ಬೆಂಗಳೂರು: ಮುಂದಿನ ದಿನಗಳಲ್ಲಿ ಹೋಟೆಲ್ಗಳ (Food Safety) ಅಡುಗೆ ಮನೆಯಲ್ಲೂ ಗ್ರಾಹಕರು ನೋಡಬಹುದಾದ ರೀತಿಯಲ್ಲಿ ಕ್ಯಾಮೆರಾ ಅಳವಡಿಸುವ ವ್ಯವಸ್ಥೆ ತರಲು ಚಿಂತನೆ ನಡೆಸಲಾಗುತ್ತಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ (U T Khader) ತಿಳಿಸಿದ್ದಾರೆ.
ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಸಚಿವರು, ಹೋಟೆಲ್ಗಳಲ್ಲಿ ಆಹಾರ ಹೇಗೆ ತಯಾರಾಗುತ್ತಿದೆ, ಸ್ವಚ್ಛತೆ ಕಾಪಾಡಲಾಗುತ್ತಿದೆಯೇ ಎಂಬುದರ ಬಗ್ಗೆ ಗ್ರಾಹಕರಿಗೂ ತಿಳಿಯುವಂತಿರಬೇಕು. ಈ ನಿಟ್ಟಿನಲ್ಲಿ ಮತ್ತಷ್ಟು ಕಾನೂನು ಮತ್ತು ಮಾರ್ಗಸೂಚಿಗಳನ್ನು ತರಲಾಗುವುದು ಎಂದು ತಿಳಿಸಿದ್ದಾರೆ.
ಹೋಟೆಲ್ಗಳಲ್ಲಿ ಗ್ರಾಹಕರಿಗೆ ಉತ್ತಮ ಗುಣಮಟ್ಟದ ಆಹಾರ ನೀಡುವುದು ಎಲ್ಲರ ಜವಾಬ್ದಾರಿ. ಆಹಾರದ ಗುಣಮಟ್ಟದಲ್ಲಿ ಯಾವುದೇ ಲೋಪ ಕಂಡುಬಂದರೆ ಹೋಟೆಲ್ಗಳ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ನಗರದ ಹಲವು ದೊಡ್ಡ ಹೋಟೆಲ್ಗಳ ಮೇಲೆ ದಾಳಿ ನಡೆಸಿ ಆಹಾರ ಪದಾರ್ಥಗಳ ಸ್ಯಾಂಪಲ್ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಲ್ಯಾಬ್ನಿಂದ ವರದಿ ಬಂದ ಬಳಿಕ ನಿಯಮ ಉಲ್ಲಂಘಿಸಿರುವ ಹೋಟೆಲ್ಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.
ನಿಯಮ ಪಾಲನೆ ಮಾಡದ ಹೋಟೆಲ್ಗಳ ವಿರುದ್ಧ ಮೊದಲ ಹಂತದಲ್ಲಿ ನೋಟಿಸ್ ನೀಡಲಾಗುವುದು. ಇದರ ಬಳಿಕವೂ ನಿಯಮ ಉಲ್ಲಂಘನೆ ಮುಂದುವರಿದರೆ ಹೋಟೆಲ್ಗಳನ್ನು ಮುಲಾಜಿಲ್ಲದೆ ಬಂದ್ ಮಾಡಿಸಲಾಗುವುದು ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: ಶಿವಗಂಗೆ ಬೆಟ್ಟದಲ್ಲಿ ಟೆಕ್ಕಿ ನಾಪತ್ತೆ – ಲ್ಯಾಪ್ಟಾಪ್ನಲ್ಲಿ ಶಾಂತಲಾ ಡ್ರಾಪ್ ಪಾಯಿಂಟ್ ಸರ್ಚ್!
ಅಧಿಕಾರಿಗಳು ಯಾವುದೇ ಪ್ರಭಾವಕ್ಕೆ ಒಳಗಾಗದೆ ಕೆಲಸ ಮಾಡಬೇಕು ಎಂದು ಸೂಚಿಸಿರುವುದಾಗಿ ಅವರು ಹೇಳಿದ್ದಾರೆ. ಗ್ರಾಹಕರಿಗೆ ಮೋಸ ಮಾಡುವ ಹೋಟೆಲ್ಗಳನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಆಹಾರದ ಗುಣಮಟ್ಟ ಮತ್ತು ಸ್ವಚ್ಛತೆ ವಿಚಾರದಲ್ಲಿ ಹೋಟೆಲ್ಗಳು ಎಚ್ಚರಿಕೆ ವಹಿಸಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಆರೋಗ್ಯ ಇಲಾಖೆಯ ಕ್ರಮ ಎದುರಿಸಬೇಕಾಗುತ್ತದೆ ಎಂಬ ಸಂದೇಶವನ್ನು ನೀಡಿದ್ದಾರೆ. ಇದನ್ನೂ ಓದಿ: ಆರೈಕೆ ಮಾಡಲಾಗದೇ 50 ದಿನದ ಹಸುಗೂಸು ಕೊಂದ ನೀಚ ತಾಯಿ – ಅಪ್ಪ, ಅಮ್ಮ, ಸಹೋದರ ಸಾಥ್, ನಾಲ್ವರು ಅರೆಸ್ಟ್

