ಹುಬ್ಬಳ್ಳಿ: ವೇತನ ವಿಳಂಬ ನೀತಿ ವಿರೋಧಿಸಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆವರಣದಲ್ಲಿಯೇ ಪಾಲಿಕೆಯ ಗುತ್ತಿಗೆ ಪೌರ ಕಾರ್ಮಿಕರು ಮಲ ಸುರಿದುಕೊಂಡು ಪ್ರತಿಭಟನೆ ಮಾಡಿದ್ದಾರೆ.
ಕಳೆದ ಕೆಲವು ದಿನಗಳಿಂದ ಪಾಲಿಕೆಯ ಗುತ್ತಿಗೆ ಪೌರ ಕಾರ್ಮಿಕರು ನಡೆಸುತ್ತಿರುವ ಪ್ರತಿಭಟನೆ ಗುರುವಾರ ತೀವ್ರ ಸ್ವರೂಪ ಪಡೆದುಕೊಂಡಿತು. ನೇರ ವೇತನ, ವಿವಿಧ ಬೇಡಿಕೆ ಹಾಗೂ ನಾಲ್ಕು ತಿಂಗಳುಗಳಿಂದ ವೇತನ ನೀಡದ ಮಹಾನಗರ ಪಾಲಿಕೆ ಕ್ರಮ ಖಂಡಿಸಿ ಘೋಷಣೆ ಕೂಗಿದರು. ಕೆಲವರು ಪಾಲಿಕೆ ಆವರಣದಲ್ಲಿಯೇ ಮಲ ಸುರಿದುಕೊಂಡು ಪ್ರತಿಭಟನೆ ಮಾಡಿದ ಹಿನ್ನೆಲೆಯಲ್ಲಿ 200 ಜನ ಪ್ರತಿಭಟನಾ ನಿರತರನ್ನು ಹುಬ್ಬಳ್ಳಿ ಪೊಲೀಸರು ವಶಕ್ಕೆ ಪಡೆದರು.
ಇದಕ್ಕೂ ನವನಗರದಲ್ಲಿರುವ ಹುಬ್ಬಳ್ಳಿಯ ಉಪನಗರ ಪೊಲೀಸ್ ಠಾಣೆ ಮುಂದೆ ಪಾಲಿಕೆಯ ಸದಸ್ಯರು ಪಕ್ಷಾತೀತವಾಗಿ ಪ್ರತಿಭಟನೆ ನಡೆಸಿ, ಗುತ್ತಿಗೆ ಕಾರ್ಮಿಕ ಸಂಘದ ಅಧ್ಯಕ್ಷ ವಿಜಯ ಗುಂಟ್ರಾಳ್ನನ್ನು ಬಂಧಿಸುವಂತೆ ಒತ್ತಾಯಿಸಿ, ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದರು.
ವಿಜಯ ಗುಂಟ್ರಾಳ್, ಗುತ್ತಿಗೆ ಕಾರ್ಮಿಕರೊಂದಿಗೆ ಪಾಲಿಕೆ ಸದಸ್ಯರು ಹಾಗೂ ಅಧಿಕಾರಿಗಳಿಗೆ ಅವಾಚ್ಯ ಶಬ್ಧಗಳಿಂದ ನಿಂದನೆ ಮಾಡುತ್ತಿದ್ದಾರೆ. ಜೊತೆಗೆ ಆತನಿಂದ ಕಿರುಕುಳ ಹೆಚ್ಚಾಗಿದೆ. ಹೀಗಾಗಿ ವಿಜಯ್ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪೊಲೀಸ್ ಆಯುಕ್ತರಾದ ಎಂ.ಎನ್.ನಾಗರಾಜ್ ಅವರಿಗೆ ಪಾಲಿಕೆ ಸದಸ್ಯರು ಮನವಿ ಸಲ್ಲಿಸಿದರು.