ಮಡಿಕೇರಿ: ದೇಶದಾದ್ಯಂತ 27ನೇ ಕಾರ್ಗಿಲ್ ವಿಜಯೋತ್ಸವವನ್ನು (Kargil Vijay Diwas) ಭಕ್ತಿ, ಗೌರವ ಹಾಗೂ ದೇಶಭಕ್ತಿಯ ಸಂಭ್ರಮದೊಂದಿಗೆ ಆಚರಿಸಲಾಯಿತು. ಮಂಜಿನ ನಗರಿ ಮಡಿಕೇರಿಯಲ್ಲೂ ಕಾರ್ಗಿಲ್ ಯುದ್ಧದಲ್ಲಿ ಪ್ರಾಣಾರ್ಪಣೆ ಮಾಡಿದ ಅಮರ ವೀರ ಯೋಧರನ್ನ ಸ್ಮರಿಸಿ ಪುಷ್ಪನಮನ ಸಲ್ಲಿಸಲಾಯಿತು.

ವಿಶ್ವ ಹಿಂದೂ ಪರಿಷತ್ ಹಾಗೂ ಹಿಂದೂ ಜಾಗರಣ ವೇದಿಕೆ ನೇತೃತ್ವದಲ್ಲಿ ಮಡಿಕೇರಿ ನಗರದ ಯುದ್ಧ ಸ್ಮಾರಕದ (Madikeri War Memorial) ಬಳಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾಜಿ ಸೈನಿಕರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿ ವೀರ ಯೋಧರಿಗೆ ಗೌರವ ನಮನ ಸಲ್ಲಿಸಿದರು.
ಕಾರ್ಯಕ್ರಮದ ಅಂಗವಾಗಿ ಕಾರ್ಗಿಲ್ ಯುದ್ಧದಲ್ಲಿ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಯೋಧರ ತ್ಯಾಗ, ಶೌರ್ಯ ಮತ್ತು ಬಲಿದಾನವನ್ನ ಸ್ಮರಿಸಲಾಯಿತು. ದೇಶಭಕ್ತಿಯ ಘೋಷಣೆಗಳೊಂದಿಗೆ ಯೋಧರ ಸಾಹಸವನ್ನ ಕೊಂಡಾಡಿದ ಗಣ್ಯರು, ಅವರ ತ್ಯಾಗ ಮತ್ತು ಸೇವೆ ದೇಶದ ಇತಿಹಾಸದಲ್ಲಿ ಸದಾ ಚಿರಸ್ಥಾಯಿಯಾಗಿ ಉಳಿಯಲಿದೆ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದ ಅಂತ್ಯದಲ್ಲಿ ಯುದ್ಧ ಸ್ಮಾರಕದ ಬಳಿ ಮೌನಾಚರಣೆ ನಡೆಸಿ ಅಮರ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಕಾರ್ಗಿಲ್ ವಿಜಯೋತ್ಸವವು ದೇಶರಕ್ಷಣೆಗೆ ಜೀವವನ್ನೇ ಅರ್ಪಿಸಿದ ವೀರ ಯೋಧರ ತ್ಯಾಗವನ್ನು ಸ್ಮರಿಸುವ ದಿನವಾಗಿದ್ದು, ಯುವಜನತೆ ದೇಶಭಕ್ತಿ, ರಾಷ್ಟ್ರಪ್ರೇಮ ಹಾಗೂ ಸೇವಾ ಮನೋಭಾವವನ್ನು ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಕಾರ್ಯಕ್ರಮದಲ್ಲಿ ಕರೆ ನೀಡಲಾಯಿತು.
