ದೇಶ ಉಳಿಸಲು ಕಾಂಗ್ರೆಸ್ ಜೊತೆ ಕೈ ಜೋಡಿಸಿದ್ದೇವೆ: ಚಂದ್ರಬಾಬು ನಾಯ್ಡು

Public TV
1 Min Read
CHANDRABABU NAIDU RAHUL GANDI

ನವದೆಹಲಿ: ದೇಶವನ್ನು ಬಿಜೆಪಿಯಿಂದ ಉಳಿಸಲು ಕಾಂಗ್ರೆಸ್ ಜೊತೆ ತೆಲುಗು ದೇಶಂ ಪಕ್ಷ(ಟಿಡಿಪಿ) ಕೈ ಜೋಡಿಸಿದೆ ಎಂದು ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಹೇಳಿದ್ದಾರೆ.

ದೆಹಲಿಯಲ್ಲಿಂದು ಚಂದ್ರಬಾಬು ನಾಯ್ಡು ಸೇರಿದಂತೆ ಟಿಡಿಪಿ ನಾಯಕರು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸಮ್ಮುಖದಲ್ಲಿ ಕಾಂಗ್ರೆಸ್ ಜೊತೆ ಕೈ ಜೋಡಿಸಿದ್ದಾರೆ. ರಾಹುಲ್ ಗಾಂಧಿಯವರೊಂದಿಗೆ ದೀರ್ಘ ಮಾತುಕತೆಯ ಬಳಿಕ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾವೆಲ್ಲಾ ದೇಶವನ್ನು ಉಳಿಸಲು ಒಂದಾಗಿದ್ದೇವೆ. ಪ್ರಜಾಪ್ರಭುತ್ವದ ಉಳಿವಿಗಾಗಿ ನಾವು ನಮ್ಮ ಹಳೆಯದ್ದನ್ನು ಮರೆತು ಒ0ದಾಗಿದ್ದೇನೆ. ಎಲ್ಲಾ ವಿರೋಧ ಪಕ್ಷಗಳು ಒಂದಾಗುತ್ತವೆ ಎಂದು ತಿಳಿಸಿದರು.

ಸದ್ಯದ ಪರಿಸ್ಥಿತಿಯಲ್ಲಿ ದೇಶದ ಎಲ್ಲಾ ಪ್ರತಿಪಕ್ಷಗಳು ಒಂದಾಗಬೇಕಿದೆ. ನಮಗೆ ರಾಹುಲ್ ಗಾಂಧಿಯವರೇ ಪ್ರಮುಖ ನಾಯಕರು. ಹೀಗಾಗಿ ನಾವು ಎಲ್ಲಾ ಪ್ರತಿಪಕ್ಷಗಳನ್ನು ಒಂದುಗೂಡಿಸುವಲ್ಲಿ ಯತ್ನಿಸಬೇಕು. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‍ಡಿಎ ಸರ್ಕಾರವನ್ನು ಸೋಲಿಸಿ, ದೇಶದ ಭವಿಷ್ಯವನ್ನು ಕಾಪಾಡಬೇಕು. ನಾವುಗಳು ಮಹಾಮೈತ್ರಿಯ ಮೂಲಕ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ರಕ್ಷಣೆಗೆ ಬದ್ಧರಾಗಿರಬೇಕೆಂದು ಹೇಳಿದರು.

ಇದೇ ವೇಳೆ ರಾಹುಲ್ ಗಾಂಧಿ ಮಾತನಾಡಿ, ಆಂಧ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ ಪಕ್ಷ ಇಂದು ಕಾಂಗ್ರೆಸ್ ಜೊತೆ ಒಂದಾಗಿದೆ. ಈ ಮೂಲಕ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿ ಸರ್ಕಾರದ ಭ್ರಷ್ಟಾಚಾರ, ರಫೇಲ್ ಡೀಲ್, ನಿರುದ್ಯೋಗ ಹಾಗೂ ವ್ಯವಸಾಯಕ್ಕೆ ಸಂಬಂಧಪಟ್ಟ ಸಮಸ್ಯೆಗಳನ್ನು ಪ್ರಮುಖ ಅಸ್ತ್ರವನ್ನಾಗಿ ಬಳಸಿ ಬಿಜೆಪಿ ಸರ್ಕಾರವನ್ನು ಕಿತ್ತೊಗೆಯುತ್ತೇವೆ. ಮೋದಿ ನೇತೃತ್ವದ ಎನ್‍ಡಿಎ ಸರ್ಕಾರ ಸುಪ್ರೀಂ ಕೋರ್ಟ್, ಸಿಬಿಐ, ಜಾರಿ ನಿರ್ದೇಶನಾಲಯ, ಆರ್ ಬಿಐ ಸೇರಿದಂತೆ ಹಲವು ಸಂಸ್ಥೆಗಳನ್ನು ಹಾಳು ಮಾಡುತ್ತಿದೆ ಎಂದು ದೂರಿದರು.

ಟಿಡಿಪಿ ಕಾಂಗ್ರೆಸ್ ಜೊತೆ ಕೈ ಜೋಡಿಸಿದ್ದೇಕೆ?
ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಹಣಕಾಸು ಬಜೆಟ್ ನಲ್ಲಿ ವಿಶೇಷ ಅನುದಾನ ನೀಡದ ಹಿನ್ನೆಲೆಯಲ್ಲಿ ಎನ್‍ಡಿಎ ಮೈತ್ರಿಕೂಟದಿಂದ ಹೊರ ಬಂದಿತ್ತು. ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ವಿಧಾನಸಭಾ ಚುನಾವಣೆಗಳಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿದ್ದಾರೆ. ಈಗ ಇದನ್ನೂ ಲೋಕಸಭಾ ಚುನಾವಣೆಗೂ ವಿಸ್ತರಿಸಿಕೊಂಡಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Share This Article
Leave a Comment

Leave a Reply

Your email address will not be published. Required fields are marked *