ಚಾಮರಾಜನಗರ/ಆನೇಕಲ್: ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯದಿಂದ ತಮಿಳುನಾಡಿಗೆ ಹೋಗುವ ಎಲ್ಲಾ ವಾಹನಗಳನ್ನು ಪೊಲೀಸರು ಸೋಮವಾರಪೇಟೆ ಹಾಗೂ ಅತ್ತಿಬೆಲೆಯ ಬಳಿ ತಡೆಹಿಡಿದಿದ್ದಾರೆ.
ತಮಿಳುನಾಡು ಮಾಜಿ ಮುಖ್ಯಮಂತ್ರಿ ಕರುಣಾನಿಧಿ ನಿಧನದ ಹಿನ್ನೆಲೆಯಲ್ಲಿ, ಪೊಲೀಸ್ ಇಲಾಖೆ ಮುಂಜಾಗ್ರತ ಕ್ರಮವಾಗಿ ರಾಜ್ಯದಿಂದ ತಮಿಳುನಾಡಿಗೆ ಹೋಗುತ್ತಿದ್ದ ವಾಹನಗಳನ್ನು ತಡೆಹಿಡಿದಿದ್ದಾರೆ. ಅಲ್ಲದೇ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಗಡಿ ಭಾಗದಲ್ಲಿ ಭದ್ರತೆಯನ್ನು ಸಹ ಹೆಚ್ಚಿಸಿದ್ದಾರೆ.
ಕರುಣಾನಿಧಿಯವರ ನಿಧನದಿಂದಾಗಿ ಅಭಿಮಾನಿಗಳು ತಮಿಳುನಾಡಿನ ಹಲವು ಕಡೆ ದಾಳಿ ನಡೆಸುತ್ತಿದ್ದು, ಬಸ್ ಗಳ ಮೇಲೂ ಕಲ್ಲು ತೂರಾಟ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಎಚ್ಚೆತ್ತ ರಾಜ್ಯ ಪೊಲೀಸ್ ಇಲಾಖೆ ತಮಿಳುನಾಡಿಗೆ ತೆರಳುತ್ತಿದ್ದ ಎಲ್ಲಾ ವಾಹನಗಳನ್ನು ತಾತ್ಕಾಲಿಕವಾಗಿ ತಡೆಹಿಡಿದ್ದಾರೆ.
ಗಡಿಭಾಗವಾದ ಅತ್ತಿಬೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದ್ದು, ಗಡಿಯಲ್ಲಿ ಸಂಪೂರ್ಣ ಬಂದ್ ವಾತಾವರಣ ನಿರ್ಮಾಣವಾಗಿದೆ. ತಮಿಳುನಾಡಿನ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಬಸ್ ಸಂಚಾರ ಬಂದ್ ಆಗಿದ್ದು, ಕರ್ನಾಟಕ ವಾಹನಗಳು ತಮಿಳುನಾಡಿಗೆ ಹೋಗದಂತೆ ಹಾಗೂ ತಮಿಳುನಾಡಿನ ವಾಹನಗಳು ಕರ್ನಾಟಕಕ್ಕೆ ಬರದಂತೆ ನಿರ್ಬಂಧ ಪಡಿಸಿ ಗಡಿಭಾಗದಿಂದ ವಾಹನಗಳನ್ನು ಪೊಲೀಸರು ವಾಪಸ್ ಕಳುಹಿಸುತ್ತಿದ್ದಾರೆ.
ತಮಿಳುನಾಡಿನ ಮಾಜಿ ಸಿಎಂ ಮತ್ತು ಡಿಎಂಕೆ ಮುಖ್ಯಸ್ಥ ಎಂ. ಕಲೈನರ್ ಕರುಣಾನಿಧಿ(94) ಅವರು ಉಸಿರಾಟದ ತೊಂದರೆ, ಜ್ವರ ಹಾಗೂ ಮೂತ್ರನಾಳದ ಸೋಂಕಿನಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ಜುಲೈ 22ರ ರಾತ್ರಿ ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಅವರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಜುಲೈ 22ರ ಬಳಿಕ ಕರುಣಾನಿಧಿ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿತ್ತು. ಆದರೆ ಆರೋಗ್ಯದಲ್ಲಿ ಮತ್ತೇ ಏರಿಳಿತ ಕಂಡು ಬಂದ ಹಿನ್ನೆಲೆಯಲ್ಲಿ ಕರುಣಾನಿಧಿ ಅವರನ್ನು ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೇ ಮಂಗಳವಾರ ಸಂಜೆ ವಿಧಿವಶರಾದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews