ಲೋಕಸಭಾ ಚುನಾವಣೆಗೆ `ಕೈ’ಯಿಂದ ಭಾರೀ ಸಿದ್ಧತೆ- ಮಾಜಿ ಸಚಿವ ಎಂ.ಬಿ ಪಾಟೀಲ್‍ಗೆ ಡಬಲ್ ಧಮಾಕಾ!

Public TV
1 Min Read
M B Patil congress

ಬೆಂಗಳೂರು: ಲೋಕಸಭಾ ಚುನಾವಣೆ ಉದ್ದೇಶದಿಂದ ಪ್ರಾದೇಶಿಕ ಅಸಮತೋಲನ ಸರಿಪಡಿಸಲು ಕಾಂಗ್ರೆಸ್ ಹೈಕಮಾಂಡ್ ಮುಂದಾಗಿದ್ದು, ಉತ್ತರ ಕರ್ನಾಟಕ ನಾಯಕರಿಗೆ ಕೆಪಿಸಿಸಿ ಪಟ್ಟ ಕಟ್ಟಲು ಸಿದ್ಧತೆ ನಡೆಸಿದೆ.

ಸದ್ಯ ಸಂಪುಟದಲ್ಲಿ ಹೆಚ್ಚಾಗಿ ದಕ್ಷಿಣ ಕರ್ನಾಟಕದ ಸಚಿವರೇ ಇದ್ದಾರೆ. ಹೀಗಾಗಿ ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ಉತ್ತರ ಕರ್ನಾಟಕದ ಶಾಸಕರಿಗೆ ನೀಡುವ ಸುಳಿವನ್ನು ಹೈಕಮಾಂಡ್ ಬಿಟ್ಟುಕೊಟ್ಟಿದೆ. ಅಲ್ಲದೇ ಲೋಕಸಭೆ ಚುನಾವಣೆಗೆ ಭಾರೀ ಸಿದ್ಧತೆ ನಡೆಸಿರುವ ಕಾಂಗ್ರೆಸ್ ಈ ಯೋಜನೆಗೆ ಮುಂದಾಗಿದೆ ಎನ್ನಲಾಗುತ್ತಿದೆ.

M.B PATIL

ಕೆಪಿಸಿಸಿ ಅಧ್ಯಕ್ಷ ಸ್ಥಾನ ಯಾರಿಗೆ?
ಉತ್ತರ ಕರ್ನಾಟಕಕ್ಕೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಗಲಿದೆ ಎಂಬುದಾಗಿ ತಿಳಿದು ಬಂದಿದ್ದು, ಅಧ್ಯಕ್ಷ ಸ್ಥಾನದ ಪಟ್ಟಿಯಲ್ಲಿ ಶಾಸಕ ಎಂ.ಬಿ.ಪಾಟೀಲ್, ಎಸ್.ಆರ್.ಪಾಟೀಲ್, ಅಪ್ಪಾಜ್ಜಿ ನಾಡಗೌಡ ಹೆಸರು ಕೇಳಿ ಬರುತ್ತಿದೆ. ರಾಮನಗರ ಉಪಚುನಾವಣೆ ಬಳಿಕ ಕೆಪಿಸಿಸಿ ಅಧ್ಯಕ್ಷ ಸ್ಥಾನ ಭರ್ತಿ ಮಾಡಲು ಚಿಂತನೆ ನಡೆಸಲಾಗಿದ್ದು, ರಾಜ್ಯ ನಾಯಕರಿಂದ ಅಭಿಪ್ರಾಯ ಸಂಗ್ರಹಿಸವಂತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ ವೇಣುಗೋಪಾಲ್ ಅವರಿಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸೂಚನೆ ನೀಡಿದ್ದಾರಂತೆ. ಆದರೆ ಇತ್ತ ಅಧ್ಯಕ್ಷ ಸ್ಥಾನದ ಪ್ರಬಲ ಆಕಾಂಕ್ಷಿಗಳಾಗಿದ್ದ ಶಾಸಕ ದಿನೇಶ್ ಗುಂಡೂರಾವ್, ಮುನಿಯಪ್ಪ ಹಾಗೂ ಬಿ.ಕೆ ಹರಿಪ್ರಸಾದ್ ಅವರಿಗೆ ನಿರಾಶೆ ಕಾಡುತ್ತಿದೆ.

ಕೆಲವು ಕಾಂಗ್ರೆಸ್ ಶಾಸಕರು ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟದಿಂದ ಸಚಿವ ಸ್ಥಾನ ವಂಚಿತರಾಗಿದ್ದಾರೆ ಎನ್ನುವ ಆರೋಪ ಕೇಳಿ ಬಂದಿತ್ತು. ಇದನ್ನು ಶಮನ ಮಾಡಲು ಹೈಕಮಾಂಡ್ ಉಳಿದಿರುವ 6 ಸಚಿವ ಸ್ಥಾನದಲ್ಲಿ 2 ಸ್ಥಾನವನ್ನು ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟಗಾರರಿಗೆ ನೀಡಲು ಮುಂದಾಗಿದ್ದು, ಈ ಬೆನ್ನಲ್ಲೆ ಶಾಸಕ ಎಂ.ಬಿ.ಪಾಟೀಲ್ ಅವರಿಗೆ ಮಂತ್ರಿಗಿರಿ ಇಲ್ಲವೇ, ಕೆಪಿಸಿಸಿ ಅಧ್ಯಕ್ಷ ಪಟ್ಟ ದೊರೆಯಲಿದೆ ಎಂದು ಪಕ್ಷ ಮೂಲಗಳಿಂದ ಪಬ್ಲಿಕ್ ಟಿವಿಗೆ ಮಾಹಿತಿ ಲಭಿಸಿದೆ.

Share This Article
Leave a Comment

Leave a Reply

Your email address will not be published. Required fields are marked *