂಬಂಧಪಟ್ಟ ವಿಷಯವಾಗಿದೆ. ಇದರಲ್ಲಿ ಮುಸ್ಲಿಮರ ಭಾವನೆಗಳಿಗೆ ನೋವುಂಟು ಮಾಡುವ ಯಾವುದೇ ವಿಷಯ ಇರಲಿಲ್ಲ. ಹಿಂದೂಗಳ ಭಾವನೆಗಳಿಗೆ ಬೆಲೆ ಕೊಟ್ಟು ಜಿಲ್ಲಾಡಳಿತದ ಸಹಕಾರದೊಂದಿಗೆ ಹೊಸ ಕಟ್ಟೆಯನ್ನು ನಿರ್ಮಿಸಲಾಗಿತ್ತು ಎಂದು ಸ್ಪಷ್ಟಪಡಿಸಿದರು.
ಇತ್ತೀಚೆಗೆ ರಸ್ತೆ ಅಪಘಾತದಲ್ಲಿ 11 ಜನರು ಸಾವನ್ನಪ್ಪಿರುವುದಕ್ಕೆ ಇಡೀ ಭಟ್ಕಳವೇ ದುಃಖದಲ್ಲಿತ್ತು. ಇಂತಹ ಸಂದರ್ಭವನ್ನು ಬಳಸಿಕೊಂಡು ಸಾವಿರಾರು ಮುಸ್ಲಿಮರು ಒಟ್ಟಾಗಿ ಸೇರಿ ಕಟ್ಟೆಯನ್ನು ಧ್ವಂಸ ಮಾಡಿದ್ದಾರೆ. ಈ ವೇಳೆ ಅಡ್ಡಿಪಡಿಸಿದ ಪೊಲೀಸರ ಮೇಲೂ ಹಲ್ಲೆ ನಡೆಸಲಾಗಿದೆ. ಶಾಂತವಾಗಿರುವ ಭಟ್ಕಳದಲ್ಲಿ ಕೋಮು ಗಲಭೆ ಸೃಷ್ಟಿಸಲು ಪ್ರೇರಣೆ ನೀಡಲಾಗಿದೆ. ಭಟ್ಕಳದಲ್ಲಿ ಅಶಾಂತಿ ಮತ್ತು ಗೊಂದಲ ಮೂಡಿಸಲೆಂದೇ ಈ ಕೃತ್ಯವನ್ನು ಮಾಡಲಾಗಿದೆ ಎಂದು ಆರೋಪಿಸಿದರು. ಇದನ್ನೂ ಓದಿ: ಮೂರಿನಕಟ್ಟೆ ವಿವಾದ| ಭಟ್ಕಳದ ಶಹರ, ಜಾಲಿ ಪಟ್ಟಣ ಪಂಚಾಯ್ತಿ ವ್ಯಾಪ್ತಿಯಲ್ಲಿ 3 ದಿನ ಮದ್ಯದಂಗಡಿಗಳು ಬಂದ್
ಅವರಿಗೇನಾದರೂ ಭಿನ್ನಾಭಿಪ್ರಾಯ ಇದ್ದಿದ್ದರೆ, ಅದನ್ನು ಜಿಲ್ಲಾಧಿಕಾರಿ ಸೇರಿದಂತೆ ಬೇರೆ ಉನ್ನತ ಅಧಿಕಾರಿಗಳಿಗೆ ತಿಳಿಸಬೇಕಿತ್ತು. ಅದನ್ನು ಬಿಟ್ಟು ಕಾನೂನನ್ನು ಕೈಗೆತ್ತಿಕೊಂಡಿರುವುದನ್ನು ನಾವು ಉಗ್ರವಾಗಿ ಖಂಡಿಸುತ್ತೇವೆ ಎಂದು ಹೇಳಿದರು.
ಈ ದುಷ್ಕೃತ್ಯವನ್ನು ಖಂಡಿಸಿ ಮತ್ತು ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಮೇ 29 ರಂದು ಭಟ್ಕಳದಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನಾ ಸಭೆ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ. ಬಿ.ವೈ. ವಿಜಯೇಂದ್ರ ಮತ್ತು ಆರ್. ಅಶೋಕ ಅವರ ನೇತೃತ್ವದಲ್ಲಿ ಈ ಪ್ರತಿಭಟನಾ ಸಭೆ ನಡೆಯಲಿದೆ. ಈ ಕೃತ್ಯದಲ್ಲಿ ಭಾಗಿಯಾದವರನ್ನು ಪೊಲೀಸರು ಕೂಡಲೇ ಬಂಧಿಸಿ, ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಒತ್ತಾಯಿಸಿದ್ದಾರೆ.
