ಚಿಕ್ಕೋಡಿ: ಪಿಒಪಿ ಗಣೇಶ ಮೂರ್ತಿಗಳನ್ನು ವಶಪಡಿಸಿಕೊಳ್ಳಲು ಮುಂದಾದ ಪೌರ ಕಾರ್ಮಿಕರನ್ನು ತಹಶೀಲ್ದಾರ್ ಮುಂದೆಯೇ ತಯಾರಕರು ಹಲ್ಲೆಗೆ ಯತ್ನಿಸಿದ ಘಟನೆ ಬೆಳಗಾವಿ ಜಿಲ್ಲೆ ಅಥಣಿ ಪಟ್ಟಣದಲ್ಲಿ ನಡೆದಿದೆ.
ಅಥಣಿ ಪಟ್ಟಣದಲ್ಲಿ ಪಿಒಪಿ ಗಣೇಶ ಮೂರ್ತಿಯನ್ನು ತಯಾರಿಸುತ್ತಿದ್ದಾರೆ ಎನ್ನುವ ಮಾಹಿತಿ ಪುರಸಭೆ ಅಧಿಕಾರಿಗಳಿಗೆ ಸಿಕ್ಕಿತ್ತು. ಹೀಗಾಗಿ ಇಂದು ತಹಶೀಲ್ದಾರ್ ಎಂ.ಎನ್.ಬಳಿಗಾರ ಅವರು ಪುರಸಭೆಯ ಮುಖ್ಯಾಧಿಕಾರಿ ಹಾಗೂ ಪೌರ ಕಾರ್ಮಿಕರ ನೇತೃತ್ವದಲ್ಲಿ ಅಕ್ರಮವಾಗಿ ಪಿಒಪಿ ಗಣೇಶ ಮೂರ್ತಿ ತಯಾರಿಸುತ್ತಿದ್ದ ಅಡ್ಡೆಯ ಮೇಲೆ ದಾಳಿ ಮಾಡಿದ್ದರು.
ಅಧಿಕಾರಿಗಳ ದಾಳಿಗೆ ಹೆದರಿದ ತಯಾರಕರು, ಎಲ್ಲಿ ತಮ್ಮ ಗಣೇಶ ಮೂರ್ತಿಗಳನ್ನು ವಶಕ್ಕೆ ಪಡೆಯುತ್ತಾರೆ ಎಂದು ತಿಳಿದು ಅಧಿಕಾರಿಗಳ ಜೊತೆಗೆ ಜಗಳಕ್ಕೆ ಇಳಿದಿದ್ದಾರೆ. ಮಾತಿನ ಚಕಮಕಿ ಮುಂದುವರಿದ ಪರಿಣಾಮ ತಯಾರಕರು ಹಾಗೂ ಪೌರಕಾರ್ಮಿಕರು ಕೈ ಕೈ ಮಿಲಾಯಿಸಿದ್ದಾರೆ. ಈ ವೇಳೆ ಗದ್ದಲ ಉಂಟಾಗಿ, ನೂಕಾಟದಲ್ಲಿ ಕೆಲವರು ಕೆಳಗೆ ಬಿದ್ದು ಗಾಯಗೊಂಡಿದ್ದಾರೆ.
ಮಾಹಿತಿ ಗೊತ್ತಾಗುತ್ತಿದ್ದಂತೆ ಸ್ಥಳಕ್ಕೆ ಬಂದ ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ. ಇದಾದ ಬಳಿಕ ಅಥಣಿ ಪುರಸಭೆಯಲ್ಲಿ ಸಭೆ ನಡೆಸಿ ತಿಳುವಳಿಕೆ ಹೇಳಿ, ಪಿಒಪಿ ಮೂರ್ತಿ ಮಾರಾಟ ಮಾಡದಂತೆ ಮನವಿ ಮಾಡಿಕೊಂಡಿದ್ದಾರೆ. ಅಥಣಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv