ಹಾವೇರಿ: ಜಮೀನಿನಲ್ಲಿಯೇ ಅನಾಥವಾಗಿ ನರಳಾಡುತ್ತಿದ್ದ ವೃದ್ಧೆಯನ್ನ ಕಂಡು ಸ್ಥಳೀಯರು ಆಸ್ಪತ್ರೆಗೆ ಸಾಗಿಸಿರುವ ಘಟನೆ ಹಾವೇರಿ ನಗರದ ಹೊರವಲಯದಲ್ಲಿರುವ ಹಗ್ಗೇರಿ ಕೆರೆಯ ಬಳಿ ನಡೆದಿದೆ.
ದ್ಯಾಮವ್ವ ಗೌಳಿ(98) ನರಳಾಡುತ್ತಿದ್ದ ವೃದ್ಧೆ. ಇವರು ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಶಿಂಗಟಾಲೂರು ಗ್ರಾಮದ ನಿವಾಸಿ ಎನ್ನಲಾಗಿದೆ. ನಗರದ ಜಮೀನಿನಲ್ಲಿ ದ್ಯಾಮವ್ವ ನರಳಾಡುತ್ತಾ ಬಿದ್ದಿದ್ದರು. ಇದನ್ನು ಗಮನಿಸಿದ ಸ್ಥಳೀಯರು ಕೂಡಲೇ ಆಂಬುಲೆನ್ಸ್ ಗೆ ಕರೆ ಮಾಡಿದ್ದಾರೆ.
ತಕ್ಷಣವೇ ಸ್ಥಳಕ್ಕೆ ದೌಡಾಯಿಸಿದ ಆಂಬುಲೆನ್ಸ್ ಸಿಬ್ಬಂದಿ ಜಮೀನಿನಲ್ಲಿ ವೃದ್ಧೆಗೆ ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ. ಬಳಿಕ ಅಸ್ವಸ್ಥ ವೃದ್ಧೆಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ್ದಾರೆ. ಸದ್ಯ ವೃದ್ಧೆಯ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದೆ ಅಂತ ವೈದ್ಯರು ತಿಳಿಸಿದ್ದಾರೆ.
ವೃದ್ಧೆಯನ್ನ ಸಂಬಂಧಿಕರೇ ಬಿಟ್ಟು ಹೋಗಿರುವ ಶಂಕೆಯನ್ನ ಸ್ಥಳೀಯರು ವ್ಯಕ್ತಪಡಿಸಿದ್ದು, ಮಕ್ಕಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಘಟನೆ ಹಾವೇರಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.