ನವದೆಹಲಿ: ದೇಶಾದ್ಯಂತ ಇಂದು 80ನೇ ಸ್ವಾಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದರು. ಸತತ 13ನೇ ಬಾರಿಗೆ ಧ್ವಜಾರೋಹಣ ನೆರವೇರಿಸಿ ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡಿದರು.

ಪ್ರಧಾನಿ ಮೋದಿ ಧ್ವಜಾರೋಹಣ ನೆರವೇರಿಸುತ್ತಿದ್ದಂತೆ ರಾಷ್ಟ್ರಗೀತೆಯನ್ನು ನುಡಿಸಲಾಯಿತು. ಬಳಿಕ 21 ಗನ್ ಸಲ್ಯೂಟ್ ನೆರವೇರಿಸಲಾಯಿತು. ಇದೇ ವೇಳೆ ವಾಯುಸೇನಾ ಹೆಲಿಕಾಪ್ಟರ್ ಮೂಲಕ ಪುಷ್ಪವೃಷ್ಠಿಯನ್ನೂ ಮಾಡಲಾಯಿತು.
Addressing the nation on Independence Day.https://t.co/Q67F6cB96x
— Narendra Modi (@narendramodi) August 15, 2026
ಇದಕ್ಕೂ ಮುನ್ನ ರಾಜ್ಘಾಟ್ನಲ್ಲಿರುವ ಮಹಾತ್ಮ ಗಾಂಧೀಜಿ ಅವರ ಸ್ಮಾರಕಕ್ಕೆ ಗೌರವ ಪುಷ್ಪನಮನ ಸಲ್ಲಿಸಿದ ಬಳಿಕ ಕೆಂಪುಕೋಟೆಗೆ ಆಗಮಿಸಿದ ಪ್ರಧಾನಿ ಮೋದಿಯವರನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಕ್ಷಣಾ ಖಾತೆ ರಾಜ್ಯ ಸಚಿವ ಸಂಜಯ್ ಸೇಠ್ ಹಾಗೂ ರಕ್ಷಣಾ ಕಾರ್ಯದರ್ಶಿ ರಾಜೇಶ್ ಕುಮಾರ್ ಸಿಂಗ್ ಸ್ವಾಗತ ಕೋರಿ ಬರಮಾಡಿಕೊಂಡರು. ಬಳಿಕ ರಕ್ಷಣಾ ಕಾರ್ಯದರ್ಶಿಯವರು ದೆಹಲಿ ಪ್ರದೇಶದ ಜನರಲ್ ಆಫೀಸರ್ ಕಮಾಂಡಿಂಗ್ (GoC) ಲೆಫ್ಟಿನೆಂಟ್ ಜನರಲ್ ರಾಜೇಶ್ ಸೇಥಿ ಅವರನ್ನು ಪ್ರಧಾನಿಗೆ ಪರಿಚಯಿಸಿದರು
ಪ್ರಧಾನಿ ಮೋದಿಗೆ ಗಾರ್ಡ್ ಆಫ್ ಆನರ್ ಗೌರವ
ಪ್ರಧಾನಿ ಮೋದಿ ಅವರು ಕೆಂಪುಕೋಟೆಗೆ ಆಗಮಿಸುತ್ತಿದ್ದಂತೆ ಗಾರ್ಡ್ ಆಫ್ ಆನರ್ ಗೌರವ ಸಲ್ಲಿಸಲಾಯಿತು. ಧ್ವಜಾರೋಹಣಕ್ಕೂ ಮುನ್ನ ದೆಹಲಿಯ ಕೆಂಪುಕೋಟೆಯಲ್ಲಿ ಇದೇ ಮೊದಲ ಬಾರಿಗೆ ವಂದೇ ಮಾತರಂ ಗೀತೆಯನ್ನ ನುಡಿಸಲಾಯಿತು. ವಂದೇ ಮಾತರಂ ಗೀತೆಗೆ 150ನೇ ವರ್ಷಾಚರಣೆ ಹಿನ್ನೆಲೆ ರಾಷ್ಟ್ರಗೀತೆಗೂ ಮುನ್ನ ವಂದೇ ಮಾತರಂ ನುಡಿಸಲಾಯಿತು.

5,000 ಕ್ಕೂ ಹೆಚ್ಚು ವಿಶೇಷ ಅತಿಥಿಗಳು
ಕೆಂಪುಕೋಟೆಯಲ್ಲಿ ನಡೆಯುತ್ತಿರುವ ಸಮಾರಂಭವನ್ನು ಕಣ್ತುಂಬಿಕೊಳ್ಳಲು ದೇಶದ ವಿವಿಧ ಕ್ಷೇತ್ರಗಳನ್ನು ಪ್ರತಿನಿಧಿಸುವ ಸುಮಾರು 5,000 ವಿಶೇಷ ಅತಿಥಿಗಳನ್ನು ಆಹ್ವಾನಿಸಲಾಗಿದೆ. ಯುವ ಆವಿಷ್ಕಾರಕರು, ‘ಮೈ ಭಾರತ್’ ಸ್ವಯಂಸೇವಕರು, ವಿವಿಧ ಕ್ಷೇತ್ರಗಳ ಇಂಟರ್ನ್ಗಳು, ರಸಪ್ರಶ್ನೆ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳು, ಸ್ವಚ್ಛತಾ ಕಾರ್ಮಿಕರು, ಬೀದಿ ವ್ಯಾಪಾರಿಗಳು ಹಾಗೂ ಸಾಂಪ್ರದಾಯಿಕ ಕರಕುಶಲ ಕ್ಷೇತ್ರದ ಪಿಎಂ ವಿಶ್ವಕರ್ಮಾ ಯೋಜನೆ ಫಲಾನುಭವಿಗಳು ಸೇರಿದಂತೆ ಹಲವು ವರ್ಗದ ಜನರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.
