ರಾಹುಲ್ ಗಾಂಧಿಗೆ ಮೋದಿ ಟಾಂಗ್
ನವದೆಹಲಿ: ಸಂಸತ್ತಿನ ಮಾನ್ಸೂನ್ ಅಧಿವೇಶನ (Monsoon Session) ಆರಂಭಕ್ಕೂ ಮುನ್ನ ಪ್ರಧಾನಿ ನರೇಂದ್ರ (PM Modi) ಮೋದಿ ದೇಶವನ್ನುದ್ದೇಶಿಸಿ ಮಾತನಾಡಿದ್ದು, ಭಾರತ ಹಲವು ಮಹತ್ವದ ಸಾಧನೆಗಳನ್ನು ಮಾಡಿದೆ ಎಂದು ಹೇಳಿದ್ದಾರೆ.
ಸಂಸತ್ತಿನ ಮಾನ್ಸೂನ್ ಅಧಿವೇಶನ ಆರಂಭಕ್ಕೂ ಮುನ್ನ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಈ ಅಧಿವೇಶನ ಫಲಪ್ರದವಾಗಲಿ ಎಂದು ಆಶಿಸಿದರು.
ಮಾನ್ಸೂನ್ ಹೇಗೆ ದೇಶಕ್ಕೆ ಅಗತ್ಯವೋ, ಅದೇ ರೀತಿ ಸಂಸತ್ತಿನ ಮಾನ್ಸೂನ್ ಅಧಿವೇಶನವೂ ದೇಶದ ಅಭಿವೃದ್ಧಿಗೆ ಸಹಕಾರಿಯಾಗಬೇಕು. ಭಾರತ ಕಳೆದ ಕೆಲವು ತಿಂಗಳಲ್ಲಿ ಹಲವು ಮೈಲಿಗಲ್ಲುಗಳನ್ನು ಸಾಧಿಸಿದೆ. ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ದೇಶದ ಸಾಧನೆಗಳು ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆ ಪಡುವಂತಿವೆ ಎಂದು ತಿಳಿಸಿದರು.
ಇತ್ತೀಚೆಗೆ ಖಾಸಗಿ ಬಾಹ್ಯಾಕಾಶ ಸಂಸ್ಥೆ ಸ್ಕೈರೂಟ್ ಸಾಧಿಸಿದ ಯಶಸ್ಸನ್ನು ಉಲ್ಲೇಖಿಸಿ, ಇಂತಹ ಯುವಕರು ದೇಶಕ್ಕೆ ಹೊಸ ದಿಕ್ಕು ತೋರಿಸುತ್ತಿದ್ದಾರೆ. ನಾನು 56 ವರ್ಷದ ಯುವಕರ ಬಗ್ಗೆ ಮಾತನಾಡುತ್ತಿಲ್ಲ ಎಂದು ಹೇಳುವ ಮೂಲಕ ಪರೋಕ್ಷವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಟಾಂಗ್ ನೀಡಿದರು.
ಪಶ್ಚಿಮ ಏಷ್ಯಾದ ಯುದ್ಧದಿಂದ ಇಂಧನ ಕ್ಷೇತ್ರದಲ್ಲಿ ಹಲವು ಸವಾಲುಗಳು ಎದುರಾಗಿದ್ದರೂ, ಭಾರತ ಶೇ.7.7ರ ಆರ್ಥಿಕ ಬೆಳವಣಿಗೆ ಕಾಯ್ದುಕೊಂಡಿದೆ. ಇದು ದೇಶದ ಶಕ್ತಿ ಮತ್ತು ಸಾಮರ್ಥ್ಯವನ್ನು ತೋರಿಸುತ್ತದೆ. ರಾಜಸ್ಥಾನದ ತೈಲ ಸಂಸ್ಕರಣಾಗಾರ, ಸೆಮಿಕಂಡಕ್ಟರ್ ಘಟಕ ಹಾಗೂ ಹಸಿರು ಹೈಡ್ರೋಜನ್ ರೈಲು ಸೇರಿದಂತೆ ಇತ್ತೀಚಿನ ಅಭಿವೃದ್ಧಿ ಯೋಜನೆಗಳನ್ನು ಪ್ರಧಾನಿ ಪ್ರಸ್ತಾಪಿಸಿ, ಇವೆಲ್ಲ ಭಾರತ ವೇಗವಾಗಿ ಬೆಳೆಯುತ್ತಿರುವ ರಾಷ್ಟ್ರ ಎಂಬುದಕ್ಕೆ ಸಾಕ್ಷಿ ಎಂದು ಹೇಳಿದರು.ಇದನ್ನೂ ಓದಿ: ಮುರಿದುಬಿದ್ದ ತುಂಗಭದ್ರಾ ನದಿಯ ಉಕ್ಕಿನ ಸೇತುವೆ ಸರಳು – ರಾಯಚೂರು, ಮಂತ್ರಾಲಯ ಮಾರ್ಗದಲ್ಲಿ ಟ್ರಾಫಿಕ್ ಜಾಮ್
ಇಂದು ಆರಂಭವಾಗಿರುವ ಸಂಸತ್ತಿನ ಮಾನ್ಸೂನ್ ಅಧಿವೇಶನದಲ್ಲಿ ಸುಪ್ರೀಂ ಕೋರ್ಟ್ (ನ್ಯಾಯಾಧೀಶರ ಸಂಖ್ಯೆ) ತಿದ್ದುಪಡಿ ಮಸೂದೆ-2026 ಸೇರಿದಂತೆ ಹಲವು ಪ್ರಮುಖ ಮಸೂದೆಗಳು ಮಂಡನೆಯಾಗಲಿವೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ, ರಾಮಮಂದಿರ ದೇಣಿಗೆ ಕಳ್ಳತನ ಸೇರಿದಂತೆ ಹಲವು ಪ್ರಮುಖ ವಿಚಾರಗಳು ಅಧಿವೇಶನದಲ್ಲಿ ಚರ್ಚೆಯಾಗುವ ಸಾಧ್ಯತೆಯಿದೆ. ಇದನ್ನೂ ಓದಿ: ಭಾಗಮಂಡಲ ಮೇಲ್ಸೇತುವೆ ಅಭಿವೃದ್ಧಿಗೆ 3 ಕೋಟಿ ರೂ. ಅನುದಾನ
