ಹಾಸನ: ಚಾಲಕನ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದ್ದು, 35 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಜಿಲ್ಲೆಯ ಸಕಲೇಶಪುರದ ಹುಲ್ಲಹಳ್ಳಿ ಬಳಿ ಈ ಅವಘಡ ಸಂಭವಿಸಿದೆ. ಹೊಂಗಡಹಳ್ಳ- ಆನೇಕಲ್ ಮಾರ್ಗದ ಸರ್ಕಾರಿ ಬಸ್ ಇದ್ದಾಗಿದ್ದು, ಈ ಬಸ್ಸಿನಲ್ಲಿ ಸುಮಾರು 35ಕ್ಕೂ ಅಧಿಕ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಬಸ್ ಹುಲ್ಲಹಳ್ಳಿ ಬಳಿ ಬರುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿದೆ. ಆಗ ಚಾಲಕ ಬಸ್ಸನ್ನು ಅಡ್ಡದಿಡ್ಡಿಯಾಗಿ ಚಲಾಯಿಸಿ, ನಂತರ ಮರಕ್ಕೆ ಡಿಕ್ಕಿ ಹೊಡೆದಿದ್ದಾನೆ.
ಚಾಲಕ ಮರಕ್ಕೆ ಡಿಕ್ಕಿ ಹೊಡೆಯದಿದ್ದರೆ ಬಸ್ ಪ್ರಪಾತಕ್ಕೆ ಉರುಳುತ್ತಿತ್ತು. ಆದ್ದರಿಂದ ಚಾಲಕ ಪ್ರಪಾತಕ್ಕೆ ಉರುಳದಂತೆ ತಡೆಯುವ ಸಲುವಾಗಿ ಮರಕ್ಕೆ ಡಿಕ್ಕಿ ಹೊಡೆದಿದ್ದಾನೆ. ಓರ್ವ ಪ್ರಯಾಣಿಕರ ತಲೆಗೆ ಪೆಟ್ಟಾಗಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ ಪ್ರಯಾಣಿಕರಿಗೆ ಯಾವುದೇ ಅಪಾಯ ಸಂಭವಿಸಿಲ್ಲ.
ಡಿಕ್ಕಿ ಹೊಡೆದ ರಭಸಕ್ಕೆ ಬಸ್ ಮುಂಭಾಗ ನಜ್ಜುಗುಜ್ಜಾಗಿದೆ. ಈ ಘಟನೆ ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.