ಬೆಂಗಳೂರು: ನಗರದ ಹೊರವಲಯದ ದೇವನಹಳ್ಳಿಯ ಬಳಿ ಪೊಲೀಸರು ಸಿನಿಮೀಯ ಶೈಲಿಯಲ್ಲಿ ದರೋಡೆಕೋರರನ್ನು ಚೇಸ್ ಮಾಡಿ, ಗುಂಡು ಹಾರಿಸುವ ಮೂಲಕ ಇಬ್ಬರನ್ನೂ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಉದಯ ಹಾಗೂ ಪವನ್ ಬಂಧಿತ ಆರೋಪಿಗಳಾಗಿದ್ದಾರೆ. ಬುಧವಾರ ಸಂಜೆ ಇಬ್ಬರು ದರೋಡೆಕೋರರ ಖಚಿತ ಮಾಹಿತಿ ಮೇರೆಗೆ ಯಲಹಂಕ ಇನ್ಸ್ ಪೆಕ್ಟರ್ ಮಂಜೇಗೌಡ ನೇತೃತ್ವದ ತಂಡ ದಾಳಿ ನಡೆಸಿದೆ. ಈ ವೇಳೆ ಇಬ್ಬರು ಪೊಲೀಸರನ್ನು ಕಂಡು ಸ್ಥಳದಿಂದ ಪರಾರಿಯಾಗಿದ್ದಾರೆ. ಕೂಡಲೇ ಅವರನ್ನು ಚೇಸ್ ಮಾಡಿದ ಪೊಲೀಸರು, ದೇವನಹಳ್ಳಿ ಸಮೀಪದ ಅಕ್ಕುಪೇಟೆ ಬೊಮ್ಮವಾರ ಮೀಸಲು ಅರಣ್ಯ ಪ್ರದೇಶದಲ್ಲಿ ಹಿಡಿದಿದ್ದಾರೆ.
ತಪ್ಪಿಸಿಕೊಳ್ಳಲು ದರೋಡೆಕೋರರು ಪೊಲೀಸರು ಹಾಗೂ ಅವರ ಕಾರುಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಕೂಡಲೇ ಪೊಲೀಸರು ತಮ್ಮ ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದ್ದಾರೆ. ಇದರಿಂದಾಗಿ ಇಬ್ಬರು ದರೋಡೆಕೋರರ ಕಾಲಿಗೆ ಗುಂಡು ತಗುಲಿದ್ದು, ಅವರನ್ನು ವಶಕ್ಕೆ ಪಡೆದುಕೊಂಡಿದ್ದರು. ಸದ್ಯ ಇಬ್ಬರಿಗೂ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಬಂಧಿತ ಆರೋಪಿಗಳು ಕಳೆದ ಎರಡು ದಿನಗಳ ಹಿಂದೆ ಗಣೇಶ ಹಬ್ಬದ ಚಂದಾ ವಸೂಲಿಮಾಡುತ್ತಿದ್ದ ವೃದ್ಧರೊಬ್ಬರನ್ನು ಸುಲಿಗೆ ಮಾಡಿದ್ದರು. ಈ ಸಂಬಂಧ ಯಲಹಂಕ ಠಾಣೆಯಲ್ಲಿ ದೂರು ದಾಖಲಾಗಿತ್ತು, ಖಚಿತ ಮಾಹಿತಿ ಮೇರೆಗೆ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv