ಕಾಡ್ಗಿಚ್ಚಿನಲ್ಲಿ ಸಿಲುಕಿದ 20ಕ್ಕೂ ಅಧಿಕ ವಿದ್ಯಾರ್ಥಿಗಳಲ್ಲಿ 15 ಮಂದಿಯ ರಕ್ಷಣೆ, ಕೆಲವರು ಮಿಸ್ಸಿಂಗ್

Public TV
1 Min Read

ಚೆನ್ನೈ: ತರಬೇತಿಗೆ ತೆರಳಿದ್ದ 20ಕ್ಕೂ ಅಧಿಕ ವಿದ್ಯಾರ್ಥಿಗಳು ಕಾಡ್ಗಿಚ್ಚಿನಲ್ಲಿ ಸಿಲುಕಿಕೊಂಡಿದ್ದು, ಅದರಲ್ಲಿ 15 ಮಂದಿಯನ್ನು ರಕ್ಷಿಸಲಾಗಿದೆ.

ಈ ಘಟನೆ ದಕ್ಷಿಣ ತಮಿಳುನಾಡಿನ ಥೇಣಿ ಜಿಲ್ಲೆಯ ಕುರಂಗಣಿ ಅರಣ್ಯ ಪ್ರದೇಶದಲ್ಲಿ ಭಾನುವಾರ ಈ ಘಟನೆ ನಡೆದಿದೆ. ಘಟನೆಯಲ್ಲಿ 15 ಮಂದಿ ವಿದ್ಯಾರ್ಥಿಗಳನ್ನು ಈಗಾಗಲೇ ರಕ್ಷಿಸಲಾಗಿದ್ದು, ವಿದ್ಯಾರ್ಥಿಗಳ ಪತ್ತೆಗೆ ಅಗ್ನಿಶಾಮಕದಳ ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ ಅಂತ ಅಧಿಕಾರಿಗಳು ತಿಳಿಸಿದ್ದಾರೆ.

ತಮಿಳುನಾಡು ಮುಖ್ಯಮಂತ್ರಿ ಪಳನೀಸ್ವಾಮೀ ಅವರು ರಕ್ಷಣಾ ಕಾರ್ಯಕ್ಕೆ ಸಹಾಯ ಮಾಡುವಂತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರಲ್ಲಿ ಈಗಾಗಲೇ ಮನವಿಮಾಡಿಕೊಂಡಿದ್ದಾರೆ. ಅಲ್ಲದೇ ಜಿಲ್ಲಾಧಿಕಾರಿಯ ಜೊತೆ ಕೂಡ ನಿರಂತರ ಸಂಪರ್ಕ ಹೊಂದಿದ್ದು, ಮಾಹಿತಿಯನ್ನು ಪಡೆಯುತ್ತಿದ್ದಾರೆ. ಸುಮಾರು 10-15 ವಿದ್ಯಾರ್ಥಿಗಳನ್ನು ರಕ್ಷಿಸಲಾಗಿದ್ದು, ಕಾರ್ಯಾಚರಣೆ ಮುಂದುವರೆದಿದೆ ಅಂತ ಜಿಲ್ಲಾಧಿಕಾರಿ ತಿಳಿಸಿರುವುದಾಗಿ ವರದಿಯಾಗಿದೆ.

ಈ ಕುರಿತು ಸರಣಿ ಟ್ವೀಟ್ ಮಾಡುತ್ತಿರುವ ರಕ್ಷಣಾ ಸಚಿವೆ, ರಕ್ಷಣಾ ಕಾರ್ಯಕ್ಕಾಗಿ 2 ಹೆಲಿಕಾಪ್ಟರ್ ಗಳನ್ನು ಕಳುಹಿಸಲಾಗಿದೆ ಎಂಬುದಾಗಿ ತಿಳಿಸಿದ್ದಾರೆ. ಘಟನಾ ಸ್ಥಳದಲ್ಲಿ ವೈದ್ಯರ ತಂಡಗಳನ್ನು ನಿಯೋಜಿಸಲಾಗಿದ್ದು, ಅವರು ಕೂಡ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.

ಕೊಯಂಬುತ್ತೂರು ಹಾಗೂ ಈರೋಡ್ ವಿದ್ಯಾರ್ಥಿಗಳು ತರಬೇತಿಗಾಗಿ ಅರಣ್ಯ ಪ್ರದೇಶಕ್ಕೆ ತೆರಳಿದ್ದರು. ಮಧ್ಯಾಹ್ನದ ಬಳಿಕ ಏಕಾಏಕಿ ಅರಣ್ಯಕ್ಕೆ ಬೆಂಕಿ ಬಿದ್ದಿದೆ. ಪರಿಣಾಮ ವಿದ್ಯಾರ್ಥಿಗಳು ಸಿಲುಕಿಕೊಂಡಿದ್ದಾರೆ ಅಂತ ಪೊಲೀಸರು ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *