ರಾಮನಗರ: ನಾನೇನು ಇಷ್ಟ ಬಂದ ಕಡೆ ಸ್ಪರ್ಧೆ ಮಾಡಲು ಕುಮಾರಸ್ವಾಮಿ ಅಲ್ಲ ಎಂದು ಚನ್ನಪಟ್ಟಣ ಶಾಸಕ ಸಿ.ಪಿ ಯೋಗೇಶ್ವರ್ ಹೇಳಿದ್ದಾರೆ.
ರಾಮನಗರದ ಹೊರವಲಯದಲ್ಲಿರುವ ಖಾಸಗಿ ಹೋಟೆಲ್ ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಬಾರಿ ಚನ್ನಪಟ್ಟಣದಲ್ಲಿ ಯಾರೇ ಸ್ಪರ್ಧಿಸಿದರೂ ಅವರ ವಿರುದ್ಧ ಸ್ಪರ್ಧೆ ಮಾಡುತ್ತೇನೆ. ಕುಮಾರಸ್ವಾಮಿಯವರದ್ದು ಸ್ವಂತ ಪಕ್ಷ, 224 ಕ್ಷೇತ್ರಗಳಲ್ಲೂ ಸಹ ಅವರೇ ಸ್ಪರ್ಧೆ ಮಾಡಬಹುದು ಎಂದು ವಾಗ್ದಾಳಿ ನಡೆಸಿದ್ದಾರೆ.
ನನಗೆ ಎರಡು ಮೂರು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುವ ಆಸೆ ಇಲ್ಲ, ಒಂದೇ ಕ್ಷೇತ್ರ ಸಾಕು. ನಮ್ಮದು ರಾಷ್ಟ್ರೀಯ ಪಕ್ಷವಾಗಿದ್ದು ಹಲವು ನೀತಿ, ನಿಬಂಧನೆಗಳಿವೆ. ಕಳೆದ ಬಾರಿ ಲೋಕಸಭೆ ಚುನಾವಣೆಯಲ್ಲಿ ಎಚ್ಡಿಕೆ ವಿರುದ್ಧ ಸ್ಪರ್ಧಿಸಿದ್ದೇನೆ. ಅಲ್ಲದೇ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅನಿತಾ ಕುಮಾರಸ್ವಾಮಿ ವಿರುದ್ಧ ಸ್ಪರ್ಧೆ ಮಾಡಿದ್ದೆ. ಈ ಬಾರಿ ಯಾರೇ ಬರಲಿ ನಾನು ಸ್ಪರ್ಧೆ ಮಾಡುತ್ತೇನೆ ಎಂದರು.
ಚನ್ನಪಟ್ಟಣದಲ್ಲಿ ಕಳೆದ 20 ವರ್ಷಗಳಿಂದ ಕೂಲಿ ಮಾಡಿಕೊಂಡು ಬಂದಿದ್ದೇನೆ. ಜನ ನನ್ನನ್ನು ಎಲ್ಲಾ ಸಾರ್ವತ್ರಿಕ ಚುನಾವಣೆಗಳಲ್ಲೂ ಆರ್ಶೀವಾದ ಮಾಡಿಕೊಂಡು ಬಂದಿದ್ದಾರೆ. ಈ ಬಾರಿಯೂ ಕ್ಷೇತ್ರದ ಜನ ನನ್ನನ್ನು ಬೆಂಬಲಿಸಲಿದ್ದಾರೆ ಎಂದು ತಿಳಿಸಿದರು.